ರೈತರ ನಿಯೋಗದಿಂದ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ

KannadaprabhaNewsNetwork |  
Published : Mar 06, 2026, 02:00 AM IST
ಚಿತ್ರ 2 | Kannada Prabha

ಸಾರಾಂಶ

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರನ್ನು ಬೆಂಗಳೂರಿನಲ್ಲಿ ಹಿರಿಯೂರು ಜೆಡಿಎಸ್ ಮುಖಂಡ ಎಂ.ರವೀಂದ್ರಪ್ಪನವರ ನೇತೃತ್ವದ ರೈತ ನಿಯೋಗ ಭೇಟಿ ಜಿಲ್ಲೆಯ ಸಮಸ್ಯೆಗಳ ಪರಿಹಾರಕ್ಕೆ ಮನವಿ ಸಲ್ಲಿಸಿತು.

ಕನ್ನಡಪ್ರಭ ವಾರ್ತೆ ಹಿರಿಯೂರು

ನಿವೃತ್ತ ಮುಖ್ಯ ಎಂಜಿನಿಯರ್ ಹಾಗೂ ಜೆಡಿಎಸ್ ಮುಖಂಡರಾದ ಎಂ.ರವೀಂದ್ರಪ್ಪನವರ ನೇತೃತ್ವದಲ್ಲಿ ತಾಲೂಕಿನ ರೈತರ ನಿಯೋಗ ಗುರುವಾರ ಬೆಂಗಳೂರಿನಲ್ಲಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿಮಾಡಿ ತಾಲೂಕಿನ ಪ್ರಮುಖ ನಾಲ್ಕು ಸಮಸ್ಯೆಗಳ ಬಗ್ಗೆ ಚರ್ಚಿಸಿ ಶೀಘ್ರ ಪರಿಹಾರಕ್ಕೆ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಮನವಿ ಮಾಡಿತು.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಘೋಷಣೆ ಮಾಡಿರುವ 5,300 ಕೋಟಿ ರು. ಬಿಡುಗಡೆ ಮಾಡಲು ಪ್ರಧಾನಮಂತ್ರಿಯವರ ಮೇಲೆ ಒತ್ತಡ ತಂದು ಜಿಲ್ಲೆಯ ಜನರಿಗೆ ಅನುಕೂಲ ಮಾಡಿಕೊಡಬೇಕು.

ತಾಲೂಕಿನ ಜೆಜಿ ಹಳ್ಳಿ ಹೋಬಳಿಯಲ್ಲಿ ಅಂತರ್ಜಲ ಕುಸಿದು ಹೋಗಿದ್ದು ಆ ಭಾಗದ ಜನ ಜಾನುವಾರುಗಳಿಗೆ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದೆ. ರೈತರು ತೋಟಗಳನ್ನು ಉಳಿಸಿಕೊಳ್ಳಲು ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ ಮಾಡಿಕೊಂಡು ಬೆಳೆಗಳನ್ನು ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ. ಹಾಗಾಗಿ ಗಾಯತ್ರಿ ಜಲಾಶಯ ಸೇರಿದಂತೆ 16 ಕೆರೆಗಳಿಗೆ ನೀರು ತುಂಬಿಸಲು ರಾಜ್ಯ ಸರ್ಕಾರ ಬಜೆಟ್‌ನಲ್ಲಿ 400 ಕೋಟಿ ರು. ಹಣ ಮೀಸಲಿರಿಸಿ ಕಾಮಗಾರಿ ಬೇಗ ಮುಗಿಸಿದರೆ ಅಲ್ಲಿನ ರೈತರು ಉಳಿಯುತ್ತಾರೆ. ಹಾಗಾಗಿ ರಾಜ್ಯ ಸರ್ಕಾರಕ್ಕೆ ತುರ್ತಾಗಿ ಹಣ ಬಿಡುಗಡೆ ಮಾಡಿಸುವಂತೆ ತಾವು ಒತ್ತಾಯಿಸಬೇಕು. ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ 150 ಎ ರಸ್ತೆಗೆ ಹೊಂದಿಕೊಂಡಿರುವ ಕಳವಿಬಾಗಿ ಗ್ರಾಮಕ್ಕೆ ಒಳತಿರುವು ಹಾಗೂ ಅಂಡರ್‌ ಬ್ರಿಡ್ಜ್ ಸಂಪರ್ಕ ಕಲ್ಪಿಸಬೇಕು. ಅಂಡರ್ ಬ್ರಿಡ್ಜ್ ಇಲ್ಲದ ಕಾರಣ ಇದುವರೆಗೂ ಸುಮಾರು 5 ಜನರು ಪ್ರಾಣ ಕಳೆದುಕೊಂಡಿದ್ದು 30 ರಿಂದ 40 ಜನರಿಗೆ ಕೈ-ಕಾಲು ಮುರಿತ ಸೇರಿದಂತೆ ಗಂಭೀರ ಗಾಯಗಳಾಗಿವೆ. ಗ್ರಾಮದಲ್ಲಿ ಪ್ರಸಿದ್ಧ ಶ್ರೀ ಲಕ್ಷ್ಮೀ ರಂಗನಾಥ ಸ್ವಾಮಿ ದೇವಸ್ಥಾನವಿದ್ದು ಪ್ರತಿ ಶನಿವಾರ, ಅಮಾವಾಸ್ಯೆ ಹಾಗೂ ಹುಣ್ಣಿಮೆ ದಿನಗಳಲ್ಲಿ ಸುಮಾರು 2 ರಿಂದ 3 ಸಾವಿರ ಭಕ್ತರು ದೇವಾಲಯಕ್ಕೆ ಆಗಮಿಸುತ್ತಾರೆ. ಶಾಲಾ ಮಕ್ಕಳು, ರೈತರು ಓಡಾಡಲು ತುಂಬಾ ತೊಂದರೆ ಉಂಟಾಗಿದ್ದು ಈ ವಿಷಯವನ್ನು ಈಗಾಗಲೇ ಸ್ಥಳೀಯ ತಾಲೂಕು ಅಧಿಕಾರಿಗಳು, ಜಿಲ್ಲಾಧಿಕಾರಿಗಳು, ಸ್ಥಳೀಯ ಶಾಸಕ ಮತ್ತು ಸಚಿವರ ಗಮನಕ್ಕೆ ತರಲಾಗಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ಶಾಶ್ವತ ಪರಿಹಾರ ದೊರಕಿಲ್ಲ. ಜನರ ಜೀವಭದ್ರತೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಕಳವಿಬಾಗಿ ಗ್ರಾಮಕ್ಕೆ ಸೂಕ್ತ ಒಳತಿರುವು ಹಾಗೂ ಅಂಡ‌ರ್ ಬ್ರಿಡ್ಜ್ ವ್ಯವಸ್ಥೆ ಮಾಡಿಕೊಡಬೇಕು. ತಾಲೂಕಿನ ತೋಟಗಾರಿಕೆ ಇಲಾಖೆಯಡಿ 2024-25ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಜಿಲ್ಲೆಯಲ್ಲಿ ಅಡಕೆ, ದಾಳಿಂಬೆ, ಮತ್ತು ಮಾವು ಬೆಳೆಗಳಿಗೆ ಒಟ್ಟು 4,843 ರೈತರು 11,566 ಎಕರೆಗೆ 296.03 ಲಕ್ಷಗಳಷ್ಟು ವಿಮಾ ಕಂತನ್ನು ನೀಡಿ ನೋಂದಾಯಿಸಿಕೊಂಡಿದ್ದಾರೆ.

ಆದರೆ ಜಿಲ್ಲೆಗೆ ನಿಗದಿಯಾಗಿದ್ದ ಕ್ಷೇಮ ಜನರಲ್ ಇನ್ಶೂರೆನ್ಸ್ ಲಿಮಿಟೆಡ್ ವಿಮಾ ಮೊತ್ತ ಪಾವತಿಯಾಗಿರುವುದಿಲ್ಲ. ಈ ಹಿನ್ನೆಲೆಯಲ್ಲಿ ತಾವುಗಳು ದಯಮಾಡಿ ಸಂಬಂಧಿಸಿದವರಿಗೆ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಬೇಕು ಎಂದು ಎಂ ರವೀಂದ್ರಪ್ಪನವರ ನೇತೃತ್ವದ ರೈತ ನಿಯೋಗ ಕೇಂದ್ರ ಸಚಿವರನ್ನು ಒತ್ತಾಯಿಸಿತು.

ನಿಯೋಗದ ಮನವಿಗೆ ಸ್ಪಂದಿಸಿದ ಕುಮಾರಸ್ವಾಮಿಯವರು ತಕ್ಷಣವೇ ವಿಶ್ವೇಶ್ವರಯ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ದೂರವಾಣಿ ಕರೆ ಮಾಡಿ ಟ್ರೈಯಲ್ ರನ್ ಮಾಡುವಾಗ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವಂತೆ ಸೂಚಿಸಿ ರೈತರ ಸಮಸ್ಯೆಗಳಿಗೆ ಹೆಚ್ಚು ಒತ್ತು ಕೊಡಬೇಕು. ಈ ಬಗ್ಗೆ ಸಂಬಂಧಪಟ್ಟವರ ಬಳಿ ಚರ್ಚೆ ಮಾಡುತ್ತೇನೆ ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ ಮಂಜುನಾಥ್, ಹಿರಿಯೂರು ತಾಲೂಕು ಅಧ್ಯಕ್ಷ ಹನುಮಂತರಾಯಪ್ಪ, ಐಮಂಗಲ ಹೋಬಳಿ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ತಿಪ್ಪೀರಯ್ಯ, ಉಪಾಧ್ಯಕ್ಷ ಎಚ್.ಜೆ.ಕಾಂತರಾಜ್, ಕಾರ್ಯದರ್ಶಿ ಯಶವಂತರಾಜ್, ವೀರೇಂದ್ರ ಪಾಟೀಲ್, ರಂಗನಾಥ್, ಸಣ್ಣೀರಪ್ಪ, ದೇವರಾಜ್, ಮಂಜುನಾಥ್, ಕೇಶವಮೂರ್ತಿ, ವಿ ರೇಣುಕಾ, ಜಿ ಗಿರೀಶ್, ವಿರೂಪಾಕ್ಷ, ಗೋವಿಂದ ರಾಜು, ಆನಂದ ಗೌಡ, ಪೂ. ತಿಮ್ಮಣ್ಣ, ಬೋರನಕುಂಟೆ ಕರಿಯಣ್ಣ,ಹನುಮಂತಪ್ಪ ಮುಂತಾದವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜ್ಞಾನ ದೇಗುಲಕ್ಕೆ ಮಾಡುವ ದಾನವೂ ಸರ್ವಶ್ರೇಷ್ಠ: ಶಾಸಕ ಎಚ್.ಟಿ.ಮಂಜು
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವಿಧಾನಸೌಧ ಚಲೋ