ಹಾವೇರಿ: ವಿದ್ಯಾರ್ಥಿಗಳ ಓದು ಕೇವಲ ಪಠ್ಯಕ್ರಮಕ್ಕೆ ಸೀಮಿತವಾಗಿರದೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಭಾಗವಹಿಸಿದಾಗ ಉಜ್ವಲ ಭವಿಷ್ಯ ನಿರ್ಮಾಣವಾಗುತ್ತದೆ ಎಂದು ಹಿರಿಯ ಸಾಹಿತಿ ಡಾ. ಸತೀಶ ಕುಲಕರ್ಣಿ ಅಭಿಪ್ರಾಯಪಟ್ಟರು.ನಗರದ ಜಿ.ಎಚ್. ಮಹಾವಿದ್ಯಾಲಯದಲ್ಲಿ ಜರುಗಿದ 2025-26ನೇ ಸಾಲಿನ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಜೀವನದಲ್ಲಿ ಅನೇಕ ತಿರುವುಗಳು ಸಹಜವಾಗಿ ಬರುತ್ತವೆ. ವಿದ್ಯಾರ್ಥಿಗಳು ಅವುಗಳನ್ನು ಸವಾಲಾಗಿ ಸ್ವೀಕರಿಸಿ ಸಾಧನೆಯ ಮೆಟ್ಟಿಲುಗಳನ್ನು ಪರಿಶ್ರಮ, ಶ್ರದ್ಧೆ, ಕ್ರಿಯಾಶೀಲತೆಯ ಮೂಲಕ ಹತ್ತಬೇಕಾಗುತ್ತದೆ. ಕೇವಲ ಅಂಕಪಟ್ಟಿಗೆ ಅಂಟಿಕೊಳ್ಳದೇ ಉತ್ತಮ ಪ್ರಜೆಗಳಾಗಿ ನಿರ್ಮಾಣವಾಗುತ್ತ ಯುವಕರು ಚಿತ್ತ ಹರಿಸಬೇಕಿದೆ ಎಂದರು.ಅಧ್ಯಕ್ಷತೆ ವಹಿಸಿದ್ದ ಕೆಎಲ್ಇ ಸಂಸ್ಥೆಯ ನಿರ್ದೇಶಕ ಎಂ.ಸಿ. ಕೊಳ್ಳಿ ಮಾತನಾಡಿ, ವಿದ್ಯಾರ್ಥಿಗಳ ಹಿತವನ್ನು ಕಾಯುವಲ್ಲಿ ಕೆಎಲ್ಇ ಸಂಸ್ಥೆಯು ತನ್ನ ಬದ್ಧತೆಯನ್ನು ಯಾವತ್ತೂ ಪ್ರದರ್ಶಿಸಿದೆ. ಈ ಹಿನ್ನೆಲೆಯಲ್ಲಿ ಜಿ.ಎಚ್. ಕಾಲೇಜಿನ ವಿದ್ಯಾರ್ಥಿಗಳ ಸಾಧನೆ ನಿಜಕ್ಕೂ ಅಭಿನಂದನೀಯ ಮತ್ತು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಾಲೇಜು ಸ್ಥಾನಿಕ ಆಡಳಿತ ಮಂಡಳಿ ಸದಸ್ಯರಾದ ಜೆ.ಎಸ್. ಅರಣಿ, ಎಸ್.ಎಂ. ಹುರಳಿಕುಪ್ಪಿ, ಕ್ರೀಡಾ ವಿಭಾಗದ ಕಾರ್ಯಾಧ್ಯಕ್ಷ ಡಾ. ಎಸ್. ಆರ್. ನಾಯಕ, ಐಕ್ಯುಎಸಿ ಸಂಯೋಜಕಿ ಪ್ರೊ. ರೂಪಾ ಕೋರೆ, ದೈಹಿಕ ಶಿಕ್ಷಣ ನಿರ್ದೇಶಕಿ ಪೂಜಾ ಎಂ., ವಿದ್ಯಾರ್ಥಿ ಪ್ರತಿನಿಧಿಗಳಾದ ರೂಪಾ ಹಾನಗಲ್ಲ ಉಪಸ್ಥಿತರಿದ್ದರು. ರೇಣುಕ ಮತ್ತು ಕಿರಣ ಪ್ರಾರ್ಥಿಸಿದರು. ಪ್ರಾಚಾರ್ಯ ಪ್ರೊ. ಎಂ.ಎಂ. ಹೊಳ್ಳಿಯವರ ಸ್ವಾಗತಿಸಿದರು. ಸಾಂಸ್ಕೃತಿಕ ವೇದಿಕೆಯ ಸಂಚಾಲಕಿ ಡಾ. ಎಂ. ಪಿ. ಕಣವಿ ವಾರ್ಷಿಕ ವರದಿ ವಾಚನ ಮಾಡಿದರು. ಪ್ರೊ. ಸುಮಂಗಲ ಜಿ. ಎಂ. ಕ್ರೀಡಾ ವರದಿ ಮಂಡಿಸಿದರು. ಪ್ರೊ. ಶ್ರೀದೇವಿ ದೊಡ್ಡಮನಿ ನಿರ್ವಹಿಸಿದರು. ಸಹನಾ ಮೆಣಸಿನಕಾಯಿ ವಂದಿಸಿದರು. ಕಾರ್ಯಕ್ರಮದಲ್ಲಿ ಕಾಲೇಜು ಹಳೆಯ ವಿದ್ಯಾರ್ಥಿ ಸಂಘದ ಪ್ರತಿನಿಧಿಗಳು, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಸಾಂಸ್ಕೃತಿಕ ಮತ್ತು ಕ್ರೀಡಾ ಸಾಧಕರನ್ನು ಸನ್ಮಾನಿಸಲಾಯಿತು.