ಬೇಲೂರು: ತಾಲೂಕಿನಲ್ಲಿ ಭಾರೀ ಮಳೆಯ ಅಬ್ಬರಕ್ಕೆ ರೈತರೊಬ್ಬರು ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ ಘಟನೆ ನಡೆದಿದೆ.ತಾಲೂಕಿನ ಚೀಲನಾಯಕನಹಳ್ಳಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ರಸ್ತೆಯ ಮೇಲೆ ವೇಗವಾಗಿ ಹರಿದ ನೀರಿನಲ್ಲಿ ವ್ಯಕ್ತಿಯೊಬ್ಬರು ಕೊಚ್ಚಿ ಹೋದ ಘಟನೆ ಬುಧವಾರ ನಡೆದಿದೆ. ರೈತ ಬಸವರಾಜು (62) ಎಂದಿನಂತೆ ಸಂಜೆ ವೇಳೆ ಊರಿಗೆ ತೆರಳುತ್ತಿದ್ದಾಗ ಮಳೆಯ ತೀವ್ರತೆ ಹೆಚ್ಚಾದ ಹಿನ್ನೆಲೆಯಲ್ಲಿ ಚೀಲನಾಯಕನಹಳ್ಳಿ ಗೇಟ್ ಬಳಿ ಕೂತಿದ್ದರು. ಈ ವೇಳೆ ಆಕಸ್ಮಿಕವಾಗಿ ಹರಿದು ಬಂದ ನೀರಿನ ಪ್ರವಾಹಕ್ಕೆ ಸಿಲುಕಿ ಹೆಚ್ಚು ದೂರ ತೇಲಿ ಹೋಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಕಂಡ ಸ್ಥಳೀಯರು ತಕ್ಷಣ ರಕ್ಷಣಾ ಕಾರ್ಯಕ್ಕೆ ಮುಂದಾದರೂ, ನೀರಿನ ಹರಿವು ಜಾಸ್ತಿಯಾಗಿದ್ದರಿಂದ ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ. ಬಳಿಕ ಮೃತದೇಹವನ್ನು ಹೊರತೆಗೆದು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಘಟನೆ ಗ್ರಾಮದಲ್ಲಿ ಶೋಕ ವಾತಾವರಣ ನಿರ್ಮಾಣವಾಗಿದೆ.ಭಾರೀ ಮಳೆಯ ಸಮಯದಲ್ಲಿ ಜನರು ಎಚ್ಚರಿಕೆಯಿಂದ ಇರಬೇಕು, ನೀರಿನ ಹರಿವು ಇರುವ ಪ್ರದೇಶಗಳ ಬಳಿ ಹೋಗುವುದನ್ನು ತಪ್ಪಿಸಬೇಕು ಎಂದು ಅಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.