ರಾಣಿಬೆನ್ನೂರು ತಾಲೂಕಿನ ಮೆಡ್ಲೇರಿ ಗ್ರಾಮದ ಕೆರೆಯ ಕಾಮಗಾರಿಯನ್ನು ಪೂರ್ಣಗೊಳಿಸಿ ಕೆರೆಗೆ ನೀರು ಬಿಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಮಂಗಳವಾರ ನಗರದ ಮಾಗೋಡ ರಸ್ತೆಯ ಯುಟಿಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ರಾಣಿಬೆನ್ನೂರು: ತಾಲೂಕಿನ ಮೆಡ್ಲೇರಿ ಗ್ರಾಮದ ಕೆರೆಯ ಕಾಮಗಾರಿಯನ್ನು ಪೂರ್ಣಗೊಳಿಸಿ ಕೆರೆಗೆ ನೀರು ಬಿಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಮಂಗಳವಾರ ನಗರದ ಮಾಗೋಡ ರಸ್ತೆಯ ಯುಟಿಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ರೈತ ಸಂಘಟನೆ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೆರ ಮಾತನಾಡಿ, 2021ರಲ್ಲಿ ಮೆಡ್ಲೇರಿ ಕೆರೆಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಯೋಜನೆ ಮಂಜೂರಾಗಿದೆ. ಯೋಜನೆ ಮಂಜೂರಾಗಿ ಐದು ವರ್ಷ ಗತಿಸಿದರೂ ಕಾಮಗಾರಿ ಪೂರ್ಣವಾಗಿಲ್ಲ. ಮೆಡ್ಲೇರಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ತೊಂದರೆಯಾಗಿದ್ದು, ರೈತರು ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಕೆರೆಗೆ ತುಂಗಭದ್ರಾ ನದಿ ನೀರು ಹರಿಸಿದರೆ ಕೃಷಿಗೆ ಅನುಕೂಲವಾಗುವುದರ ಜತೆಗೆ ಅಂತರ್ಜಲ ಮಟ್ಟ ಹೆಚ್ಚಾಗಿ ಕುಡಿಯುವ ನೀರಿನ ಸಮಸ್ಯೆಗೂ ಪರಿಹಾರ ದೊರೆಯಲಿದೆ. ಈ ಹಿನ್ನೆಲೆಯಲ್ಲಿ ಯುಟಿಪಿ ಅಧಿಕಾರಿಗಳು ಅಪೂರ್ಣವಾಗಿರುವ ಕಾಮಗಾರಿಯನ್ನು ಕೂಡಲೇ ಮುಗಿಸಿ ಇನ್ನೊಂದು ವಾರದಲ್ಲಿ ಕೆರೆಗೆ ನೀರು ಬೀಡಬೇಕು. ಅಲ್ಲದೇ ಯೋಜನೆಗೆ ಅಗತ್ಯವಿರುವ ಅನುದಾನ ಬಿಡುಗಡೆ ಮಾಡಿ ಕಾಮಗಾರಿಯನ್ನು ತ್ವರಿತವಾಗಿ ಆರಂಭಿಸಬೇಕು. ಯಾವುದೇ ಕಾರಣಕ್ಕೂ ಕಾಮಗಾರಿ ವಿಳಂಬ ಮಾಡಬಾರದು ಎಂದು ಆಗ್ರಹಿಸಿದರು.
ಮಲ್ಲಿಕಾರ್ಜುನ ಬಳ್ಳಾರಿ, ನಾಗಪ್ಪ ಯಲಿಗಾರ, ಸುರೇಶ ಹೊನ್ನಪ್ಪಳವರ, ಕರಬಸಪ್ಪ ಅಗಸಿಬಾಗಿಲ, ಸಿದ್ದಪ್ಪ ಅಗಸಿಬಾಗಿಲ, ಜಾನ್ ಪುನೀತ್ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.