ಎಲ್ಲಾ ಪಕ್ಷಗಳ ಮುಖಂಡರಿಂದ ಕುಟುಂಬ ರಾಜಕಾರಣ: ಮುಖ್ಯಮಂತ್ರಿ ಚಂದ್ರು

KannadaprabhaNewsNetwork |  
Published : Jan 31, 2024, 02:15 AM IST
ಮುಖ್ಯಮಂತ್ರಿ ಚಂದ್ರು | Kannada Prabha

ಸಾರಾಂಶ

ರಾಜ್ಯದಲ್ಲಿ ಚುನಾವಣೆಗಳ ಹೆಸರಿನಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡುತ್ತಾ ಅಧಿಕಾರ ವಿಕೇಂದ್ರೀಕರಣ ತತ್ವ ಮೂಲೆಗುಂಪು ಮಾಡುವ ಕೆಲಸ ಹುನ್ನಾರ ನಡೆಯುತ್ತಿದೆ.

ಕನ್ನಡಪ್ರಭ ವಾರ್ತೆ ಕಲಬುರಗಿ

ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಹೆಚ್ಚಾಗಿದ್ದು, ಅಧಿಕಾರ ವಿಕೇಂದ್ರೀಕರಣಕ್ಕೆ ವಿರುದ್ಧವಾದ ಆಡಳಿತ ಎಲ್ಲೆಡೆ ಕಂಡುಬರುತ್ತಿದೆ. ಈ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ಆಮ್ ಆದ್ಮಿ ಪಕ್ಷದಿಂದ ಮುಂದಿನ ಎರಡು ವರ್ಷಗಳ ಕಾಲ ರಾಜ್ಯಾದ್ಯಂತ ಜನಜಾಗೃತಿಯೊಂದಿಗೆ ಸಂಘಟನೆ ಕಾರ್ಯ ಚುರುಕುಗೊಳಿಸಲಾಗುತ್ತಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಚುನಾವಣೆಗಳ ಹೆಸರಿನಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡುತ್ತಾ ಅಧಿಕಾರ ವಿಕೇಂದ್ರೀಕರಣ ತತ್ವ ಮೂಲೆಗುಂಪು ಮಾಡುವ ಕೆಲಸ ಹುನ್ನಾರ ನಡೆಯುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಎದ್ದು ಕಾಣುತ್ತಿದೆ. ದೇವೇಗೌಡರ ಇಡೀ ಕುಟುಂಬ ರಾಜಕಾರಣದಲ್ಲಿದ್ದರೆ, ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಯಡಿಯೂರಪ್ಪ, ವಿ.ಸೋಮಣ್ಣ ಸೇರಿದಂತೆ ಪ್ರತಿಯೊಬ್ಬರೂ ಕುಟುಂಬ ರಾಜಕಾರಣ ನಡೆಸುತ್ತಿದ್ದಾರೆ. ಹೀಗಾದರೆ, ಪ್ರಜಾಪ್ರಭುತ್ವದ ತತ್ವದಡಿ ಬೇರೆಯವರು ರಾಜಕೀಯಕ್ಕೆ ಬರುವುದು ಹೇಗೆ ಎಂದು ಅವರು ಅಚ್ಚರಿ ವ್ಯಕ್ತಪಡಿಸಿದರು.

ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಜಾರಿಗೆ ತಂದ ಉಚಿತ ಶಿಕ್ಷಣ, ಉಚಿತ ಆರೋಗ್ಯ, ಉಚಿತ ವಿದ್ಯುತ್ ಯೋಜನೆಗಳನ್ನು ಎಲ್ಲರೂ ಟೀಕಿಸಿದ್ದರು. ಇದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2016ರಲ್ಲಿ ಮುಖ್ಯಮಂತ್ರಿ ಆದಾಗ ಹೆಣ್ಣು ಮಕ್ಕಳಿಗೆ ಉಚಿತವಾಗಿ ಬಸ್ ಪ್ರಯಾಣದ ಯೋಜನೆ ಜಾರಿಗೆ ತರಬೇಕಿತ್ತು. ಆಗ ರಾಜ್ಯದಲ್ಲಿ ಬಡವರು ಇರಲಿಲ್ಲವೇ? ಎಂದು ಪ್ರಶ್ನಿಸಿದ ಅವರು, ತಮ್ಮ ಅಧಿಕಾರ ಉಳಿಸಿಕೊಳ್ಳಲು ಈಗ ರಾಜ್ಯದಲ್ಲಿ ಗ್ಯಾರಂಟಿ ಹೆಸರಿನಲ್ಲಿ ಉಚಿತ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಟೀಕಿಸಿದರು.

ಮತ್ತೊಂದೆಡೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ರೈತರ ಸಾಲ ಮನ್ನಾ ಮಾಡುತ್ತಿಲ್ಲ ಮತ್ತೊಂದೆಡೆ, ಅಂಬಾನಿ-ಅದಾನಿ ಅವರಂತಹ ಶ್ರೀಮಂತ ಉದ್ಯಮಿಗಳ 11 ಲಕ್ಷ ಕೋಟಿ ಸಾಲ ಮನ್ನಾ ಮಾಡಿದೆ. ಇಷ್ಟಾದರೂ ಉಚಿತ ಯೋಜನೆಗಳಿಂದ ದೇಶ ದಿವಾಳಿ ಆಗುವ ಸಾಧ್ಯತೆ ಹೆಚ್ಚು ಎಂದು ಪ್ರಧಾನಿ ಮೋದಿ ಆತಂಕ ವ್ಯಕ್ತಪಡಿಸುತ್ತಾರೆ ಎಂದು ಲೇವಡಿ ಮಾಡಿದರು.

ಇಂತಹ ದ್ವಂದ್ವ ನೀತಿಗಳನ್ನು ಅನುಸರಿಸುತ್ತಾ ಸದಾ ತಾವು ಅಧಿಕಾರದಲ್ಲಿರಬೇಕು ಎನ್ನುವ ಮನೋಪ್ರವೃತ್ತಿ ಬಹುತೇಕ ಎಲ್ಲ ರಾಷ್ಟ್ರೀಯ ಪಕ್ಷಗಳ ಮುಖಂಡರಲ್ಲಿದೆ. ಈ ಹಿನ್ನೆಲೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷದಿಂದ ಜಾಗೃತಿ ಕಾರ್ಯಕ್ರಮಗಳನ್ನು ಗ್ರಾಮೀಣ ಹಂತದಿಂದ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಪಕ್ಷದ ಮುಖಂಡ ಪ್ರತಾಪರೆಡ್ಡಿ, ಪಕ್ಷದ ಜಿಲ್ಲಾಧ್ಯಕ್ಷ ಅಶೋಕ ಕುಮಾರ್ ಜಿ. ಮಲಕಪ್ಪಗೋಳ, ರುದ್ರಯ್ಯ ಹಿರೇಮಠ ಸೇರಿದಂತೆ ಇತರರಿದ್ದರು.

ರಾಮನ ಹೆಸರಿನಲ್ಲಿ ‘ಧರ್ಮ’ ರಾಜಕಾರಣ:

ದೇಶದ ಬಡವರ ಬದುಕಿನಲ್ಲಿ ಭದ್ರತೆಯ ಭರವಸೆ ಮೂಡಿಸುವಲ್ಲಿ ವಿಫಲಗೊಂಡಿರುವ ಕೇಂದ್ರ ಸರಕಾರ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸುವ ಮೂಲಕ ಸಾವಿರಾರು ಕೋಟಿ ಖರ್ಚು ಮಾಡಿದೆ. ಇದರಿಂದ ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತಾ ದೇಶದ ಜನರ ದಿಕ್ಕು ತಪ್ಪುವಂತೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಚಂದ್ರು ಬೇಸರ ವ್ಯಕ್ತಪಡಿಸಿದರು.

PREV

Recommended Stories

ರಾಹುಲ್‌ ಗಾಂಧಿ ಧರಣಿಗೆ 4500 ಪೊಲೀಸರ ಭದ್ರತೆ
ಹಳಿತಪ್ಪಿದ ಬೆಂಗಳೂರು ಉಪನಗರ ರೈಲು ಯೋಜನೆ : ಕೆ-ರೈಡ್ ಜತೆಗಿನ ಎಲ್‌ ಆ್ಯಂಡ್‌ ಟಿ ಗುತ್ತಿಗೆ ರದ್ದು