ಕನ್ನಡಪ್ರಭ ವಾರ್ತೆ ತುಮಕೂರು
ಭಾನುವಾರ ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು 400ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಗ್ರಾಮ ಪರಿಕ್ರಮ ಯಾತ್ರೆ ನಡೆದಿದ್ದು, ಅದರ ಸಮಾರೋಪ ಸಮಾರಂಭವನ್ನು ತುಮಕೂರು ಜಿಲ್ಲೆಯಲ್ಲಿ ಆಯೋಜಿಸಲಾಗಿದೆ. ಬೆಳ್ಳಾವಿಯಲ್ಲಿ ಅಂದು ಮಧ್ಯಾಹ್ನ 12 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಈ ವೇಳೆ ರೈತರ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ವಿಧಾನ ಸಭೆ ವಿರೋಧ ಪಕ್ಷ ನಾಯಕ ಆರ್.ಅಶೋಕ್ ಸೇರಿ ಜಿಲ್ಲೆಯ ಬಿಜೆಪಿ ನಾಯಕರು ಭಾಗವಹಿಸುವರು ಎಂದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತರ ಸಮಸ್ಯೆಯನ್ನು ಸಂಪೂರ್ಣ ನಿರ್ಲಕ್ಷಿಸಿದೆ. ಅಲ್ಲದೆ, ಬಿಜೆಪಿ ಸರ್ಕಾರದ ಅವಧಿಯ ರೈತಪರ ಕಾರ್ಯಕ್ರಮಗಳನ್ನೂ ರದ್ದುಗೊಳಿಸಿ ರೈತ ವಿರೋಧಿ ಧೋರಣೆ ಅನುಸರಿಸಿದೆ ಎಂದು ನಡಹಳ್ಳಿ ಟೀಕಿಸಿದರು.ಹಾಲು ಉತ್ಪಾದಕರಿಗೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ಪ್ರೋತ್ಸಾಹ ಧನವನ್ನು ಕಾಂಗ್ರೆಸ್ ಸರ್ಕಾರ ನೀಡಿಲ್ಲ. 715 ಕೋಟಿ ರು. ಪ್ರೋತ್ಸಾಹ ಧನ ಬಾಕಿ ಇದೆ. ಬಿಜೆಪಿ ರಾಜ್ಯಾದ್ಯಂತ ಹೋರಾಟ ಮಾಡಿದ್ದಕ್ಕೆ ಒಂದು ತಿಂಗಳ ಬಾಕಿ ಹಣ ಬಿಡುಗಡೆ ಮಾಡಿದರು. ರಾಜ್ಯದೆಲ್ಲೆಡೆ ಬರ ಆವರಿಸಿದೆ. ರೈತರಿಗೆ ಬರಪರಿಹಾರ ನೀಡಿಲ್ಲ, ಬರ ನಿರ್ವಹಣೆ ಕಾರ್ಯಕ್ರಮಗಳನ್ನೂ ಆರಂಭಿಸಿಲ್ಲ. ಯಾವೊಬ್ಬ ಜಿಲ್ಲಾ ಉಸ್ತುವಾರಿ ಸಚಿವರೂ ರೈತರ ಹೊಲಗಳಿಗೆ ಭೇಟಿ ನೀಡಿ ಅವರ ಕಷ್ಟ ಕೇಳಿಲ್ಲ. ರಾಸುಗಳಿಗೆ ನೀರು, ಮೇವು ಹೊಂದಿಸಲಾಗದೆ ರೈತರು ಕಂಗಾಲಾಗಿದ್ದಾರೆ. ಸರ್ಕಾರ ಇದೂವರೆಗೆ ಗೋಶಾಲೆಗಳನ್ನು ತೆರೆದಿಲ್ಲ, ಕನಿಷ್ಠ ಗ್ರಾಮ ಪಂಚಾಯ್ತಿಗೆ ಒಂದರಂತಾದರೂ ಗೋಶಾಲೆ ತೆರೆಯಬೇಕು ಎಂದು ಒತ್ತಾಯಿಸಿದರು.
ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್,ರವಿಶಂಕರ್ ಹೆಬ್ಬಾಕ, ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಎಂ.ಆರ್.ರುದ್ರೇಶ್, ಬ್ಯಾಟರಂಗೇಗೌಡ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಸಿದ್ದರಾಮಣ್ಣ, ಮುಖಂಡರಾದ ಟಿ.ಆರ್.ಸದಾಶಿವಯ್ಯ, ಸತ್ಯಮಂಗಲ ಜಗದೀಶ್, ವಿರೂಪಾಕ್ಷಯ್ಯ, ಜೆ.ಜಗದೀಶ್ ಮೊದಲಾದವರು ಭಾಗವಹಿಸಿದ್ದರು.