ಬಳ್ಳಾರಿ: ರಾಜ್ಯ ಸರ್ಕಾರ ಅಭಿವೃದ್ಧಿ ಯೋಜನೆಗಳ ಹೆಸರಿನಲ್ಲಿ ಕೃಷಿ ಭೂಮಿ ಸ್ವಾಧೀನಪಡಿಸಿ ಕೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಮಾಧವರೆಡ್ಡಿ ಕರೂರು ಕಳವಳ ವ್ಯಕ್ತಪಡಿಸಿದರು.
ಬೃಹತ್ ಕಾರ್ಖಾನೆಗಳು, ವಿಮಾನ ನಿಲ್ದಾಣ, ಹೆದ್ದಾರಿ ನಿರ್ಮಾಣ ಸೇರಿದಂತೆ ಅನೇಕ ಯೋಜನೆಗಳಿಗೆ ರಾಜ್ಯದಲ್ಲಿ ಫಲವತ್ತಾದ ಕೃಷಿ ಭೂಮಿಯನ್ನು ಸರ್ಕಾರ ಬಳಸಿಕೊಳ್ಳುತ್ತಿದೆ. ರೈತರಿಗೆ ಉದ್ಯೋಗದ ಆಮಿಷವೊಡ್ಡಿ ವಂಚಿಸಲಾಗುತ್ತಿದೆ. ಅಭಿವೃದ್ಧಿಗೆ ಫಲವತ್ತಾದ ಜಮೀನುಗಳನ್ನು ವಶಪಡಿಸಿಕೊಳ್ಳುವ ಬದಲು ನಿರುಪಯುಕ್ತ ಜಮೀನುಗಳ ಖರೀದಿ ಮಾಡಬೇಕು. ನಾನಾ ಯೋಜನೆಗಳ ನೆಪದಲ್ಲಿ ಫಲವತ್ತಾದ ಭೂಮಿಗೆ ಧಕ್ಕೆ ತರುವಂತಾಗಬಾರದು ಎಂದು ಹೇಳಿದರು.
ರಾಜ್ಯ ಸರ್ಕಾರ ಜಮೀನು ಕಳೆದುಕೊಂಡ ರೈತರಿಗೆ ವೈಜ್ಞಾನಿಕವಾದ ಬೆಲೆ ನೀಡುತ್ತಿಲ್ಲ. ಜಮೀನು ಕಳೆದುಕೊಂಡು ಪರಿಹಾರಕ್ಕಾಗಿ ಅಲೆಯುವ ನಿರ್ಮಾಣ ಸೃಷ್ಟಿಸಲಾಗುತ್ತಿದೆ. ಕೈಗಾರಿಕೆ ಹೆಸರಿನಲ್ಲಿ ವಶಪಡಿಸಿಕೊಂಡ ಜಮೀನುಗಳಲ್ಲಿ ಹತ್ತಾರು ವರ್ಷಗಳಾದರೂ ಕೈಗಾರಿಕೆ ತಲೆ ಎತ್ತುವುದಿಲ್ಲ. ಬಳಿಕ ಅದೇ ಜಮೀನನ್ನು ಬಂಡವಾಳ ಶಾಹಿಗಳ ಕೈಗೆ ಒಪ್ಪಿಸುವ ಕೃತ್ಯಕ್ಕೆ ಸರ್ಕಾರಗಳೇ ಮುಂದಾದರೆ ಈ ದೇಶದ ಕೃಷಿಕನ ಪಾಡೇನು ಎಂದು ಪ್ರಶ್ನಿಸಿದರಲ್ಲದೆ, ಒಂದೆಡೆ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ, ಸಕಾಲಕ್ಕೆ ಬೆಳೆಗೆ ನೀರು ಸಿಗದೆ ರೈತರು ಒದ್ದಾಡುತ್ತಿದ್ದರೆ ಮತ್ತೊಂದೆಡೆ ಸರ್ಕಾರದ ಜನವಿರೋಧಿ ಭೂಸ್ವಾಧೀನ ನಡೆಗೆ ಮತ್ತಷ್ಟು ಸಂಕಷ್ಟ ಎದುರಿಸುವಂತಾಗಿದೆ ಎಂದು ಹೇಳಿದರು.ಪ್ರಾಧ್ಯಾಪಕ ದಸ್ತಗೀರಸಾಬ್ ದಿನ್ನಿ, ಹೊಸ ತಲೆಮಾರಿನವರು ಸರ್ಕಾರಿ ಹುದ್ದೆಯನ್ನು ನೆಚ್ಚಿಕೊಳ್ಳದೆ ತಾವು ಪಡೆದುಕೊಂಡ ಜ್ಞಾನವನ್ನು ಕೃಷಿಗೆ ಬಳಸಿಕೊಳ್ಳಬೇಕು. ಆ ಮೂಲಕ ಭಾರತದ ಕೃಷಿ ಎದುರಿಸುತ್ತಿರುವ ಬಿಕ್ಕಟ್ಟಿಗೆ ಪರಿಹಾರ ಹುಡುಕಬೇಕು ಎಂದು ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ. ಪ್ರಹ್ಲಾದ್ ಚೌದ್ರಿ ಮಾತನಾಡಿ, ಕಾಲಮಾನಕ್ಕೆ ಅನುಗುಣವಾಗಿ ರೈತರು ವಿಜ್ಞಾನ ಮತ್ತು ತಂತ್ರಜ್ಞಾನ ಬಳಸಿಕೊಳ್ಳಬೇಕಿದೆ. ರಾಸಾಯನಿಕ ವಸ್ತುಗಳನ್ನು ಕಡಿಮೆ ಬಳಸಿ ವಿಷಮುಕ್ತ ಆಹಾರ ಪದಾರ್ಥಗಳನ್ನು ಬೆಳೆದು ಭಾರತ ದೇಶದ ಪ್ರಗತಿಗೆ ಕೈಜೋಡಿಸಬೇಕಾದ ಅಗತ್ಯವಿದೆ. ಸರ್ಕಾರ ರೈತರ ಬೆಳೆಗೆ ಬೆಂಬಲ ಬೆಲೆಯನ್ನು ಒದಗಿಸಿ ಅವರಲ್ಲಿ ಆತ್ಮವಿಶ್ವಾಸ ಮೂಡಿಸಬೇಕಾದ ಅಗತ್ಯವಿದೆ ಎಂದರು.