ಹೃದಯಜ್ಯೋತಿ ತಾಲೂಕು ಆಸ್ಪತ್ರೆಗಳಿಗೂ ವಿಸ್ತರಣೆ

KannadaprabhaNewsNetwork |  
Published : Jan 24, 2025, 12:45 AM IST
23ಕೆಆರ್ ಎಂಎನ್ 5.ಜೆಪಿಜಿರಾಮನಗರ ತಾಲೂಕಿನ ಬಿಡದಿ ಹೋಬಳಿಯ ಮಂಚೇಗೌಡನ ಪಾಳ್ಯದಲ್ಲಿ  ನೂತನ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡದ ಶಿಲಾನ್ಯಾಸವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅನಾವರಣಗೊಳಿಸಿದರು. | Kannada Prabha

ಸಾರಾಂಶ

ರಾಮನಗರ: ಹೃದಯಾಘಾತ ಸಂಭವಿಸಿದ ಸಂದರ್ಭದ ಗೋಲ್ಡನ್ ಹವರ್‌ನಲ್ಲಿ ಜೀವರಕ್ಷಕ ಚುಚ್ಚುಮದ್ದು ನೀಡುವ ಪುನೀತ್ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ರಾಜ್ಯದ ಎಲ್ಲಾ ತಾಲೂಕು ಆಸ್ಪತ್ರೆಗಳಿಗೂ ವಿಸ್ತರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ರಾಮನಗರ: ಹೃದಯಾಘಾತ ಸಂಭವಿಸಿದ ಸಂದರ್ಭದ ಗೋಲ್ಡನ್ ಹವರ್‌ನಲ್ಲಿ ಜೀವರಕ್ಷಕ ಚುಚ್ಚುಮದ್ದು ನೀಡುವ ಪುನೀತ್ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ರಾಜ್ಯದ ಎಲ್ಲಾ ತಾಲೂಕು ಆಸ್ಪತ್ರೆಗಳಿಗೂ ವಿಸ್ತರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ತಾಲೂಕಿನ ಬಿಡದಿ ಹೋಬಳಿಯ ಮಂಚೇಗೌಡನ ಪಾಳ್ಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಸಂಯುಕ್ತಾಶ್ರಯದಲ್ಲಿ ನಿರ್ಮಿಸಿರುವ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪುನೀತ್ ಹೃದಯ ಜ್ಯೋತಿ ಯೋಜನೆ ನೂರಾರು ಜನರ ಬದುಕನ್ನು ಉಳಿಸಿದೆ. ಇದೂವರೆಗೆ 250 ಜನರನ್ನು ರಕ್ಷಿಸಲಾಗಿದೆ. ರಾಜ್ಯದ 74 ತಾಲೂಕು ಆಸ್ಪತ್ರೆಗಳಲ್ಲಿ ಈ ಸೌಲಭ್ಯ ಲಭ್ಯವಿದೆ. ಹೃದಯ ಸ್ತಂಭನವಾದಾಗ ವ್ಯಕ್ತಿಗೆ ಒಂದರಿಂದ ಮೂರು ಗಂಟೆ ಅವಧಿಯೊಳಗೆ ಜೀವರಕ್ಷಕ ಚುಚ್ಚುಮದ್ದು ನೀಡುವ ಈ ಯೋಜನೆಯನ್ನು ರಾಜ್ಯಾದ್ಯಂತ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ವಿಸ್ತರಿಸಲು ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದಾರೆ. ಹಾಗಾಗಿ ಈ ಯೋಜನೆಯನ್ನು ಮುಂಬರುವ ಎರಡು ತಿಂಗಳಲ್ಲಿ ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಹೇಳಿದರು.

ರಾಜ್ಯ ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷಿ ಗೃಹ ಆರೋಗ್ಯ ಯೋಜನೆ ರೂಪಿಸಿದೆ. ಪ್ರತಿಯೊಂದು ಮನೆಗೆ ತೆರಳಿ ಮನೆಯ ಸದಸ್ಯರ ಸಂಪೂರ್ಣ ಆರೋಗ್ಯ ತಪಾಸಣೆ ನಡೆಸಿ ಅವರಲ್ಲಿರುವ ಕಾಯಿಲೆ ಗುರುತಿಸಿ, ಅದನ್ನು ಈ ಯೋಜನೆ ಮೂಲಕ ನಿಯಂತ್ರಿಸಲಾಗುವುದು. ದೃಷ್ಟಿ ದೋಷಕ್ಕೆ ಉಚಿತ ಚಿಕಿತ್ಸೆ ಹಾಗೂ ಉಚಿತ ಕನ್ನಡಕ ವಿತರಿಸುವ ಆಶಾಕಿರಣ ಯೋಜನೆ ಇದೀಗ ಎಂಟು ಜಿಲ್ಲೆಗಳಲ್ಲಿ ಮಾತ್ರ ಲಭ್ಯವಿದ್ದು, ಆ ಯೋಜನೆಯನ್ನು ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲು ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆಯಲಾಗಿದೆ. ಆ ಮೂಲಕ ಕಣ್ಣಿನ ದೋಷವುಳ್ಳವರಿಗೆ ಉಚಿತ ಆಪರೇಷನ್ ನಡೆಸಿ ಉಚಿತ ಕನ್ನಡಕ ವಿತರಿಸಲಾಗುತ್ತಿದೆ ಎಂದರು.

ಈ ವರ್ಷದ ಏಪ್ರಿಲ್ ನಂತರ ಆಶಾ ಕಾರ್ಯಕರ್ತೆಯರಿಗೆ 10 ಸಾವಿರ ರು. ಗೌರವಧನ ನೀಡಲಾಗುವುದು. ರಾಜ್ಯದಲ್ಲಿರುವ ಆರೋಗ್ಯ ಸೇವೆ ಮತ್ತಷ್ಟು ವಿಸ್ತರಿಸಲು ರಾಜ್ಯ ಸರ್ಕಾರ ಯತ್ನಿಸುತ್ತಿದೆ. ವೈದ್ಯರು ಹಾಗೂ ಸಿಬ್ಬಂದಿ ಮೇಲೆ ಇಲಾಖೆ ಅವಲಂಬಿತವಾಗಿದೆ. ವೈದ್ಯರು ಹಾಗೂ ಸಿಬ್ಬಂದಿ ಬದ್ಧತೆಯಿಂದ ಕೆಲಸ ಮಾಡಬೇಕು. ಆಗ ಸಾಕಷ್ಟು ಸಮಸ್ಯೆಗಳು ನೀಗುತ್ತವೆ. ವೈದ್ಯರು ಸಹಾನುಭೂತಿಯಿಂದ ರೋಗಿಗಳನ್ನು ತಪಾಸಣೆ ಮಾಡಬೇಕು. ಉತ್ತಮ ವರ್ತನೆ ತೋರಬೇಕು. ರಾಮನಗರ ಜಿಲ್ಲಾ ಆಸ್ಪತ್ರೆಯಲ್ಲಿರುವ ಸಿಟಿ ಸ್ಕ್ಯಾನಿಂಗ್ ಯಂತ್ರ ದುರಸ್ತಿ ಪಡಿಸಲಾಗುವುದು ಹಾಗೂ ಎಂಆರ್‌ಐ ಯಂತ್ರವನ್ನು ಎರಡು ತಿಂಗಳೊಳಗೆ ಒದಗಿಸಲಾಗುವುದು ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಸಂಸದ ಡಾ. ಮಂಜುನಾಥ್ ಮಾತನಾಡಿ, ಬದಲಾದ ಜೀವನ ಶೈಲಿಯಿಂದ ಸಾಕಷ್ಟು ಕಾಯಿಲೆಗಳು ಬರುತ್ತಿವೆ. ಹೃದಯಾಘಾತ ಕೇವಲ ನಗರ ಪ್ರದೇಶಗಳಿಗಷ್ಟೇ ಅಲ್ಲ ಹಳ್ಳಿಗಳಲ್ಲೂ ಕಂಡು ಬರುತ್ತಿದೆ. ಶ್ರೀಮಂತರಿಂದ ಹಿಡಿದು ಕೂಲಿ ಕಾರ್ಮಿಕರಲ್ಲೂ ಇದು ಕಂಡು ಬರುತ್ತಿದೆ ಎಂದರು.

ರಾಮನಗರ, ಮಾಗಡಿ ಹಾಗೂ ಕನಕಪುರ ತಾಲೂಕು ಆಸ್ಪತ್ರೆಗಳಲ್ಲಿ ಹೃದಯಾಘಾತಕ್ಕೆ ಪ್ರಾಥಮಿಕ ಚಿಕಿತ್ಸೆ ನೀಡುವ ಜೀವರಕ್ಷಕ ಚುಚ್ಚುಮದ್ದು ನೀಡಲಾಗುವುದು. ಈ ಇಂಜೆಕ್ಷನ್ ಹೆಪ್ಪುಗಟ್ಟಿದ ರಕ್ತವನ್ನು ಕರಗಿಸುತ್ತದೆ, 18,000 ರು. ಈ ಇಂಜೆಕ್ಷನ್ ನೀಡಿದಲ್ಲಿ ಹೃದಯಾಘಾತವಾದ ವ್ಯಕ್ತಿ ಮುಂದಿನ ಮೂರು ಗಂಟೆಯೊಳಗೆ ಚಿಕಿತ್ಸೆ ಪಡೆಯಲು ನೆರವಾಗಲಿದೆ ಎಂದು ಹೇಳಿದರು.

ಹೃದಯ ಜ್ಯೋತಿ ಯೋಜನೆಗೆ ಚನ್ನಪಟ್ಟಣ ತಾಲೂಕು ಹೊರತಾಗಿದೆ. ಆರೋಗ್ಯ ಸಚಿವರು ಚನ್ನಪಟ್ಟಣ ತಾಲೂಕು ಆಸ್ಪತ್ರೆಯನ್ನೂ ಸೇರಿಸಬೇಕು. ಜಿಲ್ಲೆಯ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಫಿಜಿಷಿಯನ್ ಅವಶ್ಯಕತೆ ಇದೆ, ಅವರನ್ನು ನೇಮಕ ಮಾಡುವಂತೆ ಕೋರಿದರು.

ಶಾಸಕ ಇಕ್ಬಾಲ್ ಹುಸೇನ್ ಮಾತನಾಡಿ, ಮನುಷ್ಯನಿಗೆ ಆರೋಗ್ಯವೇ ಭಾಗ್ಯ ಈ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿದಿನ ಯೋಗ, ವ್ಯಾಯಾಮದಂತ ಚಟುವಟಿಕೆಗಳನ್ನು ನಿಯಮಿತವಾಗಿ ಮಾಡಬೇಕು. ಜಿಲ್ಲೆಗೆ ಎಂಆರ್‌ಐ ಸ್ಕ್ಯಾನಿಂಗ್ ಯಂತ್ರ ಒದಗಿಸಿಕೊಡುವಂತೆ ಮನವಿ ಮಾಡಿದರು.

ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ಎನ್. ನಟರಾಜ್ ಗಾಣಕಲ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ರಾಜು, ರಾಮನಗರ ತಾಲೂಕು ಅಧ್ಯಕ್ಷ ವಿ.ಎಚ್.ರಾಜು , ಗೋಪಳ್ಳಿ ಗ್ರಾಪಂ ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷ ಶಿವಲಿಂಗಯ್ಯ, ಜಿಪಂ ಸಿಇಒ ದಿಗ್ವಿಜಯ ಬೋಡ್ಕೆ, ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಿರಂಜನ್ ಮತ್ತಿತರರು ಉಪಸ್ಥಿತರಿದ್ದರು.

23ಕೆಆರ್ ಎಂಎನ್ 5.ಜೆಪಿಜಿ

ರಾಮನಗರ ತಾಲೂಕಿನ ಬಿಡದಿ ಹೋಬಳಿಯ ಮಂಚೇಗೌಡನ ಪಾಳ್ಯದಲ್ಲಿ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡದ ಶಿಲಾನ್ಯಾಸವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅನಾವರಣಗೊಳಿಸಿದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ