ರೈತ ಸಂಪರ್ಕ ಕೇಂದ್ರ, ಬಾಲಕರ ವಿದ್ಯಾರ್ಥಿನಿಲಯ ಉದ್ಘಾಟನೆ । ಅಂಬೇಡ್ಕರ್ ಭವನದ ಭೂಮಿ ಪೂಜೆ
ಸರ್ಕಾರ ನಿಗದಿಪಡಿಸಿದ ದಿನಾಂಕದ ಒಳಗೆ, ರೈತರು ತಮ್ಮ ಬೆಳೆಗೆ ನಿರ್ದಿಷ್ಟ ಹಣ ಪಾವತಿಸಿ, ವಿಮೆ ಮಾಡಿಸಿದ್ದಲ್ಲಿ ಹವಾಮಾನ ವೈಪರೀತ್ಯದಿಂದ ಬೆಳೆದ ಬೆಳೆ ನಾಶ ಅಥವಾ ತೊಂದರೆಯಾದಲ್ಲಿ ಪಾವತಿಸಿದ ವಿಮೆ ಹಣವು ರಕ್ಷಣೆ ನೀಡಲಿದೆ. ಕೃಷಿ ಇಲಾಖೆ ವತಿಯಿಂದ ಈಗಾಗಲೇ ಪತ್ರಿಕೆಗಳಲ್ಲಿ ಮಾಹಿತಿ ನೀಡಿದ್ದು, ರೈತರು ರೈತ ಸಂಪರ್ಕ ಕೇಂದ್ರದಲ್ಲಿ ಅಗತ್ಯ ಮಾಹಿತಿ ಪಡೆದು ವಿಮೆ ಮಾಡಿಸಿಕೊಳ್ಳಬೇಕು ಎಂದು ಶಾಸಕ ಎ.ಮಂಜು ಸಲಹೆ ನೀಡಿದರು.
ತಾಲೂಕಿನ ಹಳ್ಳಿಮೈಸೂರು ಗ್ರಾಮದಲ್ಲಿ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರ, ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದ ಉದ್ಘಾಟನಾ ಕಾರ್ಯಕ್ರಮ, ಡಾ. ಬಿ.ಆರ್.ಅಂಬೇಡ್ಕರ್ ಭವನದ ಭೂಮಿ ಪೂಜೆ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ನೂತನ ತುರ್ತು ಚಿಕಿತ್ಸಾ ವಾಹನಕ್ಕೆ ಚಾಲನೆ ನೀಡುವ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಾತನಾಡಿದರು.ಡಾ.ಬಿ.ಆರ್.ಅಂಬೇಡ್ಕರ್ ಭವನವು ೨೫ ಲಕ್ಷ ರು. ಅಂದಾಜು ವೆಚ್ಚದಲ್ಲಿ ನಿರ್ಮಾಣವಾಗಲಿದೆ. ೧೪ ಲಕ್ಷ ರು. ಹಣ ಬಿಡುಗಡೆಯಾಗಿದ್ದು, ನೀರಾವರಿ ಇಲಾಖೆ ಕಚೇರಿ ಅವರಣದಲ್ಲಿ ಕಟ್ಟಡದ ನಿರ್ಮಾಣ ಕಾರ್ಯ ಮಾಡಲಾಗುತ್ತದೆ. ಹಳ್ಳಿಮೈಸೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ತುರ್ತು ಚಿಕಿತ್ಸಾ ವಾಹನವಿಲ್ಲದೆ ತೊಂದರೆಯಾಗಿತ್ತು, ಈ ಕುರಿತು ಸರ್ಕಾರದ ಗಮನ ಸೆಳೆದಾಗ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ವೈದ್ಯಕೀಯ ಸಲಹೆಗಾರರು ಹಾಗೂ ಹಳ್ಳಿಮೈಸೂರು ಮೂಲದ ಎಚ್.ರವಿಕುಮಾರ್ ಅವರು ತೋರಿದ ವಿಶೇಷ ಕಾಳಜಿಯಿಂದ ತುರ್ತು ಚಿಕಿತ್ಸಾ ವಾಹನ ಸೌಲಭ್ಯ ಹಳ್ಳಿಮೈಸೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ದೊರೆತಿದೆ ಎಂದು ಹೇಳಿದರು.
ಹಳ್ಳಿಮೈಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಎಸ್.ವಿಶ್ವನಾಥ್, ದಸಂಸ ರಾಜ್ಯ ಸಂಚಾಲಕ ಸೋಮಶೇಖರ್ ಇತರರು ಇದ್ದರು.