ಕನ್ನಡಪ್ರಭ ವಾರ್ತೆ, ಚಿಕ್ಕಬಳ್ಳಾಪುರ:
ಸಂಘಟನೆಗಳಾದ ಮಾನವ ಹಕ್ಕುಗಳ ಕಮಿಟಿ, ಕರ್ನಾಟಕ ರಕ್ಷಣಾ ವೇದಿಕೆ, ಕರ್ನಾಟಕ ದಲಿತ ಸಂಘರ್ಷ ಸಮಿತಿ. ಕರ್ನಾಟಕ ಪ್ರಾಂತ ರೈತ ಸಂಘ, ಕರ್ನಾಟಕ ಸಾಮಾಜಿಕ ಕಾರ್ಯಕರ್ತರ ವೇದಿಕೆ, ಬಿಜೆಪಿ, ಜಿಲ್ಲಾ ಜೆಡಿಎಸ್ ಇನ್ನೂ ಹಲವು ಪ್ರಗತಿಪರ ಸಂಘಟನೆಗಳು ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಆನಂದ ಗುರೂಜಿ, ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ, ದಲಿತ ಮುಖಂಡ ಎನ್. ಮೂರ್ತಿ ನೇತೃತ್ವದಲ್ಲಿ ವಿಧಾನಸೌಧ ಮುತ್ತಿಗೆ ಹಾಕಲು ಬೈಕ್ ರ್ಯಾಲಿ ಹಮ್ಮಿಕೊಂಡಿದ್ದರು. ಪೊಲೀಸರು ಅಣಕನೂರು ಗೇಟ್ ಬಳಿ ಬೈಕ್ ರ್ಯಾಲಿಯನ್ನು ತಡೆದರು.
ಬಳಿಕ ಜಿಲ್ಲಾಡಳಿತ ಮತ್ತು ಪೊಲೀಸರೊಂದಿಗೆ ಮಾತುಕತೆಗೆ ಅಪರ ಜಿಲ್ಲಾಧಿಕಾರಿ ಡಾ.ಎನ್. ಭಾಸ್ಕರ್ ಮತ್ತು ಎಸ್ಪಿ ಕುಶಲ್ ಚೌಕ್ಸೆ ಬಂದಿದ್ದರು. ಆಗ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳು ಆಗಮಿಸಬೇಕೆಂದು ಪಟ್ಟು ಹಿಡಿದರು. ನಂತರ ಸ್ಥಳಕ್ಕಾಗಮಿಸಿದ ಜಿಲ್ಲಾಧಿಕಾರಿ ಪ್ರತಿಭಟನಾನಿರತ ಮುಖಂಡರಾದ ಕೋಡಿಹಳ್ಳಿ ಚಂದ್ರಶೇಖರ್, ಭಕ್ತರಹಳ್ಳಿ ಬೈರೇಗೌಡ, ಆನಂದ್ ಗುರೂಜಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿಕಲ್ ರಾಮಚಂದ್ರಗೌಡ, ದಲಿತ ಮುಖಂಡ ಎನ್. ಮೂರ್ತಿ ಅವರೊಂದಿಗೆ ಮಾತುಕತೆ ನಡೆಸಿದರು. ಇನ್ನು 15 ದಿನಗಳೊಳಗಾಗಿ ನಿಮ್ಮ ಬೇಡಿಕೆ ಸಂಬಂಧಿಸಿ ಅಧಿಕಾರಿಗಳು ಮತ್ತು ಮುಖ್ಯಮಂತ್ರಿಯೊಂದಿಗೆ ಮಾತುಕತೆಗೆ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು. ಇದಕ್ಕೊಪ್ಪಿದ ಮುಖಂಡರು 15 ದಿನಗಳಲ್ಲಿ ನಮ್ಮ ಬೇಡಿಕೆ ಈಡೇರದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸುತ್ತೇವೆ ಎಂದರು.ಇದೇ ವೇಳೆ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ತಮ್ಮ ಮನವಿ ಪತ್ರವನ್ನು ಸಲ್ಲಿಸಿದರು.
ಜಿಲ್ಲಾಡಳಿತ ಭವನದ ಮುಂದೆ ನಡೆಸುತ್ತಿರುವ ಪ್ರತಿಭಟನೆಯನ್ನು ಈ 15 ದಿನಗಳು ಮುಂದುವರಿಸುತ್ತೇವೆ. 15 ದಿನಗಳಲ್ಲಿ ಬೇಡಿಕೆ ಈಡೇರದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸುತ್ತೇವೆ. ಸರ್ಕಾರದ ಮುಂದಿನ ಆದೇಶದವರೆಗೆ ನಾವು ಕಾಯುತ್ತೇವೆ ಎಂದು ಅವರು ತಿಳಿಸಿದರು.
ಆನಂದ ಗುರೂಜಿ ಮಾತನಾಡಿ, ಇದು ನನ್ನ ಸ್ವಂತ ಜಿಲ್ಲೆಯ ಸಮಸ್ಯೆಯಾಗಿದೆ. ರಾಜ್ಯದ ಅನ್ನದಾತರ ಪರವಾಗಿ ಸದಾ ಇರುತ್ತೇನೆ ಎಂದು ತಿಳಿಸಿದರು
ಸಿಕೆಬಿ-3... ಪ್ರತಿಭಟನಾನಿರತರ ಮನವೊಲಿಸಲು ಪ್ರಯತ್ನಿಸುತ್ತಿರುವ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ.