- ಶೆಟ್ಟಿಕೊಪ್ಪದಲ್ಲಿ ₹1 ಕೋಟಿ ವೆಚ್ಚದ ಶಬರೀಶ ಹಿಂದುಳಿದ ವರ್ಗಗಳ ಸೇವಾ ಸಂಘದ ಸಮುದಾಯ ಭವನಕ್ಕೆ ಶಂಕುಸ್ಥಾಪನೆ
ಮುಖ್ಯ ಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದ ಕಡಹಿನಬೈಲು ಏತ ನೀರಾವರಿ ಯೋಜನೆಯಿಂದ ಸಂಬಂಧಪಟ್ಟ ಎಲ್ಲಾ ರೈತರಿಗೆ ಸಮರ್ಪಕವಾಗಿ ನೀರು ಸಿಗುವಂತಾಗಬೇಕು ಎಂದು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ತಿಳಿಸಿದರು.
ಶುಕ್ರವಾರ ಶೆಟ್ಟಿಕೊಪ್ಪದಲ್ಲಿ ಶಬರೀಶ ಹಿಂದುಳಿದ ವರ್ಗಗಳ ಸೇವಾ ಸಂಘದ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಕಡಹಿನಬೈಲು ಏತ ನೀರಾವರಿ ಯೋಜನೆಯಿಂದ ಸುತ್ತ ಮುತ್ತಲಿನ 60 ಕೆರೆಗಳು ಭರ್ತಿ ಯಾಗಿ ಕೆರೆ ಅಚ್ಚಕಟ್ಟು ಭಾಗದ ರೈತರ ಜಮೀನು ನೀರಾವರಿಯಾಗಬೇಕಾಗಿದೆ. ಭದ್ರಾ ಹಿನ್ನೀರಿನಿಂದ ರೈತರ ಜಮೀನುಗಳಿಗೆ ಅನುಕೂಲವಾಗಲಿ ಎಂದು ಬಹಳ ಪ್ರಯತ್ನ ಪಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಅನುದಾನ ಬಿಡುಗಡೆ ಮಾಡಿಸಿದ್ದೆ. ಅಂದಿನ ನೀರಾವರಿ ಸಚಿವ ಎಚ್.ಕೆ.ಪಾಟೀಲ್ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಬಂದಿದ್ದರು. ಪೈಪ್ ಗಳ ದುರಸ್ತಿ, ಕೆರೆ ಹೂಳೆತ್ತಲು ₹9 ಕೋಟಿ ಮಂಜೂರಾಗಿದ್ದರೂ ಹಣ ಬಿಡುಗಡೆಯಾಗಿಲ್ಲ. ಈ ಬಗ್ಗೆ ಶಾಸಕರು ಗಮನ ಹರಿಸಿ ವ್ಯವಸ್ಥಿತವಾಗಿ ರೈತರ ಜಮೀನುಗಳಿಗೆ ನೀರು ನೀಡಬೇಕು ಎಂದು ಒತ್ತಾಯಿಸಿದರು.ಇಂದು ಶಂಕುಸ್ಥಾಪನೆಗೊಂಡ ಶಬರೀಶ ಹಿಂದುಳಿದ ವರ್ಗಗಳ ಸೇವಾ ಸಂಘದ ಸಮುದಾಯಭವನಕ್ಕೆ ಈಗಾಗಲೇ ₹50 ಲಕ್ಷ ಮಂಜೂರಾಗಿದೆ. ಈ ಸಮುದಾಯ ಭವನದಿಂದ ಇಲ್ಲಿನ ಜನರಿಗೆ ಅನುಕೂಲವಾಗಲಿದೆ. ಹೊನ್ನೇಕೊಡಿಗೆ- ನರಸಿಂಹ ರಾಜಪುರ ಸಂಪರ್ಕ ಸೇತುವೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾರಂಭದಲ್ಲಿ ₹5 ಕೋಟಿ ಮಂಜೂರು ಮಾಡಿದ್ದರು. ನಂತರ ₹20 ಕೋಟಿಗೆ ಏರಿಕೆಯಾಯಿತು. ಈಗ ₹35 ಕೋಟಿ ವೆಚ್ಚವಾಗಲಿದೆ. ಸೇತುವೆ ಕಾಮಗಾರಿ ಬಿರುಸಿನಿಂದ ನಡೆಯುತ್ತಿದೆ ಎಂದರು.
ಹೊನ್ನೇಕೊಡಿಗೆ ಏತ ನೀರಾವರಿ ಯೋಜನೆ ಅರಣ್ಯ ಇಲಾಖೆ ಜಾಗದಲ್ಲಿ ಬರುತ್ತದೆ ಎಂದು ಅರಣ್ಯ ಇಲಾಖೆ ತಕರಾರು ತೆಗೆದಿತ್ತು. ಅದನ್ನು ಕ್ಲಿಯರ್ ಮಾಡಲಾಗಿದೆ. ಮಲೆನಾಡು ಭಾಗದಲ್ಲಿ ಕಾಡಾನೆ, ಕಾಡು ಕೋಣ, ಕಾಡು ಹಂದಿಯಿಂದ ರೈತರ ಬೆಳೆ ನಾಶವಾಗುತ್ತಿದೆ. ಕಾಡಾನೆಯಿಂದ 3 ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಹಿಂದೆ ಮೃತಪಟ್ಟ ರೈತರಿಗೆ ₹5 ಲಕ್ಷ ಪರಿಹಾರ ನೀಡಲಾಗುತ್ತಿತ್ತು. ಈಗ ₹15 ಲಕ್ಷಕ್ಕೆ ಏರಿಸಲಾಗಿದೆ ಎಂದರು.
ಕಡಹಿನಬೈಲು ಗ್ರಾಪಂ ಉಪಾಧ್ಯಕ್ಷ ಸುನೀಲ್ ಕುಮಾರ್ ಮಾತನಾಡಿ, ಶಾಸಕ ಟಿ.ಡಿ.ರಾಜೇಗೌಡರು ಕಡಹಿನಬೈಲು ವ್ಯಾಪ್ತಿಯಲ್ಲಿ ರಸ್ತೆ ಹಾಗೂ ಇತರ ಕಾಮಗಾರಿಗೆ ಒಟ್ಟು ₹7. 95ಕೋಟಿ ಅನುದಾನ ನೀಡಿದ್ದಾರೆ. ದೇವಸ್ಥಾನ, ಮಸೀದಿ, ಚರ್ಚಗಳ ಅಭಿವೃದ್ಧಿಗೂ ಯಾವುದೇ ಬೇಧ ಭಾವ ಮಾಡದೆ ಸಮಾನವಾಗಿ ಅನುದಾನ ನೀಡಿದ್ದಾರೆ. ರಾಜ್ಯ ಪ್ರವಾ ಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ 2013ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಮನ ಒಲಿಸಿ ಬಕ್ರಿ ಹಳ್ಳ ಕಡಹಿನಬೈಲು ಏತ ನೀರಾವರಿಗೆ ಹಣ ಕೊಡಿಸಿದ್ದರು. ಶೆಟ್ಟಿಕೊಪ್ಪ ಸರ್ಕಾರಿ ಶಾಲೆ ಸಭಾಂಗಣಕ್ಕೂ ಅನುದಾನ ನೀಡಿದ್ದಾರೆ ಎಂದರು. ಇದೇ ಸಂದರ್ಭದಲ್ಲಿ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್, ಶಾಸಕ ಟಿ.ಡಿ.ರಾಜೇಗೌಡ ಅವರನ್ನು ಗೌರವಿಸಲಾಯಿತು.