ಕುಂದಗೋಳ: ತಾಲೂಕಿನ ಭರದ್ವಾಡ ಗ್ರಾಮದಲ್ಲಿ ಸಾಲಬಾಧೆಯಿಂದ ಕಳೆದ ಎರಡು ದಿನಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ಇಬ್ಬರು ರೈತರ ಮನೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭೇಟಿ ನೀಡಿ ಸಾಂತ್ವನ ಹೇಳಿದರು. ಆತ್ಮಹತ್ಯೆಯೊಂದೇ ಪರಿಹಾರವಲ್ಲ. ಯಾರೂ ಆತ್ಮಹತ್ಯೆ ಮಾಡಿಕೊಳ್ಳಬಾರದು. ನಿಮ್ಮೊಂದಿಗೆ ಸರ್ಕಾರವಿದೆ ಎಂದು ರೈತರಿಗೆ ಧೈರ್ಯ ನೀಡಿದರು.
ಇಬ್ಬರೂ ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ದುಃಖದ ಸಂಗತಿ. ರವಿರಾಜ ಜಾಡರ ಅವರ ಕೆನರಾ ಬ್ಯಾಂಕ್ ಸಾಲವನ್ನು ಫೌಂಡೇಶನ್ ವತಿಯಿಂದ ಭರಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.
ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಬಾರದು. ರೈತರಿಗೆ ಯಾವುದೇ ಸಮಸ್ಯೆಗಳಿದ್ದರೂ ಪರಿಹರಿಸಲು ಕ್ರಮಕೈಗೊಳ್ಳಲಾಗುವುದು. ಬೆಳೆವಿಮೆ ಪರಿಹಾರವನ್ನು ಹಂತ ಹಂತವಾಗಿ ಹಾಗೂ ವ್ಯವಸ್ಥಿತ ರೀತಿಯಲ್ಲಿ, ವಿಳಂಬವಾಗದಂತೆ ವಿತರಣೆ ಮಾಡಲಾಗುವುದು ಎಂದರು.ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕುಸುಮಾವತಿ ಶಿವಳ್ಳಿ, ಎಂ.ಎಸ್. ಅಕ್ಕಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಜಿ. ಆರ್.ಜೆ, ಜಿಪಂ ಸಿಇಒ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ್ ಬ್ಯಾಕೋಡ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ತಹಸೀಲ್ದಾರ್ ರಾಜು ಮಾವರಕರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಇಆರ್ಟಿ ಸಾರಿಗೆ: ಹುಬ್ಬಳ್ಳಿ- ಧಾರವಾಡ ನಡುವೆ ಓಡಾಡುತ್ತಿರುವ ಬಿಆರ್ಟಿಎಸ್ (ತ್ವರಿತ ಬಸ್ ಸಾರಿಗೆ ವ್ಯವಸ್ಥೆ) ಬದಲಿಗೆ ಇಆರ್ಟಿ ಸಾರಿಗೆ ವ್ಯವಸ್ಥೆ ಜಾರಿಗೊಳಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅದರ ಸಾಧಕ ಬಾಧಕಗಳ ಕುರಿತು ಸರ್ಕಾರ ಮಟ್ಟದಲ್ಲಿ ಚರ್ಚಿಸಲಾಗುವುದು. ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಾರಿಗೆ ವ್ಯವಸ್ಥೆಯನ್ನು ನೀಡುವುದು ಸರ್ಕಾರದ ಮೂಲ ಧ್ಯೇಯವಾಗಿದೆ. ಮುಂದಿನ ಒಂದು ತಿಂಗಳಲ್ಲಿ ಡಿಪಿಆರ್ ( ವಿಸ್ತ್ರತ ಯೋಜನಾ ವರದಿ) ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ ಎಂದು ಇದೇ ವೇಳೆ ಸಚಿವರು ಮಾಹಿತಿ ನೀಡಿದರು.