ಬಳ್ಳಾರಿ: ಭತ್ತಕ್ಕೆ ₹3500 ಬೆಂಬಲ ಬೆಲೆ ನಿಗದಿಗೊಳಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತ ರೈತ- ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಂಸ್) ಸಂಘಟನೆಯ ನೇತೃತ್ವದಲ್ಲಿ ರೈತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಭತ್ತ ಕ್ವಿಂಟಲ್ಗೆ ₹3500 ಬೆಂಬಲ ಬೆಲೆ ನೀಡಬೇಕು. ಡಿಸೆಂಬರ್ ಮೊದಲ ವಾರದಿಂದಲೇ ಖರೀದಿ ಕೇಂದ್ರದ ಮೂಲಕ ಭತ್ತ ಖರೀದಿ ಪ್ರಾರಂಭಿಸಬೇಕು. ಮಳೆಯಿಂದಾಗಿ ನಷ್ಟಕ್ಕೀಡಾದ ರೈತರಿಗೆ ಯಾವುದೇ ಕರಾರು ವಿಧಿಸದೇ ನಷ್ಟ ಪರಿಹಾರ ವಿತರಿಸಬೇಕು. ಭತ್ತ ಕಟಾವು ನಡೆದ ಸಂಧರ್ಭದಲ್ಲಿ ಅದನ್ನು ಖರೀದಿಸಲು ಜಿಲ್ಲೆಯಲ್ಲಿ ಆವರ್ತ ನಿಧಿಯನ್ನು ಸ್ಥಾಪಿಸಬೇಕು.
ರೈತರ ಭತ್ತವನ್ನು ಉಚಿತವಾಗಿ ಶೇಖರಣೆ ಮಾಡುವ ಸಲುವಾಗಿ ಪ್ರತಿ ಓಬಳಿ ಮಟ್ಟದಲ್ಲಿ ಸರ್ಕಾರಿ ಗೋದಾಮುಗಳನ್ನು ಸ್ಥಾಪಿಸಬೇಕ, ಭತ್ತ ಕಟಾವು ಯಂತ್ರಗಳು 1 ಗಂಟೆಗೆ ₹2300ಕ್ಕಿಂತ ಹೆಚ್ಚು ಬೆಲೆ ತೆಗೆದುಕೊಳ್ಳುವ ಯಂತ್ರಗಳ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಜಿಲ್ಲಾ ಕಾರ್ಯದರ್ಶಿ ಗುರಳ್ಳಿ ರಾಜ, ರಾಜ್ಯ ಸಮಿತಿ ಸದಸ್ಯ ಈ.ಹನುಮಂತಪ್ಪ, ಯುವಜನ ಮುಖಂಡ ಕೋಳೂರು ಪಂಪಾಪತಿ ಮಾತನಾಡಿದರು.
ನಗರದ ಗಾಂಧಿಭವನದಿಂದ ಪ್ರತಿಭಟನಾ ಮೆರವಣಿಗೆ ಹೊರಟ ರೈತರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಕೆಲ ಹೊತ್ತು ಧರಣಿ ನಡೆಸಿ, ಬಳಿಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಭತ್ತಕ್ಕೆ ಬೆಂಬಲ ನೀಡಲು ಆಗ್ರಹಿಸಿ ಎಐಕೆಕೆಎಂಎಸ್ ಸಂಘಟನೆಯ ನೇತೃತ್ವದಲ್ಲಿ ಬಳ್ಳಾರಿ ಡಿಸಿ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿದರು.