ಸಮಗ್ರ ನೀರಾವರಿ ಯೋಜನೆ ಜಾರಿಗೆ ರೈತ ಸಂಘ ಆಗ್ರಹ

KannadaprabhaNewsNetwork |  
Published : Feb 14, 2026, 01:15 AM IST
ಚಿತ್ರದುರ್ಗ ಮೂರನೇ ಪುಟದ ಲೀಡ್  | Kannada Prabha

ಸಾರಾಂಶ

ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯನ್ನು ಸಮಗ್ರ ನೀರಾವರಿಗೆ ಒಳಪಡಿಸುವಂತೆ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯನ್ನು ಸಮಗ್ರ ನೀರಾವರಿಗೆ ಒಳಪಡಿಸುವಂತೆ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.

ಜಿಲ್ಲೆಯ ಚಳ್ಳಕೆರೆ, ಮೊಳಕಾಲ್ಮುರು, ಹಿರಿಯೂರು, ಹೊಳಲ್ಕೆರೆ ತಾಲೂಕಿನಿಂದ ಕಳೆದ ಎರಡು ದಿನಗಳಿಂದ ಪಾದಯಾತ್ರೆ ಮೂಲಕ ಚಿತ್ರದುರ್ಗಕ್ಕೆ ಆಗಮಿಸಿದ್ದ ಐದುನೂರಕ್ಕೂ ಹೆಚ್ಚು ರೈತ ಸಂಘದ ಕಾರ್ಯಕರ್ತರು ಶುಕ್ರವಾರ ಒನಕೆ ಓಬವ್ವ ಪ್ರತಿಮೆ ಮುಂಭಾಗ ಸಾರ್ವಜನಿಕ ಸಭೆ ನಡೆಸಿ ಅನುದಾನ ಬಿಡುಗಡೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ರೈತ ಸಂಘದ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ದವೀರಪ್ಪ, ಭದ್ರಾ ಮೇಲ್ದಂಡೆ ಕಾಮಗಾರಿ ಕುಂಟುತ್ತಾ ಸಾಗಿದ್ದು ಕೇಂದ್ರ ಹಾಗೂ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡದೆ ಸತಾಯಿಸುತ್ತಿವೆ. ತುಂಗಾ ಜಲಾಶಯದಿಂದ ಭದ್ರಾ ಜಲಾಶಯದವರೆಗೆ ಕಾಮಗಾರಿ ಅರೆ ಬರೆ ಸಾಗಿದೆ. ರಾಜ್ಯ ಸರ್ಕಾರ ತಕ್ಷಣವೇ ಹಣ ಬಿಡುಗಡೆ ಮಾಡಬೇಕು. ಹೊಳಲ್ಕೆರೆ ತಾಲೂಕಿನ ಎಲ್ಲ ಕೆರೆಗಳಿಗೂ ಯೋಜನೆಯಡಿ ನೀರು ಭರ್ತಿ ಮಾಡಬೇಕೆಂದು ಆಗ್ರಹಿಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ ಮಾತನಾಡಿ, ಕಳೆದ ವಿಧಾನಸಭೆ ಚುನಾವಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರಕ್ಕೆಂದು ಚಿತ್ರದುರ್ಗಕ್ಕೆ ಆಗಮಿಸಿದ್ದಾಗ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರು ಅನುದಾನ ಕೊಡುವುದಾಗಿ ಘೋಷಿಸಿದ್ದರು. 2022-23 ರ ಕೇಂದ್ರ ಬಜೆಟ್ ನಲ್ಲಿ ಕೂಡಾ ಘೋಷಣೆ ಮಾಡಲಾಗಿತ್ತು. ಇದುರೆಗೂ ಅನುದಾನ ನೀಡದೆ ವಂಚಿಸಲಾಗಿದೆ ಎಂದು ದೂರಿದರು.

ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಎಲ್ಲ ಕೆರೆಗಳಿಗೂ ಭದ್ರಾ ಮೇಲ್ದಂಡೆಯಡಿ ನೀರು ತುಂಬಿಸಬೇಕು, ವಿವಿ ಸಾಗರ ಜಲಾಶಯಕ್ಕೆ ಐದು ಟಿಎಂಸಿ ನೀರನ್ನು ಹಂಚಿಕೆ ಮಾಡಬೇಕೆಂದು ಒತ್ತಾಯಿಸಿದರು.

ರೈತ ಸಂಘದ ಹಿರಿಯ ಮುಖಂಡ ಬೇಡರೆಡ್ಡಿ ಹಳ್ಳಿ ಬಸವರೆಡ್ಡಿ ಮಾತನಾಡಿ, ಭದ್ರಾ ಕಾಮಗಾರಿ ನೆನೆಗುದಿಗೆ ಬಿದ್ದು ನಾಲ್ಕಾರು ವರ್ಷಗಳಾಗಿವೆ. 200 ಕೋಟಿ ರು ಬಿಡುಗಡೆ ಕೂಡಾ ರಾಜ್ಯ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಕೇಂದ್ರ ಸರ್ಕಾರ ಕೂಡಾ ಅನುದಾನ ನೀಡುತ್ತಿಲ್ಲ. ಪರಿಸ್ಥಿತಿ ಹೀಗೆ ಮುಂದುವರಿದರೆ ಜನತೆ ದಂಗೆ ಏಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸಚಿವ ಡಿ.ಸುಧಾಕರ್, ಶಾಸಕ ಟಿ.ರಘುಮೂರ್ತಿ, ಜಿಲ್ಲಾಧಿಕಾರಿ ವೆಂಕಟೇಶ್ ಅವರುಗಳು ಸ್ಥಳಕ್ಕೆ ಆಗಮಿಸಿ ರೈತರ ಅಹವಾಲು ಸ್ವೀಕರಿಸಿದರು.

ಪಾಲ್ಗೊಳ್ಳದ ಕೋದಂಡರಾಮಯ್ಯ, ಬಂಜಗೆರೆ

ಸಮಗ್ರ ನೀರಾವರಿಗೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಹಮ್ಮಿಕೊಂಡಿದ್ದ ಪಾದಯಾತ್ರೆ ಹಾಗೂ ಸಾರ್ವಜನಿಕ ಸಭೆಗೆ ಜಿಲ್ಲಾ ನೀರಾವರಿ ಹೋರಾಟ ಸಮಿತಿ ಪೂರ್ಣ ಪ್ರಮಾಣದ ಬೆಂಬಲ ವ್ಯಕ್ತಪಡಿಸಿತ್ತಾದರೂ ಸಮಿತಿ ಅಧ್ಯಕ್ಷ ಕೋದಂಡರಾಮಯ್ಯ ಹಾಗೂ ಪ್ರಧಾನ ಸಂಚಾಲಕ ಡಾ.ಬಂಜಗೆರೆ ಜಯಪ್ರಕಾಶ್ ಪಾದಯಾತ್ರೆಯಲ್ಲಿ ಪಾಲ್ಗೊಂಡಂತೆ ಕಾಣಿಸಲಿಲ್ಲ.

ಪಾದಯಾತ್ರೆ ಆರಂಭವಾಗುವ ಮುನ್ನಾದಿನ ಹೇಳಿಕೆ ನೀಡಿ ರೈತರು ಹಮ್ಮಿಕೊಂಡಿರುವ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದರು. ಪಾದಯಾತ್ರೆ ಆರಂಭವಾದ ಗುರುವಾರವೇ ಪಾಲ್ಗೊಳ್ಳುವರೆಂದು ಹೇಳಲಾಗಿತ್ತು. ಆದರೆ ಕೆಲ ಪದಾಧಿಕಾರಿಗಳು ಹೊಳಲ್ಕೆರೆಯಿಂದ ಆರಂಭಗೊಂಡ ಜಾಥಾಗೆ ಶುಕ್ರವಾರ ಜಾನುಕೊಂಡದ ಬಳಿ ಸ್ವಾಗತಿಸುವ ಕೆಲಸ ಮಾತ್ರ ಮಾಡಿ ಬೆಂಬಲವ ಸಾರ್ಥಕ ಪಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಟ್ಟುಹಬ್ಬದ ಸವಿ ನೆನಪಿಗೆ ಗಿಡನೆಟ್ಟು ಪೋಷಿಸಬೇಕು: ಶಾಸಕ ತಮ್ಮಯ್ಯ
ತಳ ಸಮುದಾಯಗಳ ಕುಲದೈವದ ಶೋಧ ನಡೆಸಬೇಕು