ದಾಖಲೆಗಳ ಪರಿಶೀಲನೆ ಬಳಿಕವೇ ಅಗಲೀಕರಣ

KannadaprabhaNewsNetwork |  
Published : Jan 08, 2025, 01:32 AM IST
ಚಿತ್ರದುರ್ಗ ಮೂರನೇ ಪುಟದ ಲೀಡ್  | Kannada Prabha

ಸಾರಾಂಶ

ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ಶಾಸಕ ವೀರೇಂದ್ರ ಪಪ್ಪಿ ಚಿತ್ರದುರ್ಗ ನಗರಸಭೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ವಿಪ ಸದಸ್ಯ ನವೀನ್ ಇದ್ದಾರೆ

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಚಿತ್ರದುರ್ಗ ನಗರದ ರಸ್ತೆ ಅಗಲೀಕರಣ ಕೈಗೆತ್ತಿಕೊಳ್ಳುವ ಮುನ್ನ ದಾಖಲೆಗಳ ಪರಿಶೀಲಿಸಿ ಮುನ್ನಡೆಯುವಂತೆ ಶಾಸಕ ವೀರೇಂದ್ರ ಪಪ್ಪಿ ಅಧಿಕಾರಿಗಳಿಗೆ ತಾಕೀತು ಮಾಡಿದರು.

ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ನಗರಸಭೆಯ ಕಚೇರಿಯಲ್ಲಿ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ದಾಖಲೆಗಳ ಕ್ರೋಢೀಕರಣಕ್ಕೆ ಮೊದಲ ಆದ್ಯತೆ ನೀಡಬೇಕು. ಕಾನೂನು ತೊಡಕುಗಳು ಉಂಟಾಗದಂತೆ ಎಚ್ಚರಿಕೆ ವಹಿಸಿ, ರಸ್ತೆ ಅಗಲೀಕರಣ ಕಾರ್ಯ ಕೈಗೊಳ್ಳುವಂತೆ ಸೂಚಿಸಿದರು.

ರಸ್ತೆ ಅಗಲೀಕರಣಕ್ಕೆ ಎದುರಾಗಿರುವ ಸವಾಲು ಕುರಿತಂತೆ ಕನ್ನಡಪ್ರಭದಲ್ಲಿ ಪ್ರಕಟವಾದ 13 ಸರಣಿಗಳ ಒಟ್ಟಾರೆ ಪ್ರಧಾನ ಅಂಶಗಳನ್ನು ಹರವಿಕೊಂಡು ಚರ್ಚೆಗೆ ಮುಂದಾದ ಶಾಸಕ ವೀರೇಂದ್ರ ಪಪ್ಪಿ ಕಾನೂನು ತೊಡಕುಗಳ ನಿವಾರಿಸಿಕೊಳ್ಳುವಂತೆ ಎಚ್ಚರಿಸಿದರು.

ಮೊದಲ ಹಂತದಲ್ಲಿ ಚಿತ್ರದುರ್ಗ ನಗರದ ಚಳ್ಳಕೆರೆ ವೃತ್ತದಿಂದ ಕನಕ ವೃತ್ತದವರೆಗೆ ರಸ್ತೆಯ ಮಧ್ಯಭಾಗದಿಂದ 21 ಮೀಟರ್ ಅಗಲೀಕರಣ ಕಾರ್ಯ ಕೈಗೊಳ್ಳಲು ಈಗಾಗಲೆ ನಿರ್ಧರಿಸಲಾಗಿದೆ. ಚಿತ್ರದುರ್ಗ ನಗರದ ಅಭಿವೃದ್ಧಿಯ ದೃಷ್ಟಿಯಿಂದ ಈ ಕಾರ್ಯವನ್ನು ಕೈಗೊಳ್ಳುವುದು ಖಚಿತ. ಈ ಕಾರ್ಯದಲ್ಲಿ ಯಾವುದೇ ಕಾನೂನು ತೊಡಕುಗಳು ಅಡ್ಡಿಯಾಗದಂತೆ ನೋಡಿಕೊಳ್ಳಲು, ಪೂರಕವಾದ ಸೂಕ್ತ ದಾಖಲಾತಿಗಳು, ನಕ್ಷೆಗಳ ಮೂಲ ಪ್ರತಿಗಳನ್ನು ಸಂಗ್ರಹಿಸಬೇಕು ಎಂದು ನಗರಸಭೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ದಾಖಲಾತಿಗಳನ್ನು ಸಂಗ್ರಹಿಸಿ, ಶಾಸಕರ ಗಮನಕ್ಕೆ ತರಬೇಕು. ದಾಖಲೆಗಳ ಪರಿಶೀಲನೆ ಬಳಿಕವೇ ಅಗಲೀಕರಣ ಪ್ರಾರಂಭಿಸಬೇಕು. ಈ ಕಾರ್ಯ 15 ದಿನಗಳ ಒಳಗಾಗಿ ಪೂರ್ಣಗೊಳ್ಳಬೇಕು. ಈಗಿನ ಪ್ರಮುಖ ರಸ್ತೆ ಈ ಮೊದಲು ರಾಷ್ಟ್ರೀಯ ಹೆದ್ದಾರಿಯಾಗಿತ್ತು. ಹೀಗಾಗಿ ರಸ್ತೆಗೆ ಸಂಬಂಧಿಸಿದ ದಾಖಲೆ ಹಾಗೂ ನಕ್ಷೆಗಳು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಬಳಿ ಲಭ್ಯವಿರುವ ಸಾಧ್ಯತೆಗಳಿವೆ. ಒಟ್ಟಾರೆಯಾಗಿ ಮೂಲ ದಾಖಲೆಗಳನ್ನು ಸಂಗ್ರಹಿಸಿ, ಪರಿಶೀಲಿಸಿ, ರಸ್ತೆ ಅಗಲೀಕರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವೀರೇಂದ್ರ ಪಪ್ಪಿ ಅವರು ಸೂಚನೆ ನೀಡಿದರು.

ಚಿತ್ರದುರ್ಗ ನಗರದಲ್ಲಿನ ಜನಸಂಖ್ಯೆ, ವಾಹನಗಳ ಸಂಖ್ಯೆ, ಸಂಚಾರ ದಟ್ಟಣೆ, ಮುಖ್ಯ ರಸ್ತೆಯಲ್ಲಿನ ವ್ಯಾಪಾರ ವಹಿವಾಟು, ಸರಕು ವಾಹನಗಳ ನಿಲುಗಡೆ, ಸಂಚಾರ ನಿಯಮಗಳ ಪಾಲನೆ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಚಿತ್ರದುರ್ಗ ನಗರವನ್ನು ಉತ್ತಮವಾಗಿ ಅಭಿವೃದ್ಧಿಪಡಿ, ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿಸುವ ನಿಟ್ಟಿನಲ್ಲಿ ನಗರಸಭೆಯ ಅಧ್ಯಕ್ಷರಾಗಿರುವ ಸುಮಿತಾ ಅವರಿಗೆ ಉತ್ತಮ ಅವಕಾಶವಿದೆ. ಈ ನಿಟ್ಟಿನಲ್ಲಿ ಅವರು ಕೂಡ ರಸ್ತೆ ಅಗಲೀಕರಣ ಕಾರ್ಯಕ್ಕೆ ಕೈಜೋಡಿಸುವಂತೆ ವೀರೇಂದ್ರ ಪಪ್ಪಿ ಅವರು ಮನವಿ ಮಾಡಿದರು.

ಸಭೆಯಲ್ಲಿ ಭಾಗವಹಿಸಿದ್ದ ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ, ಚಿತ್ರದುರ್ಗ ನಗರದ ಅಭಿವೃದ್ಧಿಗೆ ಪೂರಕವಾಗಿ ರಸ್ತೆ ಅಗಲೀಕರಣ ಕಾರ್ಯವನ್ನು ಯಾವುದೇ ಕಾನೂನು ತೊಡಕು ಬಾರದ ರೀತಿಯಲ್ಲಿ ನಿರ್ವಹಿಸಬೇಕು. ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡ ಬಳಿಕವೇ ಅಗಲೀಕರಣ ನಡೆಸುವಂತೆ ಸಲಹೆ ನೀಡಿದರು.

ಈ ವೇಳೆ ಪೌರಾಯುಕ್ತೆ ರೇಣುಕಾ, ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್ ನಾಯಕ್, ಲೋಕೋಪಯೋಗಿ ಇಲಾಖೆ ಎಇಇ ಚಂದ್ರಪ್ಪ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಇಇ ನವೀನ್, ನಗರಸಭೆ ಕಾನೂನು ಸಲಹೆಗಾರ ಉಮೇಶ್, ನಗರಸಭೆ ಎಇಇ ಸತ್ಯನಾರಾಯಣ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ