ಗುಂಡ್ಲುಪೇಟೆ: ವಿದ್ಯುತ್ ಖಾಸಗೀಕರಣ ವಿರೋಧಿಸಿ ರೈತಸಂಘದ ಮುಖಂಡ ನಾಗಪ್ಪ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಎಂಸಿಡಿಸಿಸಿ ಬ್ಯಾಂಕ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ವಿದ್ಯುತ್ ಖಾಸಗೀಕರಣವಾದರೆ ರೈತರಿಗೆ ಉಳಿಗಾಲವಿಲ್ಲ, ಹಾಲಿ ಈಗಿರುವ ಸ್ಥಿತಿಯಲ್ಲೇ ವಿದ್ಯುತ್ ಕ್ಷೇತ್ರ ಇರಲಿ ಎಂದು ಪ್ರತಿಭಟನಾಕಾರರು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಪ್ರತಿಭಟನಾ ಸ್ಥಳಕ್ಕಾಗಮಿಸಿದ ಸೆಸ್ಕಾಂ ಎಇಇ ಸಿದ್ದಲಿಂಗಪ್ಪ ಪ್ರತಿಭಟನಾ ನಿರತ ರೈತರು ನೀಡಿದ ಮನವಿ ಪತ್ರವನ್ನು ಸ್ವೀಕರಿಸಿ, ಜಿಲ್ಲಾಧಿಕಾರಿಗಳಿಗೆ ಕಳುಹಿಸುವುದಾಗಿ ಹೇಳಿದರು. ಪ್ರತಿಭಟನೆಯಲ್ಲಿ ನೂರಾರು ಮಂದಿ ರೈತಸಂಘದ ಕಾರ್ಯಕರ್ತರು ಭಾಗವಹಿಸಿದ್ದರು.