ಬಿಡದಿ ಟೌನ್‌ಶಿಪ್‌ ವಿರೋಧಿಸಿ ರೈತ ಸಂಘ ಪ್ರತಿಭಟನೆ

KannadaprabhaNewsNetwork |  
Published : Jul 01, 2026, 01:45 AM IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘ ಪ್ರತಿಭಟನೆ | Kannada Prabha

ಸಾರಾಂಶ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾಮೂಹಿಕ ನಾಯಕತ್ವ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಮಂಗಳವಾರ ತಹಶೀಲ್ದಾರ್‌ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ವಿವಿಧ ಬೇಡಿಕೆ ಈಡೇರಿಸುವಂತೆಯೂ ಆಗ್ರಹ । ಯಳಂದೂರು ತಹಸೀಲ್ದಾರ್‌ ಕಚೇರಿಗೆ ಮುತ್ತಿಗೆ ಹಾಕಿ ಹೋರಾಟ । ಮನವಿ ಸಲ್ಲಿಕೆ

ಕನ್ನಡಪ್ರಭ ವಾರ್ತೆ ಯಳಂದೂರು

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾಮೂಹಿಕ ನಾಯಕತ್ವ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಮಂಗಳವಾರ ತಹಶೀಲ್ದಾರ್‌ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.ಈ ಸಂದರ್ಭದಲ್ಲಿ ರೈತ ಸಂಘ ರೈತ ಮುಖಂಡ ಹೊನ್ನೂರು ಪ್ರಕಾಶ್ ಮಾತನಾಡಿ, ಸರ್ಕಾರ ರೈತರನ್ನು ಒಕ್ಕಲೆಬ್ಬಿಸುವ ಕೆಲಸವನ್ನು ಮಾಡುತ್ತಿದೆ. ಡಿ.ಕೆ. ಶಿವಕುಮಾರ್‌ ಅವರು ಬಿಡದಿಯ ಬಳಿ ಟೌನ್‌ಶಿಪ್ ಮಾಡುವ ನೆಪದಲ್ಲಿ ಸಮೃದ್ಧ ಭೂಮಿಯನ್ನು ಹಾಳು ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ. ಕೈಗಾರಿಕೆಗೆಂದು ಮೀಸಲಿಟ್ಟಿರುವ ಭೂಮಿಯಲ್ಲಿ ಶೇ.25ರಷ್ಟು ಭೂಮಿಯನ್ನು ಬಳಕೆ ಮಾಡಿಲ್ಲ. ಈಗ ಬಿಡದಿ ಸರದಿಯಾಗಿದ್ದು ಮುಂದೆ ಎಲ್ಲಾ ಜಿಲ್ಲೆಗಳಿಗೂ ಇದು ವ್ಯಾಪಿಸಿ ಎಲ್ಲವನ್ನು ಖಾಸಗೀಕರಣ ಮಾಡುವ ಕೆಲಸ ಸದ್ದಿಲ್ಲದಂತೆ ನಡೆಯುತ್ತಿದೆ. ವಿದ್ಯುತ್ ಖಾಸಗೀಕರಣವಾಗುತ್ತಿದೆ. ನೀರಿಗೆ ಹಣ ಕೊಡುವ ಪರಿಸ್ಥಿತಿ ಬರುತ್ತಿದೆ. ಹೀಗೆ ಎಲ್ಲವನ್ನೂ ಖಾಸಗೀಕರಣ ಮಾಡಿ ರೈತರು ತಮ್ಮ ಜಮೀನು ನೀಡಿ ಅವರಿಗೆ ಕೈಒಡ್ಡುವ ಕೆಲಸವನ್ನು ಸರ್ಕಾರ ಮಾಡುತ್ತಿದ್ದು ಕೂಡಲೇ ಇದನ್ನು ಕೈಬಿಡಬೇಕು.ಜಿಲ್ಲೆಯಲ್ಲಿ ಕಬಿನಿ ಜಲಾಶಯದಿಂದ 287 ಟಿಎಂಸಿ ನೀರನ್ನು ಬಳಸಿಕೊಳ್ಳಲು ಅವಕಾಶವಿದೆ. ಆದರೆ ನಾವು ಕೇವಲ 250 ಟಿಎಂಸಿ ಬಳಸಿಕೊಂಡು ಉಳಿದ 37 ಟಿಎಂಸಿ ತಮಿಳುನಾಡಿಗೆ ಬಿಡಲಾಗುತ್ತಿದೆ. ಇದರಲ್ಲಿ ಕೇವಲ 4ರಿಂದ 5 ಟಿಎಂಸಿ ನೀರನ್ನು ಬಲದಂಡೆ ಕಾಲುವೆಯಿಂದ ಬಿಟ್ಟರೆ ಇಡೀ ಜಿಲ್ಲೆಯ ಕೆರೆ ಕಟ್ಟೆಗಳು ತುಂಬುತ್ತವೆ. ಬೆಳೆಗಳಿಗೆ ನೀರಾಗುತ್ತದೆ. ಆದರೆ ಸುಭಾಷ್ ಪವರ್‌ ಕಾರ್ಪೋರೇಷನ್ ಎಂಬ ಖಾಸಗಿ ವಿದ್ಯುತ್ ಕಂಪೆನಿಯೊಂದು ನೀರನ್ನು ನಿಯಂತ್ರಿಸುವ ಹಕ್ಕು ಪಡೆದಿರುವುದು ನಮ್ಮ ದೌರ್ಭಾಗ್ಯವಾಗಿದೆ. ರೈತರಿಗೆ ಬ್ಯಾಂಕ್‌ನಲ್ಲಿ ಮೋಸ ಮಾಡಲಾಗುತ್ತಿದೆ. ಬೆಳೆ ಸಾಲಕ್ಕೆ, ಚಿನ್ನದ ಸಾಲವನ್ನು ಸೇರಿಸುವುದು, ಸರ್ಕಾರದಿಂದ ಬರುವ ವಿವಿಧ ಯೋಜನೆಗಳ ಹಣವನ್ನು ನೀಡದೆ ಇದನ್ನು ಜಮೆ ಮಾಡಿಕೊಳ್ಳುವುದು ನಡೆಯುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳ ಸ್ಪಷ್ಟ ಆದೇಶವಿದ್ದರೂ ಇದನ್ನು ಉಲ್ಲಂಘಿಸಲಾಗುತ್ತಿದೆ ಇದು ನಿಲ್ಲಬೇಕು ಎಂದು ಹೇಳಿದರು.ಸೆಸ್ಕಾಂನಿಂದ ರೈತರಿಗೆ ತೊಂದರೆಯಾಗುತ್ತಿದೆ. ಟಿಸಿಗಳನ್ನು ದುರಸ್ತಿಪಡಿಸುತ್ತಿಲ್ಲ. ಟಿಸಿ ಕೆಟ್ಟು ನಿಂತರೆ ಇದಕ್ಕೆ ಆಯಿಲ್ ಹಾಕಿಸಲು ಹಣವನ್ನು ಇಲಾಖೆಯ ಅಧಿಕಾರಿಗಳು ಕೇಳುತ್ತಾರೆ. ರೈತರಿಗೆ ವಿದ್ಯುತ್ ಸರಬರಾಜು ಏರುಪೇರಾಗುತ್ತಿದೆ. ಇದನ್ನು ಸರಿಪಡಿಸಬೇಕು. ಅರಣ್ಯ ಇಲಾಖೆ ಕಾಡುಪ್ರಾಣಿಗಳ ಉಪಟಳವನ್ನು ತಡೆಗಟ್ಟುವಲ್ಲಿ ವಿಫಲವಾಗಿದ್ದು, ಇದು ನಿಲ್ಲಿಸಬೇಕು. ಇದರಿಂದಾಗುವ ಬೆಳೆನಷ್ಟ ಪರಿಹಾರವನ್ನು ನೀಡಬೇಕು. ನಮ್ಮ ಜಮೀನಿನ ಮರಗಳನ್ನು ಕಡೆಯಲು ಇರುವ ನಿಯಮಗಳನ್ನು ಸಡಿಲಗೊಳಿಸಬೇಕು. ಕಂದಾಯ ಇಲಾಖೆಯಲ್ಲಿ ರೈತರ ಖಾತೆ, ಆರ್‌ಟಿಸಿ ಇತರೆ ಸಮಸ್ಯೆಗಳನ್ನು ಬಗೆಹರಿಸಬೇಕು. ಗ್ರಾಮ ಪಂಚಾಯ್ತಿಗಳಲ್ಲಿ ಅವ್ಯವಸ್ಥೆಗಳನ್ನು ಸರಿಪಡಿಸುವುದೂ ಸೇರಿದಂತೆ ವಿವಿಧ ಇಲಾಖೆಗಳ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸಿದರು.ಈ ಸಂದರ್ಭದಲ್ಲಿ ಕೆಲವು ಬ್ಯಾಂಕಿನ ವ್ಯವಸ್ಥಾಪಕರು, ಇಲಾಖೆಯ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡ ಪ್ರಸಂಗವೂ ಜರುಗಿತು. ಈ ಸಮಸ್ಯೆಗಳು ಬಗೆಹರಿಯದಿದ್ದಲ್ಲಿ ನಮ್ಮ ಹೋರಾಟ ದೊಡ್ಡ ಮಟ್ಟದಲ್ಲಿ ನಡೆಯಲಿದೆ ಎಂದು ಎಚ್ಚರಿಕೆ ನೀಡಲಾಯಿತು. ನಂತರ ತಹಶೀಲ್ದಾರ್‌ ಎಸ್.ಎಲ್. ನಯನಾರಿಗೆ ಮನವಿಯನ್ನು ನೀಡಲಾಯಿತು. ಎಲ್ಲಾ ಸಮಸ್ಯೆಗಳಿಗೂ ಕಾಲ ಕ್ರಮೇಣ ಪರಿಹಾರವನ್ನು ಒದಗಿಸುವ ಭರವಸೆಯನ್ನು ತಹಶೀಲ್ದಾರ್‌ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.ಸಂಘದ ಜಿಲ್ಲಾ ಕಾರ್ಯದರ್ಶಿ ಎ.ಎನ್. ಶಿವಕುಮಾರ್‌, ತಾಲೂಕು ಅಧ್ಯಕ್ಷ ಎಸ್. ಸಿದ್ದಲಿಂಗಸ್ವಾಮಿ, ಉಪಾಧ್ಯಕ್ಷ ವೃಷಭೇಂದ್ರ, ಕೆ. ರಂಗಸ್ವಾಮಿ, ಶಿವಕುಮಾರ ಸ್ವಾಮಿ, ಬಿ.ಜಿ. ಮಹೇಶ್, ಸುಭಾಷ್, ಕುಮಾರ್‌ ಸೇರಿದಂತೆ ಅನೇಕರು ಇದ್ದರು.3006ವೈಎಲ್‌ಡಿಪಿ01ಯಳಂದೂರು ಪಟ್ಟಣದ ತಹಶೀಲ್ದಾರ್‌ ಕಚೇರಿಯ ಮುಂಭಾಗ ಮಂಗಳವಾರ ಸಾಮೂಹಿಕ ನಾಯಕತ್ವದಡಿಯಲ್ಲಿ ರೈತ ಸಂಘ ಹಾಗೂ ಹಸಿರು ಸೇನೆಯ ಸದಸ್ಯರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ಪರ್ಧಾತ್ಮಕ ಪರೀಕ್ಷೆಗೆ ಪಿಯುಸಿಯಿಂದಲೇ ಅಣಿಯಾಗಿ
ಪಾವಗಡದಲ್ಲಿ ಕಾಯಂ ಶಿಕ್ಷಕರ ಕೊರತೆ