ಗದಗ: ರಸ್ತೆ ಅಪಘಾತಗಳನ್ನು ತಡೆಗಟ್ಟುವುದು, ಅಪಘಾತಗಳ ಪ್ರಮಾಣ ಕಡಿಮೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ. ರಸ್ತೆ ಸುರಕ್ಷತಾ ನಿಯಮಗಳ ಕುರಿತು ಜಾಗೃತಿ ಮೂಡಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ತಿಳಿಸಿದರು.ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ಶುಕ್ರವಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಹೆ- 2026ನ್ನು ಉದ್ಘಾಟಿಸಿ ಮಾತನಾಡಿದರು.
ರಸ್ತೆಗಳಲ್ಲಿ ಅಪಘಾತಗಳು ಸಂಭವಿಸಲು ಜನರಲ್ಲಿ ತಿಳಿವಳಿಕೆ ಇಲ್ಲದಿರುವುದು ಹಾಗೂ ರಸ್ತೆ ಸುರಕ್ಷತಾ ನಿಯಮಗಳ ಉಲ್ಲಂಘನೆ ಮಾಡುವುದೇ ಮುಖ್ಯ ಕಾರಣವಾಗಿದೆ. 18 ವರ್ಷದೊಳಗಿನ ಮಕ್ಕಳು ವಾಹನ ಚಲಾಯಿಸುವುದು ಹಾಗೂ ವಾಹನದ ಇನ್ಸುರೆನ್ಸ್ ಇಲ್ಲದೇ ವಾಹನ ಚಾಲನೆ ಮಾಡುವುದು, ಪೊಲೀಸರ ಕಣ್ತಪ್ಪಿಸಿ ರಸ್ತೆ ಸುರಕ್ಷತಾ ನಿಯಮಗಳ ಉಲ್ಲಂಘನೆಯನ್ನು ಮಾಡುವುದರಿಂದ ರಸ್ತೆ ಅಪಘಾತ ಸಂಭವಿಸಿ ಜನರು ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳುತ್ತಾರೆ. ವೇಗದ ಮಿತಿಗಿಂತ ಅತಿ ವೇಗವಾಗಿ ವಾಹನ ಚಲಾಯಿಸುವುದು, ನಿರ್ಲಕ್ಷ್ಯತೆಯಿಂದ ಚಾಲನೆ ಮಾಡುವುದು, ಮದ್ಯಪಾನ ಅಥವಾ ಅಮಲು ಪದಾರ್ಥಗಳನ್ನು ಸೇವಿಸಿ ಚಾಲನೆ ಮಾಡುವುದು ಕೂಡ ಅಪಘಾತಗಳು ಸಂಭವಿಸಲು ಪ್ರಮುಖ ಕಾರಣಗಳಾಗಿವೆ. ಈ ಕುರಿತು ಶಾಲಾ- ಕಾಲೇಜುಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ರಸ್ತೆ ನಿಯಮಗಳ ಕುರಿತು ತಿಳಿವಳಿಕೆ ನೀಡಬೇಕು ಎಂದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಾಂತೇಶ ಸಜ್ಜನರ ಮಾತನಾಡಿ, ರಸ್ತೆ ಸುರಕ್ಷತೆ ನಿಯಮಗಳ ಕುರಿತು ಶಾಲಾ ಕಾಲೇಜುಗಳಲ್ಲಿ ಅಲ್ಲದೇ ನಮ್ಮ ನೆರೆಹೊರೆಯವರಿಗೂ ಕೂಡ ಜಾಗೃತಿ ಮೂಡಿಸಬೇಕು. ವಾಹನ ಚಾಲನಾ ಸಮಯದಲ್ಲಿ ಹೆಲ್ಮೆಟ್ ಧರಿಸುವುದು ಕಡ್ಡಾಯ. ಯಾರೂ ಈ ಕುರಿತು ನಿರ್ಲಕ್ಷ್ಯ ತೋರಬಾರದು. ರಾಷ್ಟ್ರದ ಅಭಿವೃದ್ಧಿಗಾಗಿ ರಸ್ತೆ ಸುರಕ್ಷತಾ ನಿಯಮ ಪಾಲಿಸಿ ವಾಹನ ಚಲಾಯಿಸಬೇಕು ಎಂದರು.ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆರ್.ಜಿ. ಕಲ್ಲೂರ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರುಡಿ ಮಾತನಾಡಿ, ರಸ್ತೆಯಲ್ಲಿನ ವೇಗ ಮಿತಿಗೊಳಿಸಿ ಅಪಘಾತ ತಪ್ಪಿಸಲು ರಸ್ತೆಗಳಲ್ಲಿ ಹಂಪ್ಸ್ಗಳನ್ನು ನಿರ್ಮಿಸಿರುತ್ತಾರೆ. ಆದರೆ ವಾಹನ ಸವಾರರು ಆ ಹಂಪ್ಗಳನ್ನು ತಪ್ಪಿಸಿ ಬೇರೆ ದಾರಿಯಿಂದ ವಾಹನ ಚಲಾಯಿಸಿ ವಿನಾಕಾರಣ ಅಪಘಾತಗಳು ಸಂಭವಿಸಲು ಅನುವು ಮಾಡುತ್ತಾರೆ. ರಸ್ತೆ ಸುರಕ್ಷತಾ ನಿಯಮಗಳ ಪಾಲನೆ ಎಲ್ಲರಿಗೂ ಬಹಳ ಮುಖ್ಯವಾಗಿದೆ ಎಂದರು.
ಪ್ರಾದೇಶಿಕ ಸಾರಿಗೆ ಅಧಿಕಾರಿ ವಿಶಾಲ ಜಿ.ಪಿ. ಮಾತನಾಡಿದರು. ಈ ಸಂದರ್ಭದಲ್ಲಿ ಶಾಲಾ ಬಸ್ಸುಗಳ ಸುರಕ್ಷತೆ ಮತ್ತು ನಿರ್ವಹಣಾ ಕೈಪಿಡಿ, ರಸ್ತೆ ಸುರಕ್ಷತೆಗೆ ಸಂಬಂಧಿಸಿದ ಪೋಸ್ಟರ್ ಹಾಗೂ ಸ್ಟಿಕರ್ಗಳನ್ನು ಬಿಡುಗಡೆ ಮಾಡಲಾಯಿತು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಮಡ್ಲೂರ, ಮ್ಯಾಕ್ಸಿಕ್ಯಾಬ್ ಅಸೋಸಿಯೇಶನ್ ಅಧ್ಯಕ್ಷ ಸಾಧಿಕ ನರಗುಂದ, ನಾಗರಾಜ ಅಸುಂಡಿ, ಅರುಣ ಕಟ್ಟಿಮನಿ ಸೇರಿದಂತೆ ಶಾಲಾ- ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು ಇದ್ದರು. ಭೂಮಿಕಾ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಎಂ.ಎ. ಯರಗುಡಿ ನಿರೂಪಿಸಿ, ವಂದಿಸಿದರು.