ಹೊಳೆನರಸೀಪುರ: 12ನೇ ಶತಮಾನದಲ್ಲಿ ಸಾಮಾಜಿಕ ಮತ್ತು ಧಾರ್ಮಿಕ ಅಸಮಾನತೆಯನ್ನು ತೊಡೆದುಹಾಕಲು ಶ್ರಮಿಸಿದ ಮಹಾನ್ ಕ್ರಾಂತಿಕಾರಿ ಬಸವಣ್ಣನವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಂಡಾಗ ಮಾತ್ರ ನಾವು ಅವರಿಗೆ ನಮನ ಸಲ್ಲಿಸಿದಂತಾಗುತ್ತದೆ ಎಂದು ಟಿ. ಮಾಯಿಗೌಡನಹಳ್ಳಿ ಮಠದ ಶ್ರೀ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು.
ನಿವೃತ್ತ ಪ್ರಾಂಶುಪಾಲರು ಹಾಗೂ ಸಾಹಿತಿ ಎಚ್. ಎಸ್. ಪ್ರಭುಶಂಕರ್ ಅವರು ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿ, ಶರಣರ ಉದಾತ್ತ ತತ್ವಗಳ ಅರಿವು ಮತ್ತು ಅನುಷ್ಠಾನಗಳ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಉಂಟು ಮಾಡಲು ಲಿಂಗೈಕ್ಯ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮೀಜಿಯವರು 1986ರಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತನ್ನು ಸ್ಥಾಪಿಸಿದ್ದಾರೆ. ಇಂದಿನ ಸಮಾಜದಲ್ಲಿ ಪ್ರತಿಯೊಬ್ಬರೂ ವಚನಗಳ ಸಾರವನ್ನು ದೈನಂದಿನ ಬದುಕಿನಲ್ಲಿ ಅಳವಡಿಕೊಳ್ಳಬೇಕು ಎಂದು ತಿಳಿಸಿದರು. ತಾಲೂಕು ಕದಳಿ ಮಹಿಳಾ ವೇದಿಕೆ ಅಧ್ಯಕ್ಷರು ಶರಣೆ ಕಾವ್ಯಶ್ರೀ ಕೃಷ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರು ಡಾ. ಚೌಡಯ್ಯ ಕಟ್ನವಾಡಿ ಅಧ್ಯಕ್ಷತೆ ವಹಿಸಿದ್ದರು. ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಎಂ.ಎನ್. ಕುಮಾರಸ್ವಾಮಿ, ಪ್ರಧಾನ ಕಾರ್ಯದರ್ಶಿ ಕಟ್ಟಾಯ ಶಿವಕುಮಾರ್, ಮುಖ್ಯ ಶಿಕ್ಷಕರಾದ ಪಿ. ಸುರೇಶ್ , ತಾಲೂಕು ಪರಿಷತ್ ಅಧ್ಯಕ್ಷರು ಪ್ರಸಾದ್, ಕಾರ್ಯದರ್ಶಿ ರಾಮನಾಥಪುರ ಆರ್.ಕೆ. ಶ್ರೀನಿವಾಸ್, ನಿವೃತ್ತ ಶಿಕ್ಷಕರು ಶಂಕರಪ್ಪ ಹಾಗೂ ಶಿಕ್ಷಕರ ವರ್ಗ ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಪ್ರಾರ್ಥನೆ ಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಪೂಜ್ಯ ರಾಜೇಂದ್ರ ಮಹಾಸ್ವಾಮೀಜಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಪ್ರೌಢಶಾಲಾ ಶಿಕ್ಷಕರಾದ ಲೋಕೇಶ್ ಸ್ವಾಗತ ಕೋರಿದರು. ಉಪನ್ಯಾಸಕ ಪುಟ್ಟಮಾದಪ್ಪ ಆರ್. ಬಿ. ವಂದಿಸಿದರು. ಸೋಮಶೇಖರ್ ವಂದಿಸಿದರು. ಜೆಎಸ್ಎಸ್ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗದ ಅಧ್ಯಾಪಕರು, ಕಚೇರಿ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.