ಬೆಸಗರಹಳ್ಳಿ, ಕೊಪ್ಪದಲ್ಲಿ ರಸ್ತೆತಡೆ ನಡೆಸಿ ರೈತರಿಂದ ಪ್ರತಿಭಟನೆ

KannadaprabhaNewsNetwork |  
Published : Aug 03, 2026, 01:30 AM IST
2ಕೆಎಂಎನ್ ಡಿ14 | Kannada Prabha

ಸಾರಾಂಶ

ಕಾವೇರಿ ನದಿ ನೀರಿನ ರಕ್ಷಣೆ ವಿಚಾರದಲ್ಲಿ ನಿರ್ವಹಣಾ ಪ್ರಾಧಿಕಾರ ಅಥವಾ ಸರ್ಕಾರದಿಂದ ರೈತರಿಗೆ ಯಾವುದೇ ನ್ಯಾಯ ಸಿಗುವ ನಂಬಿಕೆ ಇಲ್ಲ. ಹೀಗಾಗಿ ತಮಿಳುನಾಡು ಹಾಗೂ ಕರ್ನಾಟಕ ಕೇಂದ್ರದ ಮೇಲೆ ಒತ್ತಡ ಹಾಕಿ ರಾಷ್ಟ್ರೀಯ ಜಲ ನೀತಿ ರೂಪಿಸುವಂತೆ ಉಭಯ ರಾಜ್ಯಗಳ ನಡುವೆ ಒಮ್ಮತದ ಅಭಿಪ್ರಾಯ ಪಡೆದುಕೊಳ್ಳುವುದು ಸೂಕ್ತ.

ಕನ್ನಡಪ್ರಭ ವಾರ್ತೆ ಮದ್ದೂರು

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ಆದೇಶ ವಿರೋಧಿಸಿ ರೈತ ಸಂಘದ ಪುಟ್ಟಣ್ಣಯ್ಯ ಬಣದ ಕಾರ್ಯಕರ್ತರು ತಾಲೂಕಿನ ಬೆಸಗರಹಳ್ಳಿ ಅಡ್ಡರಸ್ತೆ ಹಾಗೂ ಕೊಪ್ಪದಲ್ಲಿ ಭಾನುವಾರ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಹಿನ್ನೆಲೆಯಲ್ಲಿ ಮದ್ದೂರು, ಕೊಪ್ಪ, ಕೌಡ್ಲೆ ಮತ್ತು ಮಂಡ್ಯ ಮಾರ್ಗದ ರಸ್ತೆಯಲ್ಲಿ ಸುಮಾರು ಅರ್ಧ ಗಂಟೆಗಳ ಕಾಲ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು. ತಾಲೂಕು ರೈತ ಸಂಘದ ಅಧ್ಯಕ್ಷ ಉಮೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತ ಸಂಘದ ಕಾರ್ಯಕರ್ತರು ಕಾವೇರಿ ಪ್ರಾಧಿಕಾರ, ರಾಜ್ಯ ಸರ್ಕಾರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಜಲ ಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ವಿರುದ್ಧ ಘೋಷಣೆ ಕೂಗಿದರು.ಮುಖಂಡರಾದ ವರದಪ್ಪ ಮತ್ತು ಲಿಂಗಪ್ಪಾಜಿ ಮಾತನಾಡಿ, ಕಾವೇರಿ ನದಿ ನೀರಿನ ರಕ್ಷಣೆ ವಿಚಾರದಲ್ಲಿ ನಿರ್ವಹಣಾ ಪ್ರಾಧಿಕಾರ ಅಥವಾ ಸರ್ಕಾರದಿಂದ ರೈತರಿಗೆ ಯಾವುದೇ ನ್ಯಾಯ ಸಿಗುವ ನಂಬಿಕೆ ಇಲ್ಲ. ಹೀಗಾಗಿ ತಮಿಳುನಾಡು ಹಾಗೂ ಕರ್ನಾಟಕ ಕೇಂದ್ರದ ಮೇಲೆ ಒತ್ತಡ ಹಾಕಿ ರಾಷ್ಟ್ರೀಯ ಜಲ ನೀತಿ ರೂಪಿಸುವಂತೆ ಉಭಯ ರಾಜ್ಯಗಳ ನಡುವೆ ಒಮ್ಮತದ ಅಭಿಪ್ರಾಯ ಪಡೆದುಕೊಳ್ಳುವುದು ಸೂಕ್ತ ಎಂದರು.

ಸರ್ಕಾರ ತಮಿಳುನಾಡಿಗೆ ನೀರು ಹರಿಸುವುದನ್ನು ಬಿಟ್ಟು ಮೊದಲು ಶಿಂಷಾ ಎಡದಂಡೆ ಮತ್ತು ಬಲದಂಡೆ ನಾಲೆಗಳಿಗೆ ಮೊದಲು ನೀರು ಹರಿಸಬೇಕು. ನಾಲಾ ಬಯಲಿನಲ್ಲಿ ಸುಮಾರು 2 ಸಾವಿರ ಎಕರೆ ಪ್ರದೇಶಗಳಲ್ಲಿ ಬೆಳೆದಿರುವ ಭತ್ತ, ರಾಗಿ, ಕಬ್ಬು ಮತ್ತು ರೇಷ್ಮೆ ಬೆಳೆ ರಕ್ಷಣೆ ಮಾಡಬೇಕು. ಅಲ್ಲದೇ, ಕರೆಕಟ್ಟೆಗಳಲ್ಲಿ ನೀರು ತುಂಬಿಸಿ ಜನಜಾನುವಾರುಗಳಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕು ಎಂದು ರೈತ ಮುಖಂಡರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಜಿ.ಎ.ಶಂಕರ್, ಗೊಲ್ಲರದೊಡ್ಡಿ ಅಶೋಕ, ಸ್ವಾಮಿ, ವೆಂಕಟಪ್ಪ, ವೆಂಕಟೇಗೌಡ, ರಾಜೇಶ್‌, ಟಿ.ಸತೀಶ್‌, ಸುನಿಲ್, ರವಿಕುಮಾರ್, ರಾಮಣ್ಣ ಮತ್ತಿತರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೇಮಾವತಿ ಅಚ್ಚುಕಟ್ಟು ವ್ಯಾಪ್ತಿ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ಸಾಗಣೆ, ಮರಗಳ ಮಾರಣ ಹೋಮ
ನೀರಿಲ್ಲದೆ ಬರಿದಾಗಿರುವ ದೊಡ್ಡಕೆರೆ ಕೆಲವರಿಂದ ಒತ್ತುವರಿ