ಯೂರಿಯಾ ಗೊಬ್ಬರ ಪೂರೈಕೆಗೆ ರೈತರ ಆಗ್ರಹ

KannadaprabhaNewsNetwork |  
Published : Jul 20, 2025, 01:15 AM IST
19ಎಚ್‌ವಿಆರ್5 | Kannada Prabha

ಸಾರಾಂಶ

ನಿರಂತರ ಮಳೆಯಿಂದಾಗಿ ಬೆಳೆಗಳು ಕೊಳೆಯುವ ಆತಂಕಕ್ಕೆ ಒಳಗಾಗಿರುವ ರೈತರು ಯೂರಿಯಾ ಗೊಬ್ಬರ ಪೂರೈಕೆ ಮಾಡುವಂತೆ ಆಗ್ರಹಿಸಿ ಶನಿವಾರ ತಾಲೂಕಿನ ಕನವಳ್ಳಿ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಕಚೇರಿ ಎದುರು ಗಲಾಟೆ ನಡೆಸಿದ್ದಾರೆ.

ಹಾವೇರಿ: ನಿರಂತರ ಮಳೆಯಿಂದಾಗಿ ಬೆಳೆಗಳು ಕೊಳೆಯುವ ಆತಂಕಕ್ಕೆ ಒಳಗಾಗಿರುವ ರೈತರು ಯೂರಿಯಾ ಗೊಬ್ಬರ ಪೂರೈಕೆ ಮಾಡುವಂತೆ ಆಗ್ರಹಿಸಿ ಶನಿವಾರ ತಾಲೂಕಿನ ಕನವಳ್ಳಿ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಕಚೇರಿ ಎದುರು ಗಲಾಟೆ ನಡೆಸಿದ್ದಾರೆ.

ಕೃಷಿ ಇಲಾಖೆ ಶನಿವಾರ 15 ಟನ್ ಯೂರಿಯಾ ಗೊಬ್ಬರವನ್ನು ಪೂರೈಕೆ ಮಾಡಿದೆ. ಆದರೆ, ರೈತರ ಬೇಡಿಕೆ ಇನ್ನೂ ಹೆಚ್ಚಿಗೆ ಇದ್ದು, ಕೇವಲ 15 ಟನ್ ಗೊಬ್ಬರ ಯಾವುದಕ್ಕೂ ಸಾಕಾಗುವುದಿಲ್ಲ. ಕನವಳ್ಳಿ ಗ್ರಾಮದಲ್ಲಿ ಹೆಚ್ಚು ರೈತರು ಇದ್ದು, ಕೇವಲ ಒಂದೊಂದೇ ಚೀಲ ವಿತರಣೆ ಮಾಡಿದರೆ ಯಾವುದಕ್ಕೂ ಸಾಕಾಗುವುದಿಲ್ಲ. ಹಾಗಾಗಿ ರೈತರ ಬೇಡಿಕೆಗೆ ತಕ್ಕಂತೆ ಯೂರಿಯಾ ರಸಗೊಬ್ಬರವನ್ನು ಪೂರೈಕೆ ಮಾಡಬೇಕೆಂದು ರೈತರು ಸೊಸೈಟಿ ಎದುರು ಪಟ್ಟು ಹಿಡಿದು ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.

ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೆಕ್ಕೆಜೋಳ, ಹತ್ತಿ, ಶೇಂಗಾ, ಸೋಯಾಬಿನ್ ಬೆಳೆಗಳಲ್ಲಿ ತೇವಾಂಶ ಹೆಚ್ಚಾಗಿ ಬೆಳವಣಿಗೆ ಕ್ಷೀಣಿಸುತ್ತಿವೆ. ಅವುಗಳಿಗೆ ಮೇಲುಗೊಬ್ಬರ ಹಾಕಲಿಕ್ಕೆ ಯೂರಿಯಾ ರಸಗೊಬ್ಬರದ ಅಗತ್ಯತೆ ಇದ್ದು, ಸಂಬಂಧಪಟ್ಟ ಕೃಷಿ ಇಲಾಖೆ ಅಧಿಕಾರಿಗಳು ಸಮರ್ಪಕ ಯೂರಿಯಾ ಗೊಬ್ಬರ ಪೂರೈಕೆ ಮಾಡಬೇಕು ಎಂದು ಆಗ್ರಹಿಸಿದರು.

ದಾಸ್ತಾನು ಬರುವ ನಿರೀಕ್ಷೆ: ಕನವಳ್ಳಿ ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಸದಸ್ಯರು ಯೂರಿಯಾ ಗೊಬ್ಬರದ ಅಭಾವ ಬಗ್ಗೆ ಜಂಟಿ ಕೃಷಿ ನಿರ್ದೇಶಕರು ಹಾಗೂ ತಾಲೂಕು ಸಹಾಯಕ ಕೃಷಿ ನಿರ್ದೇಶಕರೊಂದಿಗೆ ಚರ್ಚೆ ಮಾಡಿದ ಬಳಿಕ ಅಧಿಕಾರಿಗಳು ಸೋಮವಾರ ರಸಗೊಬ್ಬರ ಪೂರೈಕೆ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ಸೊಸೈಟಿ ಸದಸ್ಯರೂ ಆದ ಗ್ರಾಪಂ ಸದಸ್ಯ ಪರಮೇಶಪ್ಪ ದೊಡ್ಡಜಾಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿವೈಆರ್‌
ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಎಲ್ಲರ ಸಹಕಾರ ಅಗತ್ಯ: ಡಾ.ನೂರಲ್ ಹುದಾ ಕರೆ