ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಿ । ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಹಮದ್ ಷರೀಫ್ ಅವರಿಗೆ ಮನವಿ
ನಗರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಖಾಸಗಿ ಆ್ಯಂಬುಲೆನ್ಸ್ಗಳ ಸುಲಿಗೆ ಹಾಗೂ ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕುವುದು ಸೇರಿದಂತೆ ಆಸ್ಪತ್ರೆಯ ಅವ್ಯವಸ್ಥೆಗಳನ್ನು ಸರಿಪಡಿಸಬೇಕು ಎಂದು ಆಗ್ರಹಿಸಿ ರೈತ ಸಂಘದ ವತಿಯಿಂದ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಹಮದ್ ಷರೀಫ್ ಅವರಿಗೆ ಮನವಿ ಸಲ್ಲಿಸಲಾಯಿತು.
ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ. ನಾರಾಯಣಗೌಡ ಮಾತನಾಡಿ, ಗ್ರಾಮೀಣ ಪ್ರದೇಶಗಳಿಂದ ಹೆರಿಗೆ, ಅಪಘಾತ ಹಾಗೂ ತುರ್ತು ಆರೋಗ್ಯ ಸಮಸ್ಯೆಗಳಿಗೆ ಜಿಲ್ಲಾಸ್ಪತ್ರೆಗೆ ಬರುವ ಬಡವರಿಗೆ ಕನಿಷ್ಠ ಪ್ರಾಥಮಿಕ ಚಿಕಿತ್ಸೆ ನೀಡದೆ ವಿವಿಧ ಕಾರಣಗಳನ್ನು ನೀಡಿ ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತಿದೆ ಎಂದು ಆರೋಪಿಸಿದರು.ಆಸ್ಪತ್ರೆಯ ಸುತ್ತಮುತ್ತ ಖಾಸಗಿ ಅಂಬುಲೆನ್ಸ್ಗಳು ಹಾಗೂ ದಲ್ಲಾಳಿಗಳ ಹಾವಳಿ ಹೆಚ್ಚಿದೆ. ತುರ್ತು ಸಂದರ್ಭದಲ್ಲಿ ಸರ್ಕಾರಿ ೧೦೮ ಆ್ಯಂಬುಲೆನ್ಸ್ ಸೇವೆ ಸಮರ್ಪಕವಾಗಿ ದೊರೆಯದ ಕಾರಣ ಬಡ ರೋಗಿಗಳು ದುಬಾರಿ ಶುಲ್ಕ ಪಾವತಿಸುವಂತಾಗಿದೆ. ಎಂಆರ್ಐ, ಸಿಟಿ ಸ್ಕ್ಯಾನ್ ಸೇರಿದಂತೆ ವಿವಿಧ ಪರೀಕ್ಷೆಗಳನ್ನು ತ್ವರಿತವಾಗಿ ಮಾಡಿಸಿಕೊಡುವುದಾಗಿ ಹೇಳಿ ದಲ್ಲಾಳಿಗಳು ಸಾವಿರಾರು ರುಪಾಯಿ ವಸೂಲಿ ಮಾಡುತ್ತಿರುವ ದೂರುಗಳಿವೆ. ಹೀಗಾಗಿ ಆಸ್ಪತ್ರೆ ಆವರಣದಲ್ಲಿ ವಿಶೇಷ ತಂಡ ರಚಿಸಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.
ವೈದ್ಯರು ಹಾಗೂ ಸಿಬ್ಬಂದಿಯ ಹಾಜರಾತಿ, ಕೇಂದ್ರಸ್ಥಾನದಲ್ಲಿ ವಾಸ, ಗುರುತಿನ ಚೀಟಿ ಮತ್ತು ಸಮವಸ್ತ್ರ ಧರಿಸುವಿಕೆ ಸೇರಿದಂತೆ ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕ್ರಮ ಕೈಗೊಳ್ಳಬೇಕು. ಗುತ್ತಿಗೆ ಸಿಬ್ಬಂದಿಗೆ ವೇತನ ವಂಚಿಸುವ ಗುತ್ತಿಗೆದಾರರ ವಿರುದ್ಧವೂ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಸರ್ಕಾರದಿಂದ ಪೂರೈಕೆಯಾಗುವ ಔಷಧಿಗಳ ವಿತರಣೆ ಮತ್ತು ಬಳಕೆಯಲ್ಲಿ ಪಾರದರ್ಶಕತೆ ಕಾಪಾಡಬೇಕು. ಔಷಧಿಗಳನ್ನು ಅಕ್ರಮವಾಗಿ ಖಾಸಗಿ ಆಸ್ಪತ್ರೆಗಳಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳ ಕುರಿತು ತನಿಖೆ ನಡೆಸಬೇಕು. ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳ ತರಬೇತಿ, ರೋಗಿಗಳ ಆರೈಕೆ, ರಕ್ತ ಪರೀಕ್ಷೆ ಹಾಗೂ ಔಷಧಿ ವಿತರಣಾ ವ್ಯವಸ್ಥೆಯ ಮೇಲ್ವಿಚಾರಣೆಯನ್ನು ಕಟ್ಟುನಿಟ್ಟುಗೊಳಿಸಬೇಕು ಎಂದು ಒತ್ತಾಯಿಸಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ಮಂಗಸಂದ್ರ ತಿಮ್ಮಣ್ಣ, ಮುದುವಾಡಿ ಚಂದ್ರಪ್ಪ, ಸುಪ್ರಿಮ್ ಚಲ, ಗಣೇಶ್, ಯಲ್ಲಣ್ಣ, ಅಪ್ಪೋಜಿರಾವ್, ಸಂತೋಷ್, ವಕ್ಕಲೇರಿ ಹುನುಮಯ್ಯ, ಶೈಲಜ, ರತ್ನಮ್ಮ, ವೆಂಕಟಮ್ಮ, ಮುನಿರತ್ನಮ್ಮ, ಗೌರಮ್ಮ ಇದ್ದರು.