ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆ, ಮಳವಳ್ಳಿ ಟೌನ್ ಮೆಟ್ರಿಕ್ ಪದವಿ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಲು ಸಚಿವರು ಆತ್ಮೀಯವಾಗಿ ಮಾತುಕತೆ ನಡೆಸಿದರು.
ವಿದ್ಯಾರ್ಥಿಗಳು ನಿಯಮಿತವಾಗಿ ಪಾಠಗಳನ್ನು ಪುನರ್ ಅವಲೋಕನ ಮಾಡಿಕೊಳ್ಳುವುದು, ಸಮಯವನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು ಹಾಗೂ ಶಿಕ್ಷಕರ ಮಾರ್ಗದರ್ಶನವನ್ನು ಅನುಸರಿಸುವುದರಿಂದ ಉತ್ತಮ ಫಲಿತಾಂಶ ಸಾಧಿಸಬಹುದು ಎಂದು ಪ್ರೇರಣೆ ನೀಡಿದರು.ಜೀವನದಲ್ಲಿ ಶಿಕ್ಷಣದ ಮಹತ್ವ ವಿವರಿಸಿ, ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದು ಶಾಲೆಗೆ, ಪೋಷಕರಿಗೆ ಹಾಗೂ ಜಿಲ್ಲೆಗೆ ಕೀರ್ತಿ ತರಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷೆ ವಿದ್ಯಾರ್ಥಿಗಳ ಭವಿಷ್ಯದ ದಾರಿಯನ್ನು ನಿರ್ಧರಿಸುವ ಪ್ರಮುಖ ಹಂತ. ಅದನ್ನು ಸಕಾರಾತ್ಮಕ ಮನೋಭಾವದಿಂದ ಎದುರಿಸಬೇಕು ಎಂದರು.
ಈ ವೇಳೆ ಶಾಸಕ ಕೆ.ಎಂ.ಉದಯ್, ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ, ಜಿಲ್ಲಾಧಿಕಾರಿ ಡಾ. ಕುಮಾರ, ಜಿಪಂ ಸಿಇಒ ಕೆ.ಆರ್. ನಂದಿನಿ, ಎಸ್ಪಿ ವಿ.ಜೆ. ಶೋಭಾರಾಣಿ ಮಕ್ಕಳಿಗೆ ಹಿತವಚನ ನೀಡಿದರು. ಅಲ್ಲದೇ ಜಿಲ್ಲೆಯ ವಿವಿಧ ಭಾಗಗಳಲ್ಲಿನ ಹಲವು ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.
ಬಿ.ಎಂ.ಪಬ್ಲಿಕ್ ಸ್ಕೂಲ್ ನ ಪ್ರಥಮ ವರ್ಷದ ಶಾಲಾ ವಾರ್ಷಿಕೋತ್ಸವಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಶೆಟ್ಟಹಳ್ಳಿ ರಸ್ತೆಯ ಬಿ.ಎಂ.ಪಬ್ಲಿಕ್ ಸ್ಕೂಲ್ನ ಪ್ರಥಮ ವರ್ಷದ ಶಾಲಾ ವಾರ್ಷಿಕೋತ್ಸವವು ಗುರುವಾರ ಅದ್ಧೂರಿಯಾಗಿ ನಡೆಯಿತು.ಕಾರ್ಯಕ್ರಮವನ್ನು ಬಿ.ಎಂ.ಪಬ್ಲಿಕ್ ಸ್ಕೂಲ್ ಕಾರ್ಯದರ್ಶಿ ಎಂ.ರಾಮಕೃಷ್ಣ ಉದ್ಘಾಟಿಸಿ ಮಾತನಾಡಿ, ತಾಲೂಕಿನ ಏಕೈಕ ಸಿಬಿಎಸ್ಇ ಶಾಲೆಯಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳ ಭವಿಷ್ಯ ರೂಪಿಸಲು ರಾಜ್ಯದ ಹಲವೆಡೆಯಿಂದ ನುರಿತ ಶಿಕ್ಷಕರನ್ನು ಕರೆತಂದು ಶಿಕ್ಷಣ ಕೊಡಿಸಲಾಗುತ್ತಿದೆ ಎಂದರು.
ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಭವಿಷ್ಯವನ್ನು ಉತ್ತಮವಾಗಿ ರೂಪಿಸುತ್ತೇವೆ. ಕ್ರೀಡಾಂಗಣ, ಮಕ್ಕಳ ಮನೆ ಸೇರಿದಂತೆ ಸೌಲಭ್ಯಗಳನ್ನು ಒಳಗೊಂಡಂತೆ ಇರುವ ನಮ್ಮ ಶಾಲೆಗೆ ಬೆಳವಣಿಗೆ ಎಲ್ಲರೂ ಸಹಕಾರ ನೀಡಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಶಿಕ್ಷಣ ಸಂಸ್ಥೆಯನ್ನು ಅತ್ಯುತ್ತಮವಾಗಿ ರೂಪಿಸಿದ್ದೇವೆ ಎಂದರು.ಮಕ್ಕಳಿಗೆ ಬಾಲ್ಯದಿಂದಲೇ ಶಿಕ್ಷಣದ ಜೊತೆಗೆ ಗುರು ಹಿರಿಯರನ್ನು ಗೌರವಿಸುವುದನ್ನೂ ಕಲಿಸುವ ನಿಟ್ಟಿನಲ್ಲಿ ಶಿಕ್ಷಕರೊಂದಿಗೆ ಪೋಷಕರು ಸಹಕಾರ ನೀಡಬೇಕು. ನಮ್ಮ ತಾಲೂಕಿನ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದಲೇ ತಂದೆ ತಾಯಿಯ ಹೆಸರಿನಲ್ಲಿ ಸಂಸ್ಥೆ ಆರಂಭಿಸಿದ್ದು, ನರ್ಸರಿಯಿಂದ 10ನೇ ತರಗತಿಯವರೆಗೆ ಶಿಕ್ಷಣ ನೀಡಲಾಗುತ್ತಿದೆ ಎಂದರು.
ಶಾಲೆಯ ಸಿಇಒ ಹನಿಕಾ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳಿಗೆ ಕಲಿಕೆಗೆ ಪೂರಕವಾದ ವಾತಾವರಣ ನಿರ್ಮಾಣ ಮಾಡಲಾಗಿದೆ ಎಂದರು. ಪುಟ್ಟ ಮಕ್ಕಳ ನೃತ್ಯ ನೋಡುಗರ ಗಮನ ಸೆಳೆಯಿತು.ಪ್ರಾಂಶುಪಾಲೆ ಗಾಯಿತ್ರಿ ಜೋಶಿ, ಖಜಾಂಚಿ ಮಧು ಮಾಲತಿ ಪಾಲ್ಗೊಂಡಿದ್ದರು.