ಧಾರವಾಡ:
ಸಂವಿಧಾನ ಜಾರಿಗೆ ಬಂದು 75 ವರ್ಷಗಳಾದರೂ, ಭಾರತೀಯರಲ್ಲಿ ಇರಬೇಕಾದ ಮಾನಸಿಕ ಸ್ಥಿತಿ ಹಾಗೂ ಪ್ರಜಾಪ್ರಭುತ್ವದ ನಿಜವಾದ ಅರ್ಥವನ್ನು ಪ್ರತಿಯೊಬ್ಬರೂ ಅರ್ಥಮಾಡಿಕೊಳ್ಳಬೇಕಿದೆ. ಡಾ. ಬಿ.ಆರ್. ಅಂಬೇಡ್ಕರ್, ಮಹಾತ್ಮಾ ಗಾಂಧಿ ಮತ್ತು ಜವಾಹರಲಾಲ್ ನೆಹರು ಕಂಡಿದ್ದ ಭಾರತದ ಕನಸು ಹಾಗೂ ನಾವು ಇಂದು ಸಾಗುತ್ತಿರುವ ಹಾದಿಯ ಬಗ್ಗೆ ಚಿಂತನೆ ನಡೆಸಬೇಕಾಗಿದೆ ಎಂದ ಅವರು, ಜಾತಿ-ಭೇದವನ್ನು ಮರೆತು ನಾವೆಲ್ಲ ಭಾರತೀಯರು ಎಂಬ ಭಾವನೆ ಬೆಳೆಸಿಕೊಳ್ಳಬೇಕು. ಸಂವಿಧಾನದ ಪೀಠಿಕೆಯಲ್ಲಿ ಉಲ್ಲೇಖಿಸಿರುವ ಭ್ರಾತೃತ್ವ ಮತ್ತು ಸಮಾನತೆ ನಮ್ಮಲ್ಲಿ ಬೆಳೆಯದಿದ್ದರೆ ಪ್ರಜಾಪ್ರಭುತ್ವಕ್ಕೆ ಅರ್ಥವಿರುವುದಿಲ್ಲ ಎಂದರು.
ಜಿಲ್ಲಾಧಿಕಾರಿ ಸ್ನೇಹಲ್ ಆರ್. ಮಾತನಾಡಿ, ಸರ್ಕಾರ ಯುವಕರಿಗಾಗಿ ಭಾರತ್ ಜೋಡೋ ಯುವ ಸಂಘ ಸ್ಥಾಪನೆ ಸೇರಿ ವಿವಿಧ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿದೆ. ಕಾಲೇಜುಗಳಲ್ಲಿ ಯೂನಿಯನ್ ಚುನಾವಣೆಗಳನ್ನು ಮರು ಪ್ರಾರಂಭಿಸುವ ಕುರಿತು ಸರ್ಕಾರ ಯೋಜನೆಗಳನ್ನು ಪ್ರಾರಂಭಿಸುತ್ತಿದೆ. ಪ್ರಜಾಪ್ರಭುತ್ವದ ಪ್ರಕ್ರಿಯೆ ಕಲಿಯಲು ವಿದ್ಯಾರ್ಥಿಗಳಿಗೆ ಸಂಸತ್ತಿನ ಮಾದರಿ ಅಧಿವೇಶನ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದ್ದು, ತಾಲೂಕು ಮತ್ತು ಶಾಲಾ-ಕಾಲೇಜು ಮಟ್ಟದ ಸ್ಪರ್ಧೆಗಳಿಂದ ಆಯ್ಕೆಯಾದ ಏಳು ಜನ ವಿದ್ಯಾರ್ಥಿಗಳನ್ನು ಜಿಲ್ಲೆಯಿಂದ ರಾಜ್ಯ ಮಟ್ಟಕ್ಕೆ ಕಳುಹಿಸಿಕೊಡಲಾಗುವುದು ಎಂದರು.ಜಿಪಂ ಸಿಇಒ ಭುವನೇಶ್ ಪಾಟೀಲ್ ಮಾತನಾಡಿ, ಪ್ರಜಾಪ್ರಭುತ್ವ ಎಂದರೆ ಜನರಿಂದ, ಜನರಿಗಾಗಿ ಜನರಿಗೋಸ್ಕರ ಇರುವ ಆಡಳಿತ. ನಮ್ಮ ಸಂವಿಧಾನದ ಪೀಠಿಕೆಯು ನಾವು ಭಾರತದ ಪ್ರಜೆಗಳು ಎಂಬ ಸಾಲಿನಿಂದಲೇ ಪ್ರಾರಂಭವಾಗುತ್ತದೆ. ಇದು ಯಾವುದೇ ಒಬ್ಬ ವ್ಯಕ್ತಿಯಿಂದ ಆರಂಭವಾಗುವುದಿಲ್ಲ, ಬದಲಾಗಿ ಭಾರತದ ಸಮಸ್ತ ಜನರಿಂದ ಸಾಗುತ್ತದೆ ಎಂದು ಹೇಳಿದರು.