ರಾಣಿಬೆನ್ನೂರು: ಪ್ರತಿ ಮತವು ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಕಳೆದ 10 ವರ್ಷಗಳಿಂದ ದೇಶವನ್ನು ಅಭಿವೃದ್ಧಿ ಪಥದತ್ತ ಮುನ್ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ಮತ ನೀಡಬೇಕು ಎಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಹೇಳಿದರು.
ಕೇಂದ್ರದ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಸಮಾಜದ ಎಲ್ಲ ವರ್ಗಗಳ ಶ್ರೇಯೋಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರಧಾನಮಂತ್ರಿ ಸ್ವನಿಧಿ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ ₹53 ಲಕ್ಷ ಕೋಟಿ ಸಾಲ ನೀಡಿದೆ. ಉಜ್ವಲ ಯೋಜನೆಯಡಿ ₹10 ಕೋಟಿಗೂ ಅಧಿಕ ಕುಟುಂಬಗಳಿಗೆ ಉಚಿತ ಅಡುಗೆ ಅನಿಲ ಸಂಪರ್ಕ ಒದಗಿಸಲಾಗಿದೆ. ರೈಲ್ವೆ ನಿಲ್ದಾಣಗಳನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಿಸುವ ಮೂಲಕ ಕೋಟ್ಯಂತರ ಹಿಂದೂಗಳ ಕನಸು ಸಾಕಾರಗೊಳಿಸಲಾಗಿದೆ. ಆದ್ದರಿಂದ ಎಲ್ಲರೂ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಗುರುತಿಸಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಆಗಿರುವ ಕಾಮಗಾರಿಗಳನ್ನು ಪರಿಗಣಿಸಿ ಪಕ್ಷದ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಪಕ್ಷದ ರಾಜ್ಯ ಉಪಾಧ್ಯಕ್ಷ ಡಾ. ಬಸವರಾಜ ಕೇಲಗಾರ, ಗ್ರಾಮೀಣ ಘಟಕದ ಅಧ್ಯಕ್ಷ ಪರಮೇಶಪ್ಪ ಗೂಳಣ್ಣನವರ, ಶಹರ ಘಟಕದ ಅಧ್ಯಕ್ಷ ರಮೇಶ ಗುತ್ತಲ, ಮಲ್ಲಿಕಾರ್ಜುನ ಅಂಗಡಿ, ನಾಗರಾಜ ಪವಾರ, ಹುಚ್ಚಪ್ಪ ಮೇಡ್ಲೇರಿ, ನಿಂಗರಾಜ ಕೋಡಿಹಳ್ಳಿ, ಮಂಜುನಾಥ ಕಾಟಿ, ಎಂ.ಎಸ್. ಕರೇಗೌಡ್ರ, ವಸಂತ ಪೂಜಾರ, ದೀಪಕ ಹರಪನಹಳ್ಳಿ, ಹನುಮಂತಪ್ಪ ದೇವರಗುಡ್ಡ, ಸೋಮಣ್ಣ ಗೌಡಶಿವಣ್ಣನವರ, ಸಿದ್ದಣ್ಣ ಅತಡಕರ ಮತ್ತಿತರರು ಪಾಲ್ಗೊಂಡಿದ್ದರು.