ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಎಲ್ಲರ ಸಹಕಾರ ಮುಖ್ಯ: ಶಾಸಕ ದಿನೇಶ್ ಗೂಳಿಗೌಡ

KannadaprabhaNewsNetwork |  
Published : Nov 15, 2024, 12:32 AM IST
೧೪ಕೆಎಂಎನ್‌ಡಿ-೩ಮಂಡ್ಯ ಹೊರವಲಯದ ಖಾಸಗಿ ಹೋಟೆಲ್‌ನಲ್ಲಿ ನಡೆದ ಮಾಧ್ಯಮ ಸಮನ್ವಯ ಸಮಿತಿ ಸಭೆ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾತನಾಡಿದರು. | Kannada Prabha

ಸಾರಾಂಶ

ಮಂಡ್ಯ ಆತಿಥ್ಯಕ್ಕೆ ಹೆಸರುವಾಸಿ. ರಾಜ್ಯ, ಹೊರ ರಾಜ್ಯದಿಂದ ಆಗಮಿಸುವ ಸಾಹಿತ್ಯಾಸಕ್ತರು, ಮಾಧ್ಯಮಮಿತ್ರರ ಆತಿಥ್ಯಕ್ಕೆ ಯಾವುದೇ ಕೊರತೆ ಉಂಟಾಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು. ಯಾವುದೇ ರೀತಿಯ ಗೊಂದಲಗಳಿಗೆ ಆಸ್ಪದ ನೀಡಬಾರದು.

ಕನ್ನಡಪ್ರಭ ವಾರ್ತೆ ಮಂಡ್ಯ

ಮಂಡ್ಯದಲ್ಲಿ ಡಿ.೨೦, ೨೧, ೨೨ರಂದು ನಡೆಯಲಿರುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಮ್ಮ ಮನೆಯ ಹಬ್ಬವಾಗಿದ್ದು, ಕುಟುಂಬದವರೊಂದಿಗೆ ಹಬ್ಬ ಆಚರಣೆ ಮಾಡುವಂತೆ ಜಿಲ್ಲೆಯ ಜನರು ಒಟ್ಟಾಗಿ ಕನ್ನಡ ಹಬ್ಬವನ್ನು ಆಚರಿಸುವಂತೆ ವಿಧಾನ ಪರಿಷತ್ ಶಾಸಕ ಮತ್ತು ಮಾಧ್ಯಮ ಸಮನ್ವಯ ಸಮಿತಿ ಅಧ್ಯಕ್ಷ ದಿನೇಶ್ ಗೂಳಿಗೌಡ ತಿಳಿಸಿದರು.

ನಗರದ ಹೊರವಲಯದ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಂಡಿದ್ದ ಸಾಹಿತ್ಯ ಸಮ್ಮೇಳನದ ಮಾಧ್ಯಮ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿ, ಸಮ್ಮೇಳನದ ಯಶಸ್ವಿಗೆ ಮಾಧ್ಯಮದ ಪಾತ್ರ ಬಹಳ ಮುಖ್ಯ. ಸಾಹಿತ್ಯ ಸಮ್ಮೇಳನದ ಕುರಿತು ಮಾಧ್ಯಮದಲ್ಲಿ ವ್ಯಾಪಕ ಪ್ರಚಾರ ನೀಡುವ ಮೂಲಕ ಸಮ್ಮೇಳನದ ಯಶಸ್ವಿಗೆ ಸಹಕರಿಸಬೇಕು ಎಂದರು.

ಮಂಡ್ಯ ಆತಿಥ್ಯಕ್ಕೆ ಹೆಸರುವಾಸಿ. ರಾಜ್ಯ, ಹೊರ ರಾಜ್ಯದಿಂದ ಆಗಮಿಸುವ ಸಾಹಿತ್ಯಾಸಕ್ತರು, ಮಾಧ್ಯಮಮಿತ್ರರ ಆತಿಥ್ಯಕ್ಕೆ ಯಾವುದೇ ಕೊರತೆ ಉಂಟಾಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು. ಯಾವುದೇ ರೀತಿಯ ಗೊಂದಲಗಳಿಗೆ ಆಸ್ಪದ ನೀಡಬಾರದು ಎಂದು ಸೂಚಿಸಿದರು.

ರಾಜ್ಯ, ಜಿಲ್ಲಾ, ತಾಲೂಕು ಹಾಗೂ ಸ್ಥಳೀಯ ಪತ್ರಿಕೆ ಮತ್ತು ಟಿವಿಚಾನೆಲ್‌ಗಳು ಹೆಚ್ಚಿನ ಪ್ರಚಾರ ನೀಡಿ ನುಡಿ ಹಬ್ಬವನ್ನು ಯಶಸ್ವಿಗೊಳಿಸಬೇಕು. ಎನ್‌ಸಿಸಿ, ಸ್ಕೌಟ್ಸ್ ಅಂಡ್ ಗೈಡ್ಸ್ ಹಾಗೂ ಎನ್‌ಜಿಒಗಳಿಂದ ಸ್ವಯಂ ಸೇವಕರನ್ನು ನೇಮಿಸಿಕೊಳ್ಳಬೇಕು. ನಮ್ಮನೆ ಕಾರ್ಯಕ್ರಮದಂತೆ ಕಾರ್ಯನಿರ್ವಹಿಸಬೇಕು. ಮಾಧ್ಯಮ ಸಂಸ್ಥೆಗಳಿಂದ ಸಮ್ಮೇಳನಕ್ಕೆ ಆಗಮಿಸುವವವರಿಗೆ ಸೂಕ್ತ ವಸತಿ ವ್ಯವಸ್ಥೆ, ವಾಹನ, ಊಟ, ತಿಂಡಿ ವ್ಯವಸ್ಥೆ ಆಗಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.

ಸಭೆಯಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಪಿ.ಪ್ರಕಾಶ್, ಜಿಲ್ಲಾ ಕಸಾಪ ಸಂಚಾಲಕರಾದ ಮೀರಾ ಶಿವಲಿಂಗಯ್ಯ, ಉಪವಿಭಾಗಾಧಿಕಾರಿ ಬಿ.ಶಿವಮೂರ್ತಿ, ವಾರ್ತಾಧಿಕಾರಿ ನಿರ್ಮಲಾ ಸೇರಿದಂತೆ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ಸಮ್ಮೇಳನದ ಪ್ರಚಾರ ಕಾರ್ಯ ಆರಂಭ: ಡಾ.ಕುಮಾರ

ಸಾಹಿತ್ಯ ಸಮ್ಮೇಳನದ ಪ್ರಚಾರ ಕಾರ್ಯ ಆರಂಭವಾಗಿದ್ದು ರಾಜ್ಯದ ನಾನಾ ಭಾಗಗಳಲ್ಲಿ ಸಂಚರಿಸುತ್ತಿರುವ ಜ್ಯೋತಿ ರಥವನ್ನು ಅದ್ಧೂರಿಯಾಗಿ ಸ್ವಾಗತಿಸಲಾಗುತ್ತಿದೆ. ಎಲ್ಲೆಡೆ ನಿರೀಕ್ಷೆಗೂ ಮೀರಿ ರಥಕ್ಕೆ ಸ್ವಾಗತ ದೊರೆಯುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಸಾಹಿತ್ಯ ಸಮ್ಮೇಳನದ ಪ್ರಚಾರಕ್ಕೆ ಸಾಕಷ್ಟು ಒತ್ತು ನೀಡಲಾಗುತ್ತಿದೆ. ಪ್ರಚಾರದ ರೂವಾರಿಗಳು ಮಾಧ್ಯಮದವರೇ. ಜನರನ್ನು ತಲುಪಲು ಮಾಧ್ಯಮಗಳ ಸಹಕಾರ ಬಹಳ ಮುಖ್ಯ. ಸಮ್ಮೇಳನದ ಯಶಸ್ವಿಗೆ ಎಲ್ಲರ ಸಲಹೆ ಪಡೆದುಕೊಂಡು ಕಾರ್ಯರೂಪಕ್ಕೆ ತರಲಾಗುವುದು. ರಾಜ್ಯ, ರಾಷ್ಟ್ರದ ನಾನಾ ಭಾಗಗಳಿಂದ ಬರುವವರಿಗೆ ಸಕಲ ವ್ಯವಸ್ಥೆ ಮಾಡಲಾಗುವುದು. ಊಟ, ಪುಸ್ತಕ ಮಳಿಗೆ, ವೇದಿಕೆ ಒಂದೇ ಕಡೆ ಇರುವಂತೆ ಜಾಗ ಗುರುತಿಸಲಾಗಿದೆ. ಎಲ್ಲಾ ಆಯಾಮದಲ್ಲಿ ಚರ್ಚಿಸಿ, ತಾಂತ್ರಿಕ ವರದಿ ಆಧರಿಸಿ ಜಾಗ ಗುರುತಿಸಲಾಗಿದೆ. ಸಂಚಾರ ದಟ್ಟಣೆ ಆಗದಂತೆ ಕ್ರಮ ವಹಿಸಲಾಗುವುದು ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೇವೇಗೌಡರು ನಮ್ಮ ಪಕ್ಷದಲ್ಲಿದ್ದರು - ಹುಷಾರು ಅಶೋಕ್, ನೀನೇ ಸತ್ತು ಹೋಗ್ತೀಯ : ಸಿಎಂ
ವಸುಂಧರಾ ಭೂಪತಿ ಸೇರಿ ಐವರಿಗೆ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ