ಭೂ ಸ್ವಾಧೀನ ಪ್ರಕ್ರಿಯೆ ರದ್ದಿಗಾಗಿ ರೈತರಿಂದ ಮನವಿ

KannadaprabhaNewsNetwork |  
Published : Apr 20, 2026, 01:15 AM IST
19ಕೆಆರ್ ಎಂಎನ್ 1.ಜೆಪಿಜಿಬೈರಮಂಗಲ ವೃತ್ತದಲ್ಲಿ ರೈತರು ಧರಣಿ ನಡೆಸುತ್ತಿರುವುದು. | Kannada Prabha

ಸಾರಾಂಶ

ಬಿಡದಿ ಸಮಗ್ರ ಉಪನಗರ ಯೋಜನೆಗಾಗಿ ಹೊರಡಿಸಿರುವ ಪ್ರಾಥಮಿಕ ಅಧಿಸೂಚನೆಯನ್ನು ರದ್ದುಪಡಿಸಲು ಹಾಗೂ ಅಂತಿಮ ಅಧಿಸೂಚನೆಗಾಗಿ ನಡೆಸುತ್ತಿರುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಬೈರಮಂಗಲ ,ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿಗಳ ರೈತ ಭೂ ಹಿತರಕ್ಷಣಾ ಸಂಘದ ಪದಾಧಿಕಾರಿಗಳು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಕನ್ನಡಪ್ರಭ ವಾರ್ತೆ ರಾಮನಗರ

ಬಿಡದಿ ಸಮಗ್ರ ಉಪನಗರ ಯೋಜನೆಗಾಗಿ ಹೊರಡಿಸಿರುವ ಪ್ರಾಥಮಿಕ ಅಧಿಸೂಚನೆಯನ್ನು ರದ್ದುಪಡಿಸಲು ಹಾಗೂ ಅಂತಿಮ ಅಧಿಸೂಚನೆಗಾಗಿ ನಡೆಸುತ್ತಿರುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಬೈರಮಂಗಲ ,ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿಗಳ ರೈತ ಭೂ ಹಿತರಕ್ಷಣಾ ಸಂಘದ ಪದಾಧಿಕಾರಿಗಳು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಸಂಘದ ಖಜಾಂಚಿ ಎಂ.ಆರ್. ನಾಗರಾಜು, ನಿರ್ದೇಶಕ ಅಶ್ವತ್ಥ, ಮುಖಂಡ ಬೈರಪ್ಪ ಸೇರಿದಂತೆ ರೈತರು, ನಗರಾಭಿವೃದ್ಧಿ ಇಲಾಖೆ ಮೂಲಕ ಸಚಿವ ಭೈರತಿ ಸುರೇಶ್ ಅವರಿಗೆ ಮನವಿ ಸಲ್ಲಿಸಿ ಕರ್ನಾಟಕ ನಗರಾಭಿವೃದ್ಧಿ ಕಾಯ್ದೆ, 1987ರ ಅಡಿಯಲ್ಲಿ ಬಿಡದಿ ಟೌನ್ ಶಿಪ್ ಯೋಜನೆಗಾಗಿ ಫಲವತ್ತಾದ ಕೃಷಿ ಭೂಮಿಯ ಭೂ ಸ್ವಾಧೀನವನ್ನು ಸಂಪೂರ್ಣವಾಗಿ ಕೈ ಬಿಡಬೇಕು. ರೈತರ ಅಹವಾಲು ಆಲಿಸುವ ಸಭೆ ಕರೆಯಬೇಕೆಂದೆು ಒತ್ತಾಯಿಸಿದರು.

ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಅನುಷ್ಠಾನಗೊಳಿಸುತ್ತಿರುವ ಬಿಡದಿ ಟೌನ್ ಶಿಪ್ ಯೋಜನೆಗಾಗಿ ಭೂ ಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಕಾಯ್ದೆ, 1987ರ ಕಲಂ 17(1)ರಡಿ ಉದ್ದೇಶಿತ ಸಮಗ್ರ ಉಪನಗರ ಯೋಜನೆಗಾಗಿ ಭೂ ಸ್ವಾಧೀನಕ್ಕೆ ಪ್ರಾಥಮಿಕ ಅಧಿಸೂಚನೆಯನ್ನು 2025ರ ಮಾ.12ರಂದು ಪ್ರಕಟಿಸಲಾಗಿದೆ.

ಪ್ರಸ್ತುತ ಯೋಜನೆಗೆ ಗುರುತಿಸಿರುವ ಭೈರಮಂಗಲ ಗ್ರಾಮ ಪಂಚಾತಿಯ 10 ಗ್ರಾಮಗಳು ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿಯ 16 ಗ್ರಾಮಗಳು ಸಂಪೂರ್ಣ ನೀರಾವರಿಯಿಂದ ಕೂಡಿದ ಫಲವತ್ತಾದ ಕೃಷಿ ಭೂಮಿಗಳಾಗಿದ್ದು, ಬಹು ವಾರ್ಷಿಕ ಬೆಳೆಗಳು ಸೇರಿದಂತೆ ಆಹಾರ ಧಾನ್ಯಗಳು, ಹಾಲು, ವಿವಿಧ ರೀತಿಯ ತರಕಾರಿ, ಹಣ್ಣುಗಳನ್ನು ಬೆಳೆಯುತ್ತಿರುವ ಭೂಮಿಗಳಾಗಿವೆ ಎಂದು ತಿಳಿಸಿದ್ದಾರೆ.

ಪ್ರಾಥಮಿಕ ಅಧಿಸೂಚನೆ ಮಾಹಿತಿ ತಿಳಿದ ದಿನದಿಂದಲೇ ಈ ಗ್ರಾಮಗಳ ಎಲ್ಲಾ ರೈತರು ವಿಶೇಷವಾಗಿ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಪೂರ್ಣವಾಗಿ ತಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದು, ಬಿಡದಿ ಹೋಬಳಿ ಭೈರಮಂಗಲ ವೃತ್ತದಲ್ಲಿ ಅನಿರ್ಧಿಷ್ಠ ಅಹೋರಾತ್ರಿ ಧರಣಿ ನಡೆಸುತ್ತಾ ಬಂದಿದ್ದಾರೆ.

ಪ್ರಾಥಮಿಕ ಅಧಿಸೂಚನೆಗೆ ಸುಮಾರು 3500ಕ್ಕೂ ಹೆಚ್ಚು ರೈತ ಕುಟುಂಬಗಳು ಆಕ್ಷೇಪಣೆ ಇದೆ ಎಂದು ಭೂ ಸ್ವಾಧೀನಕ್ಕೆ ತಮ್ಮ ವಿರೋಧವನ್ನು ಲಿಖಿತವಾಗಿ ಸಲ್ಲಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ, ತಹಸೀಲ್ದಾರ್ ಕಚೇರಿ, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಚೇರಿ ಎದುರು ಹಲವಾರು ಪ್ರತಿಭಟನೆಗಳನ್ನು ಬೃಹತ್ ಸಂಖ್ಯೆಯಲ್ಲಿ ನಡೆಸಿ ಅನ್ಯಾಯ ಹಾಗೂ ಬಲವಂತದ ಭೂ ಸ್ವಾಧೀನವನ್ನು ಕೈಬಿಡಬೇಕು. ಅತ್ಯಂತ ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಡಬೇಕು ಎಂದು ಒತ್ತಾಯಿಸಲಾಗಿದೆ ಎಂದಿದ್ದಾರೆ.

ಕಳೆದ 400 ದಿನಗಳಿಂದಲೂ ಶಾಂತಿಯುತವಾಗಿ ನಡೆಸಿರುವ ಪ್ರತಿಭಟನೆಯನ್ನು ಕಡೆಗಣಿಸಿ ಇದುವರೆಗೂ ಸಂಬಂಧಿತ ಗ್ರಾಮಗಳ ಪ್ರತಿಭಟನಾ ರೈತರ ಜೊತೆ ಒಂದೇ ಒಂದು ಸಮಾಲೋಚನೆ ಅಥವಾ ಅಹವಾಲು ಕೇಳುವ ಯಾವುದೇ ಸಭೆ ನಡೆಸದೆ ಏಕ ಪಕ್ಷೀಯವಾಗಿ ಸರ್ವಾಧಿಕಾರಿ ಕ್ರಮಗಳ ಮೂಲಕ ಅಂತಿಮ ಅಧಿಸೂಚನೆಗಾಗಿ ಎಲ್ಲಾ ರೀತಿಯ ತಯಾರಿಗಳನ್ನು ನಡೆಸುತ್ತಿರುವುದು ಮಾಧ್ಯಮಗಳ ಮೂಲಕ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಬಿಡದಿ ಟೌನ್ ಶಿಪ್ ಗಾಗಿ ಭೂ ಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಕೈ ಬಿಡಬೇಕು. ನಗರಾಭಿವೃದ್ಧಿ ಸಚಿವರ ಅಧ್ಯಕ್ಷತೆಯಲ್ಲಿ ರೈತರ ಅಹವಾಲು ಆಲಿಸುವ ಸಭೆಯನ್ನು ನಡೆಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್‌ಐಆರ್‌ ತಿರಸ್ಕರಿಸಲು ಕರೆ
ಸಿದ್ಧಾರ್ಥ ಕೆಪಿಎಲ್‌ ಸೀಸನ್ 2ರ ಉದ್ಘಾಟನೆ