ಗದಗ: ಜಿಲ್ಲಾದ್ಯಂತ ಕಳೆದ ನಾಲ್ಕೈದು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ. ಆದರೆ, ನಗರದಲ್ಲಿ ಯೂರಿಯಾ ಗೊಬ್ಬರದ ತೀವ್ರ ಕೊರತೆ ಎದುರಾಗಿದ್ದು, ರೈತರು ಗೊಬ್ಬರಕ್ಕಾಗಿ ಪರದಾಡುವಂತಾಗಿದೆ.
ನಾವು ಮುಂಜಾನೆ ಐದು ಗಂಟೆಗೆ ಬಂದು ನಿಂತಿದ್ದೇವೆ. ಮಧ್ಯಾಹ್ನವಾದರೂ ಗೊಬ್ಬರ ಸಿಕ್ಕಿಲ್ಲ. ಅಧಿಕಾರಿಗಳು ಕಚೇರಿ ಬಿಟ್ಟು ಹೊರಗಡೆ ಬರುತ್ತಿಲ್ಲ. ನಮ್ಮ ಗೋಳು ಕೇಳುವವರೇ ಇಲ್ಲದಂತಾಗಿದೆ. ಮೊದಲು ಒಬ್ಬ ರೈತರಿಗೆ ಒಂದು ಚೀಲ ಮಾತ್ರ ನೀಡುತ್ತೇವೆ ಎಂದರು, ಈಗ ಅದನ್ನೂ ನೀಡುತ್ತಿಲ್ಲ, ವಿದ್ಯುತ್ ಸಮಸ್ಯೆಯಾಗಿದೆ ಎಂದು ಹೇಳುತ್ತಲೇ ಕಾಲಹರಣ ಮಾಡುತ್ತಿದ್ದಾರೆ ಎಂದು ಕೃಷಿಕರು ಆರೋಪಿಸಿದರು.
ಒಂದೆಡೆ ಗೊಬ್ಬರ ಸಿಗದೆ ರೈತರು ಪರದಾಡುತ್ತಿದ್ದರೆ, ಮತ್ತೊಂದೆಡೆ ಕೃಷಿ ಇಲಾಖೆಯ ಉನ್ನತ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸುವುದರಲ್ಲೇ ಬ್ಯುಸಿಯಾಗಿದ್ದಾರೆ. ರೈತರು ತೀವ್ರ ಸಂಕಷ್ಟದಲ್ಲಿದ್ದರೂ ಯಾವುದೇ ಅಧಿಕಾರಿಯಾಗಲಿ, ಜನಪ್ರತಿನಿಧಿಯಾಗಲಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿಲ್ಲ. ಇದು ಕೃತಕ ಅಭಾವ ಸೃಷ್ಟಿಸಿರುವ ಶಂಕೆಯನ್ನು ಮೂಡಿಸುತ್ತಿದ್ದು, ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ರೈತ ಸಂಘಟನೆಗಳು ಹಾಗೂ ಸ್ಥಳೀಯ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.