ಕನ್ನಡಪ್ರಭ ವಾರ್ತೆ ಆಲಮಟ್ಟಿ
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಚಂದ್ರಮ್ಮಾ ದೇವಸ್ಥಾನದಿಂದ ಹಲಗೆ ವಾದನದೊಂದಿಗೆ ಪ್ರತಿಭಟನೆ ಮೆರವಣಿಗೆ ಮೂಲಕ ಕೆಬಿಜೆಎನ್ಎಲ್ ಮುಖ್ಯ ಎಂಜಿನಿಯರ್ ಕಚೇರಿಗೆ ತೆರಳಿ ಕಚೇರಿಗೆ ಬೀಗ ಜಡಿದು, ಅರೆಬೆತ್ತಲೆಯಾಗಿ ಮಲಗಿ ಪ್ರತಿಭಟಿಸಿದರು. ಈ ವೇಳೆ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಅಧ್ಯಕ್ಷ ತಿರುಪತಿ ಬಂಡಿವಡ್ಡರ ಮಾತನಾಡಿ, ಮುಂಗಾರು ಮಳೆ ಕೈಕೊಟ್ಟಿದೆ. ನೀರು ಬರುತ್ತದೆ ಎಂಬ ನಂಬಿಕೆಯಲ್ಲಿ ರೈತರು ಬೆಳೆ ಬೆಳೆದಿದ್ದಾರೆ. ನೀರಾವರಿ ಸಲಹಾ ಸಮಿತಿ ಸಭೆ ನಡೆಸಿಲ್ಲ ಎಂದು ಅಧಿಕಾರಿಗಳು ಸಬೂಬು ಹೇಳಿ ನೀರು ಬಿಡದಿರುವುದು ಸರಿಯಲ್ಲ. ತಕ್ಷಣ ಕಾಲುವೆಗೆ ನೀರು ಹರಿಸಬೇಕು, ಕೆರೆಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.ಅಧೀಕ್ಷಕ ಎಂಜಿನಿಯರ್ ಬಿ.ಎಸ್. ಪಾಟೀಲ ಮನವಿ ಸ್ವೀಕರಿಸಿ, ಜುಲೈ 14ರಂದು ಬೆಳಗಾವಿ ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ಡಿಸಿ, ಕೆಬಿಜೆಎನ್ಎಲ್ ಅಧಿಕಾರಿಗಳ ಸಭೆ ಇದೆ. ಅದರಲ್ಲಿ ನೀರು ಹರಿಸುವ ಬಗ್ಗೆ ತೀರ್ಮಾನವಾಗುತ್ತದೆ ಎಂದು ಭರವಸೆ ನೀಡಿದ ಬಳಿಕ ರೈತರು ಹೋರಾಟ ಕೈಬಿಟ್ಟರು.
ಕೃಷ್ಣಾ ನದಿಯ ಹಿನ್ನೀರಿಗೆ ಇಳಿದು ಪ್ರತಿಭಟನೆ:
ಗಾಳಿ, ಚಳಿ, ನೀರಿನ ರಭಸದ ನಡುವೆಯೂ ಅವರು ನೀರಿನಲ್ಲೇ ನಿಂತು ಪ್ರತಿಭಟಿಸಿದರು. ತುಬಚಿ-ಬಬಲೇಶ್ವರ ನೀರು ಬಿಡಲಾಗಿದೆ. ಆದರೆ ಆಲಮಟ್ಟಿ ಕಾಲುವೆಗೆ ಮಾತ್ರ ನೀರಿಲ್ಲ. 3 ದಿನಗಳಲ್ಲಿ ನೀರು ಬಿಡದಿದ್ದರೆ ಅಮರಣ ಉಪವಾಸ ಸತ್ಯಾಗ್ರಹ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ಸೀತಪ್ಪ ಗಣಿ, ರವಿ ಕೋತಿನ, ವಿಠ್ಠಲ ಬಿರಾದಾರ, ಉಮೇಶ ವಾಲೀಕಾರ, ಸಿದ್ದು ಹಿರೇಮಠ ಸೇರಿದಂತೆ ಹಲವರು ಇದ್ದರು.