ಕನಕಪುರ: ತಾಲೂಕು ಕಚೇರಿಯಲ್ಲಿ ವ್ಯಾಪಕ ವಂಚನೆ, ಭ್ರಷ್ಟಾಚಾರವನ್ನು ಖಂಡಿಸಿ ತಾಲೂಕು ರೈತ ಸಂಘ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಜಯಕರ್ನಾಟಕ ಜನಪರ ಸಂಘಟನೆಯ ರಾಜ್ಯ ಸಲಹೆ ಗಾರ ಕುಮಾರಸ್ವಾಮಿ ಮಾತನಾಡಿ, ತಾಲೂಕು ಕಚೇರಿ ಮಧ್ಯವರ್ತಿಗಳ ಕಪಿಮುಷ್ಠಿಯಲ್ಲಿದೆ. ಹಣ ನೀಡದೆ ಬಡವರ, ರೈತರ ಯಾವುದೇ ಕೆಲಸ ಆಗುವುದಿಲ್ಲ. ಪಟ್ಟಭದ್ರ ಹಿತಾಸಕ್ತಿಗಳು ಕೈಗೊಂಬೆಗಳಾಗಿ ಅಧಿಕಾರಿಗಳು ಕೆಲಸ ನಿರ್ವಹಿಸುತ್ತಿದ್ದಾರೆ. ರಾಗಿ ಕೇಂದ್ರದಲ್ಲಿ ತಮಿಳುನಾಡಿನಲ್ಲಿ ಬೆಳೆದ ರಾಗಿಗೆ ನಮ್ಮ ತಾಲೂಕು ರೈತರಿಂದ ಪಹಣಿ ಪಡೆದು ರಾಗಿ ಕೊಂಡುಕೊಳ್ಳುತ್ತಿದ್ದಾರೆ. ಇದಕ್ಕೆ ಕಂದಾಯ ಇಲಾಖೆ ಗ್ರಾಮ ಲೆಕ್ಕಾಧಿಕಾರಿಗಳು, ಕಂದಾಯ ನಿರೀಕ್ಷಕರು ನೇರವಾಗಿ ಪಾಲುದಾರರಾಗಿದ್ದಾರೆ. ತಹಸೀಲ್ದಾರ್ ಇವರನ್ನು ಮಟ್ಟಹಾಕದಿದ್ದಲ್ಲಿ ತಾಲೂಕಿನ ರೈತರ ಸಂಕಷ್ಟಗಳಿಗೆ ಪರಿಹಾರ ಸಿಗುವುದಿಲ್ಲ ಎಂದು ತಿಳಿಸಿದರು.
ರಾಜ್ಯ ರೈತ ಸಂಘದ ಸಂಚಾಲಕ ಚೀಲೂರು ಮುನಿರಾಜು ಮಾತನಾಡಿ, ತಾಲೂಕು ಕಚೇರಿಯಲ್ಲಿ ಹಲವಾರು ವರ್ಷಗಳಿಂದ ಒಂದೇ ಕಡೇ ಕಂದಾಯ ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ. ಈ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿ ಕರ್ತವ್ಯ ನಿರ್ವಹಿಸಬೇಕು. ಆದರೆ ಸರ್ಕಾರದ ಎಲ್ಲಾ ನಿಯಮಗಳನ್ನು ಉಲ್ಲಂಘಿಸಿ ತಾಲೂಕು ಕೇಂದ್ರಗಳಲ್ಲಿ ಖಾಸಗಿ ಮನೆ ಮಾಡಿಕೊಂಡು ದಲ್ಲಾಳಿಗಳ ಮೂಲಕ ಅಕ್ರಮ ದಂಧೆ ನಡೆಸುತ್ತಿದ್ದಾರೆ. ರೈತರನ್ನು ಕಚೇರಿಗೆ ಅಲೆದಾಡಿಸುತ್ತಿದ್ದಾರೆ, ಹಲವಾರು ವರ್ಷಗಳಿಂದ ಒಂದೇ ಕಡೆ ಬೇರೂರಿರುವ ಭ್ರಷ್ಟ ಅಧಿಕಾರಿಗಳನ್ನು ಬದಲಾವಣೆ ಮಾಡುವವರೆಗೂ ತಾಲೂಕಿನ ರೈತನ ಕೆಲಸವಾಗದು ಎಂದು ಹೇಳಿದರು. ಪ್ರತಿಭಟನೆಯಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಮಲ್ಲಯ್ಯ, ಜಿಲ್ಲಾ ಗೌರವಾಧ್ಯಕ್ಷ ತಿಮ್ಮೇಗೌಡ, ರಾಜ್ಯ ಮಹಿಳಾ ಕಾರ್ಯದರ್ಶಿ ರಮ್ಯಾ ರಾಮಣ್ಣ, ಯುವ ಜಿಲ್ಲಾಧ್ಯಕ್ಷ ರವಿಕುಮಾರ್, ಜಿಲ್ಲಾ ಮಹಿಳಾ ಅಧ್ಯಕ್ಷೆ ರತ್ನಮ್ಮ, ಜಿಲ್ಲಾ ಕಾರ್ಯಾಧ್ಯಕ್ಷ ಪುಟ್ಟಸ್ವಾಮಿ, ಜಿಲ್ಲಾ ಕಾರ್ಯದರ್ಶಿ ಎಚ್.ನಾಗೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜು, ನಗರಸಭಾ ಮಾಜಿ ಸದಸ್ಯ ಸ್ಟುಡಿಯೋ ಚಂದ್ರು, ಸಾಮಾಜಿಕ ಹೋರಾಟಗಾರ ಹೊಸದುರ್ಗ ಪ್ರಶಾಂತ್ ಸೇರಿದಂತೆ ರೈತ ಮುಖಂಡರು, ಪಾಲ್ಗೊಂಡಿದ್ದರು.ಕೆ ಕೆ ಪಿ ಸುದ್ದಿ 02: