ಫಕೃದ್ದೀನ್ ಎಂ.ಎನ್.
ಆಹಾರ ಇಲಾಖೆಯ ಪಡಿತರ ಚೀಟಿ ಅಂಕಿ-ಸಂಖ್ಯೆಗಳನ್ವಯ ತಾಲೂಕಿನಾದ್ಯಂತ ಎಪಿಎಲ್, ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿ ಹೊಂದಿರುವ 31,274 ಕುಟುಂಬಗಳಿವೆ. ಅದರ ಅಂದಾಜಿನಂತೆ ಶೈಕ್ಷಣಿಕ ಹಾಗೂ ಆರ್ಥಿಕ ಗಣತಿ ನಡೆಸಿದಲ್ಲಿ ಇನ್ನೂ ಎರಡು ಸಾವಿರಕ್ಕೂ ಹೆಚ್ಚು ಕುಟುಂಬಗಳು ಸಮೀಕ್ಷೆಗೆ ಒಳಪಡಬೇಕಾಗಿದೆ. ಆದರೆ, ಈಗ ಹೆಸ್ಕಾಂ ಅಳವಡಿಸಿರುವ ಯುಎಚ್ಐಡಿ ಆಧಾರದಲ್ಲಿ ಸಮೀಕ್ಷೆ ನಡೆಸಲಾಗುತ್ತಿದೆ. ಒಂದೇ ಯುಎಚ್ಐಡಿ ನಂಬರಿನಲ್ಲಿ ಕೆಲವೆಡೆ ಮೂರಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿವೆ. ಹಲವೆಡೆ ಗಣತಿದಾರರು ಒಂದೇ ಯುಎಚ್ಐಡಿ ನಂಬರಿನಡಿ ಒಂದು ಕುಟುಂಬದ ಸಮೀಕ್ಷೆ ನಡೆಸಿ, ಉಳಿದೆರಡು ಕುಟುಂಬಗಳನ್ನು ಸಮೀಕ್ಷೆಯಿಂದ ಕೈಬಿಟ್ಟ ಪ್ರಕರಣಗಳು ನಡೆಯುತ್ತಿವೆ. ಅದರಲ್ಲೂ ಹಿಂದುಳಿದ ವರ್ಗಗಳ ಕುಟುಂಬಗಳೇ ಹೆಚ್ಚಾಗಿ ಸಮೀಕ್ಷೆಯಿಂದ ಹೊರಗುಳಿಯುವ ಭೀತಿಯಲ್ಲಿವೆ ಎಂದು ಹೇಳಲಾಗುತ್ತಿದೆ.
ಸಮೀಕ್ಷೆ ಸಂದರ್ಭದಲ್ಲಿ ಮನೆಗಳನ್ನು ಗುರುತಿಸಲು ಹೆಸ್ಕಾಂ ವತಿಯಿಂದ ಯುಎಚ್ಐಡಿ ಸ್ಟಿಕರ್ ಅಂಟಿಸಲಾಗಿದೆ. ಅದರನ್ವಯ ಗಣತಿದಾರರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಯುಎಚ್ಐಡಿ ಇಲ್ಲದ ಕುಟುಂಬಗಳನ್ನು ನೊ-ಯುಎಚ್ಐಡಿ ಎಂದು ಗುರುತಿಸಿ ಗಣತಿ ಮಾಡಲಾಗುತ್ತಿದೆ. ಸರ್ಕಾರ ಇದುವರೆಗೆ 26,400 ಕುಟುಂಬಗಳನ್ನು ಗುರುತಿಸಿ ಸಮೀಕ್ಷೆದಾರರಿಗೆ ಗಣತಿ ಮಾಡಲು ಸೂಚನೆ ನೀಡಿದೆ. ಸಮೀಕ್ಷೆದಾರರು ಈಗಾಗಲೇ ಯುಎಚ್ಐಡಿ ಇಲ್ಲದ ಕುಟುಂಬಗಳನ್ನು ಸೇರಿಸಿ ಒಟ್ಟು 28,519 ಕುಟುಂಬಗಳ ಸಮೀಕ್ಷೆ ಪೂರೈಸಿದ್ದಾರೆ ಎಂದು ಅಧಿಕಾರಿಗಳು ಹೇಳುತ್ತಾರೆ.ಇನ್ನೂ ಶೇ. 10ರಷ್ಟು ಸಮೀಕ್ಷೆ ಬಾಕಿ ಇರುವುದಾಗಿ ತಿಳಿದು ಬಂದಿದೆ. ಪಡಿತರ ಚೀಟಿ ಹೊಂದಿರದ ಹಾಗೂ ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರ ಸಂಖ್ಯೆಗಳನ್ನು ಸಮೀಕ್ಷೆ ಸಂದರ್ಭದಲ್ಲಿ ಹೇಗೆ ಗುರುತಿಸುತ್ತಾರೆ ಎಂಬುದು ಪಡಿತರ ಚೀಟಿ ಹೊಂದಿರದ ನಾಗರಿಕರ ಅಳಲಾಗಿದೆ.
ಒಂದೇ ಯುಎಚ್ಐಡಿ ನಂಬರಿನಲ್ಲಿರುವ ಎಲ್ಲ ಕುಟುಂಬಗಳನ್ನು ಗಣತಿಗೆ ಪರಿಗಣಿಸಲಾಗುವುದು. ಒಂದು ವೇಳೆ ಬಿಟ್ಟು ಹೋದಲ್ಲಿ ಆ ಕುಟುಂಬಗಳನ್ನು ನೋ ಯುಎಚ್ಐಡಿ ಎಂದು ಪರಿಗಣಿಸಿ ಪುನಃ ಗಣತಿ ಮಾಡುವಂತೆ ಸಮೀಕ್ಷೆದಾರರಿಗೆ ಸೂಚಿಸಲಾಗುವುದು ಎಂದು ನವಲಗುಂದ ತಹಸೀಲ್ದಾರ್ ಸುಧೀರ ಸಾಹುಕಾರ ಹೇಳಿದರು.
ಜಾತಿ ಗಣತಿ ದಿನದಿಂದ ದಿನಕ್ಕೆ ಗೊಂದಲಮಯವಾಗುತ್ತಿದೆ. ಹಿಂದುಳಿದ ವರ್ಗಗಳ ಆಯೋಗ ಪೂರ್ವ ತಯಾರಿ ಇಲ್ಲದೇ ಯಾರದೋ ಒತ್ತಡಕ್ಕೆ ಮಣಿದು ಆತುರಾತುರವಾಗಿ ಸಮೀಕ್ಷೆ ಮಾಡುತ್ತಿದೆ. ಈ ಸಮೀಕ್ಷೆಯಿಂದ ಹಿಂದುಳಿದ ವರ್ಗಗಳ ಕುಟುಂಬಗಳನ್ನು ಟಾರ್ಗೆಟ್ ಮಾಡಿ ಹೊರಗಿಡಲಾಗುತ್ತಿದೆ ಎಂದು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.