ಕನ್ನಡಪ್ರಭ ವಾರ್ತೆ ರಾಮನಗರ
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಜಿಲ್ಲಾ ವಕೀಲರ ಸಂಘ, ಶಾಂತ ಜೀವ ಜ್ಯೋತಿ ಹಾಗೂ ಜಿಲ್ಲೆಯ ಎಲ್ಲಾ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ- 2026 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಾನವ ಕಳ್ಳಸಾಗಾಣಿಕೆ ತಡೆ ಕಾರ್ಯವು ಕೇವಲ ಸರ್ಕಾರಿ ನೌಕರರ ಜವಾಬ್ದಾರಿಯಷ್ಟೇ ಅಲ್ಲ. ಅದನ್ನು ಸಮಾಜದ ಪ್ರತಿಯೊಬ್ಬ ನಾಗರಿಕನೂ ಜಾಗೃತರಾಗಿ ಘಟನೆಗಳ ಬಗ್ಗೆ ಸಂಬಂಧಿಸಿದವರಿಗೆ ಮಾಹಿತಿ ನೀಡುವ ಮೂಲಕ ಮಾನವ ಕಳ್ಳ ಸಾಗಾಣಿಕೆ ಪಿಡುಗನ್ನು ನಿರ್ಮೂಲನೆ ಮಾಡಬಹುದು, ಇದಕ್ಕೆ ಎಲ್ಲರೂ ಕೈಜೋಡಿಸಬೇಕು. ಮಾವನ ಕಳ್ಳ ಸಾಗಾಣಿಕೆ ಎಂಬುದು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ ಎಂಬುದಾಗಿದೆ ಎಂದು ಹೇಳಿದರು.ಮಾನವ ಕಳ್ಳಸಾಗಾಣಿಕೆ ತಡೆಗಟ್ಟುವುದು ಕೇವಲ ಒಂದು ಇಲಾಖೆಯ ಜವಾಬ್ದಾರಿಯಲ್ಲ. ಈ ಸಾಮಾಜಿಕ ಪಿಡುಗನ್ನು ಹೋಗಲಾಡಿಸಲು ಎಲ್ಲಾ ಇಲಾಖೆಗಳು ತಮ್ಮ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿಭಾಯಿಸಬೇಕು ಹಾಗೂ ಸಾರ್ವಜನಿಕರು ಮಾನವ ಕಳ್ಳ ಸಾಗಾಣಿಕೆ ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿ, ಮಾನವ ಕಳ್ಳ ಸಾಗಾಣಿಕೆಯಲ್ಲಿರುವವರನ್ನು ಬಿಡುಗಡೆಗೊಳಿಸಲು ಸಹಕರಿಸುವಂತೆ ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮಂಜುನಾಥ್ ಮಾತನಾಡಿ, ಬಲವಂತವಾಗಿ ವಂಚನೆಯ ಮೂಲಕ ಅಥವಾ ಯಾವುದೇ ವ್ಯಕ್ತಿ ಪುರುಷ, ಮಹಿಳೆ ಅಥವಾ ಮಕ್ಕಳನ್ನು ಕರೆದೊಯ್ಯುವುದು, ವರ್ಗಾವಣೆ ಮಾಡುವುದು, ಆಶ್ರಯ ನೀಡುವುದು ಅಥವಾ ಹಣ ನೀಡಿ ಖರೀದಿ, ಮಾರಾಟ ಮಾಡುವುದು ಮಾನವ ಕಳ್ಳಸಾಗಾಣಿಕೆ ಎಂದು ಪರಿಗಣಿಸಲಾಗುತ್ತದೆ ಎಂದರು.
ಮಾನವ ಕಳ್ಳಸಾಗಾಣಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ಸರ್ಕಾರ ಹಲವು ಕಾನೂನುಗಳು ಮತ್ತು ಕ್ರಮಗಳನ್ನು ಜಾರಿಗೆ ತಂದಿದೆ. ಕಳ್ಳಸಾಗಾಣಿಕೆಯನ್ನು ತಡೆಗಟ್ಟುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ ಸಾರ್ವಜನಿಕರು ಹಾಗೂ ವಿವಿಧ ಇಲಾಖೆಗಳು ಸಹ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಗ್ರಾಮ ಮಟ್ಟದಲ್ಲಿ ಜನಸಂಖ್ಯೆಯ ಮಾಹಿತಿ ಸಂಗ್ರಹಿಸಿ ಕಾಣೆಯಾಗಿರುವ ಮಕ್ಕಳು, ಕೂಲಿ ಕೆಲಸ ಮಾಡುತ್ತಿರುವ ಮಕ್ಕಳು, ಶಾಲೆ ಬಿಟ್ಟಿರುವ ಮಕ್ಕಳು, ಬಾಲ್ಯ ವಿವಾಹದ ಅಪಾಯದಲ್ಲಿರುವ ಮಕ್ಕಳು ಹಾಗೂ ಇತರೆ ಶೋಷಣೆಗೆ ಒಳಗಾಗುವ ಸಾಧ್ಯತೆ ಇರುವ ಮಕ್ಕಳ ಮಾಹಿತಿಯನ್ನು ದಾಖಲಿಸಿ ಅವರ ಸುರಕ್ಷತೆ ಮತ್ತು ಸಂರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಂಜುನಾಥ್ ತಿಳಿಸಿದರು.
ಎಎನ್ಎಸ್ಎಸ್ಐಆರ್ಡಿ ಹಾಗೂ ಪಿಆರ್ನ ರಾಜ್ಯ ಸಂಪನ್ಮೂಲ ವ್ಯಕ್ತಿಗಳಾದ ಮೋಹನ್ ಕುಮಾರ್ ಉಪನ್ಯಾಸ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಲಕ್ಷ್ಮೀದೇವಿ ಅವರು ಸ್ವಾಗತಿಸಿ, ಪ್ರತಿಜ್ಞಾ ವಿಧಿ ಬೋಧಿಸಿದರು.
-----
ರಾಮನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ-2026 ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.