ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ
ನಿತ್ಯದ ಕೆಲಸಗಳ ನಡುವೆಯೇ ಬಿಡುವಿನ ಸಮಯದಲ್ಲಿ ಕ್ರೀಡೆ, ವ್ಯಾಯಾಮ ಸೇರಿದಂತೆ ವಿವಿಧ ದೈಹಿಕ ಕಸರತ್ತಿನ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮೇಯರ್ ಮುಲ್ಲಂಗಿ ನಂದೀಶ್ ಹೇಳಿದರು.
ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸಹಯೋಗದಲ್ಲಿ ನಗರದ ಜಿಲ್ಲಾ ಕ್ರೀಡಾಂಗಣ ಮೈದಾನದಲ್ಲಿ ಶನಿವಾರ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ಕ್ರೀಡಾ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿ, ದೈಹಿಕ ಹಾಗೂ ಮಾನಸಿಕ ನೆಮ್ಮದಿಗೆ ಕ್ರೀಡಾಕೂಟಗಳು ಹೆಚ್ಚು ಸಹಕಾರಿಯಾಗಿದ್ದು, ಸರ್ಕಾರಿ ನೌಕರರು ಕ್ರೀಡಾ ಚಟುವಟಿಕೆಯನ್ನು ಕೇವಲ ಒಂದು ದಿನಕ್ಕೆ ಸೀಮಿತಗೊಳಿಸಿಕೊಳ್ಳಬಾರದು ಎಂದು ಸಲಹೆ ನೀಡಿದರು.
ಅಬಕಾರಿ ಇಲಾಖೆಯ ಉಪ ಆಯುಕ್ತ ಮಂಜುನಾಥ ಎನ್., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಲ್ಲಾ ರಮೇಶ್ ಬಾಬು, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಂ.ಎ. ಆಸೀಫ್, ಕ್ರೀಡಾ ಇಲಾಖೆಯ ರಾಜ್ಯ ಜಂಟಿ ಕಾರ್ಯದರ್ಶಿ ಎನ್. ರಮೇಶ್, ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಾದ ಹುಚ್ಚೀರಪ್ಪ, ಸಿದ್ದಣ್ಣ ಯಳವಾರ, ಗುಂಡಪ್ಪನವರ ನಾಗರಾಜ, ಎಚ್. ದೊಡ್ಡಬಸಪ್ಪ ಉಪಸ್ಥಿತರಿದ್ದರು.
ಆಕರ್ಷಕ ಪಥಸಂಚಲನ:ಉದ್ಘಾಟನೆಗೂ ಮುನ್ನ ಸಂಡೂರು, ಸಿರುಗುಪ್ಪ, ಕುರುಗೋಡು, ಕಂಪ್ಲಿ ಮತ್ತು ಬಳ್ಳಾರಿ ತಾಲೂಕುಗಳಿಂದ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ನೋಂದಾಯಿಸಿಕೊಂಡಿದ್ದ ನೌಕರರಿಂದ ಕ್ರೀಡಾಧ್ವಜದೊಂದಿಗೆ ಆಕರ್ಷಕ ಪಥಸಂಚಲನ ನಡೆಯಿತು. ಇದೇ ವೇಳೆ ಗಣ್ಯರು ಪಥಸಂಚಲನದಿಂದ ಗೌರವ ವಂದನೆ ಸ್ವೀಕರಿಸಿದರು.
ಬಳಿಕ ಗಣ್ಯರೆಲ್ಲರೂ ಸೇರಿ ಕ್ರೀಡಾ ಧ್ವಜಾರೋಹಣಾ ನೆರವೇರಿಸಿದರು. ಸಮಾರಂಭದಲ್ಲಿ ಹಸಿರುಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಮಂತ್ರಿ ಡಾ. ಬಾಬು ಜಗಜೀವನ್ರಾಮ್ ಅವರ 118ನೇ ಜನ್ಮ ದಿನೋತ್ಸವದ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಗೌರವ ಸಲ್ಲಿಸಿದರು.