ಬಳ್ಳಾರಿ: ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದವರು ಹೊಸದಾಗಿ ನೋಂದಾಯಿಸಿಕೊಳ್ಳಲು ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ. ಯುವ ಮತದಾರರು ಇದರ ಪ್ರಯೋಜನ ಪಡೆದಕೊಳ್ಳಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದರು.
ಮೇ 7ರಂದು ಜರುಗುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬ ಮತದಾರರು ಪಾಲ್ಗೊಂಡು ಹಕ್ಕು ಚಲಾಯಿಸಬೇಕು. ಮತದಾನ ಮಾಡುವುದು ಜವಾಬ್ದಾರಿಯುತ ನಾಗರಿಕರ ಆದ್ಯ ಕರ್ತವ್ಯವಾಗಿದೆ. ಮತದಾನ ಒಂದು ಮೂಲಭೂತ ಹಕ್ಕು. ಮತದಾನ ಪ್ರಕ್ರಿಯೆಯಲ್ಲಿ ಎಲ್ಲ ಮತದಾರರು ಭಾಗವಹಿಸಿ ಮತ ಚಲಾವಣೆ ಮಾಡಿದಾಗ ಮಾತ್ರ ಪ್ರಜಾ ಪ್ರಭುತ್ವದಲ್ಲಿನ ನಮ್ಮ ಹಕ್ಕುಗಳ ಪರವಾಗಿ ಪ್ರಶ್ನಿಸಲು ಅರ್ಹರಾಗಿರುತ್ತೇವೆ ಎಂದರು.
ಜಿಪಂ ಸಿಇಒ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷ ರಾಹುಲ್ ಶರಣಪ್ಪ ಸಂಕನೂರು ಮಾತನಾಡಿ, ಚುನಾವಣೆಗಳು ದೇಶದಲ್ಲಿ ಹಬ್ಬದ ಸಂಭ್ರಮವಾಗಿದ್ದು, ಸುಭದ್ರ ಪ್ರಜಾಪ್ರಭುತ್ವ ನಿರ್ಮಿಸಲು ಅರ್ಹ ಮತದಾರರು ತಪ್ಪದೇ ಮತ ಚಲಾವಣೆ ಮಾಡಬೇಕು ಎಂದು ಮನವಿ ಮಾಡಿದರು. ಎಸ್ಪಿ ರಂಜಿತ್ ಕುಮಾರು ಬಂಡಾರು ಮಾತನಾಡಿದರು. ಬಳಿಕ ಮತದಾನದ ಪ್ರತಿಜ್ಞಾ ವಿಧಿ ಭೋದಿಸಲಾಯಿತು. ಸಾರ್ವಜನಿಕರಲ್ಲಿ ಮತದಾನ ಅರಿವು ಮೂಡಿಸುವ ಸಲುವಾಗಿ ‘ನಾನು ಹೆಮ್ಮೆಯ ಮತದಾರ’ ಎನ್ನುವ ಘೋಷಣೆಯ ಸೆಲ್ಫಿ ಬೂತ್ ಪಾಯಿಂಟ್ ಹಾಕಲಾಗಿತ್ತು. ಇದೇ ವೇಳೆ ಆಯೋಜಿಸಿದ್ದ ಸಹಿ ಸಂಗ್ರಹ ಅಭಿಯಾನದಲ್ಲಿ ‘ನಾನು ಕಡ್ಡಾಯವಾಗಿ ಮತದಾನ ಮಾಡುತ್ತೇನೆ’ ಎಂದು ಎಲ್ಲ ಅಧಿಕಾರಿಗಳು, ಸಾರ್ವಜನಿಕರು ಸಹಿ ಹಾಕಿದರು.ಎಡಿಸಿ ಮೊಹಮ್ಮದ್ ಎನ್.ಝುಬೇರ್, ಸಹಾಯಕ ಆಯುಕ್ತ ಹೇಮಂತ್, ಮಹಾನಗರ ಪಾಲಿಕೆಯ ಆಯುಕ್ತ ಜಿ.ಖಲೀಲ್ ಸಾಬ್, ಬಳ್ಳಾರಿ ತಹಸೀಲ್ದಾರ್ ಗುರುರಾಜ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಬಿ.ಉಮಾದೇವಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.