ಬರಗಾಲದ ಪಟ್ಟಿಯಿಂದ ನರಗುಂದ ಕೈಬಿಟ್ಟರೆ ಉಗ್ರ ಹೋರಾಟ: ರೈತರ ಎಚ್ಚರಿಕೆ

KannadaprabhaNewsNetwork |  
Published : Aug 18, 2026, 02:30 AM IST
ನರಗುಂದದಲ್ಲಿ ರೈತರು ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಸಕಾಲಕ್ಕೆ ಮಳೆಯಾಗದೆ ಸದ್ಯ ಎಲ್ಲ ಬೆಳೆಗಳು ಜಮೀನಿನಲ್ಲಿ ತೇವಾಂಶ ಕೊರತೆಯಿಂದ ಒಣಗುತ್ತಿವೆ. ಇಂಥ ಸಂದರ್ಭದಲ್ಲಿ ಜಿಲ್ಲಾಡಳಿತ ಜಿಲ್ಲೆಯ 7 ತಾಲೂಕಿನಲ್ಲಿ ನರಗುಂದ ಹೊರತುಪಡಿಸಿ ಉಳಿದ 6 ತಾಲೂಕನ್ನು ಬರಗಾಲ ಹೆಚ್ಚು ಆವರಿಸಿದೆ ಎಂದು ಸರ್ಕಾರಕ್ಕೆ ಮಾಹಿತಿ ನೀಡಿರುವುದು ಸರಿಯಲ್ಲ.

ನರಗುಂದ: ತಾಲೂಕಿನಲ್ಲಿ ಮುಂಗಾರು ಮಳೆಯಾಗದೆ ರೈತ ಸಮುದಾಯ ತೀವ್ರ ತೊಂದರೆಯಲ್ಲಿದೆ. ಆದರೂ ಜಿಲ್ಲೆಯಲ್ಲಿ ನರಗುಂದ ಹೊರತಪಡಿಸಿ ಉಳಿದ ತಾಲೂಕನ್ನು ಬರಗಾಲವೆಂದು ಸರ್ಕಾರಕ್ಕೆ ಮಾಹಿತಿ ರವಾನೆ ಮಾಡಿದ್ದು ಖಂಡನೀಯ. ಕೂಡಲೇ ಬರಪೀಡಿತ ಪಟ್ಟಿಗೆ ನರಗುಂದ ತಾಲೂಕನ್ನು ಸೇರ್ಪಡೆ ಮಾಡಬೇಕೆಂದು ಜಿಲ್ಲಾ ರೈತ ಸಂಘ ಹಾಗೂ ಹಸಿರುಸೇನೆ ಅಧ್ಯಕ್ಷ ಬಸವರಾಜ ಸಾಬಳೆ ಆಗ್ರಹಿಸಿದರು.

ಸೋಮವಾರ ಪಟ್ಟಣದ ಮಿನಿ ವಿಧಾನಸೌಧದಲ್ಲಿ ವಿವಿಧ ರೈತ ಸಂಘಟನೆ, ರೈಲ್ವೆ ಹೋರಾಟ ಸಮಿತಿ, ಕನ್ನಡಪರ ಸಂಘಟನೆಗಳ ಆಶ್ರಯದಲ್ಲಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿ ಮಾತನಾಡಿ, ತಾಲೂಕಿನಲ್ಲಿ ಪ್ರಸಕ್ತ ವರ್ಷ ಮುಂಗಾರು ಹಂಗಾಮಿನಲ್ಲಿ ಅಲ್ಪಸ್ವಲ್ಪ ಮಳೆಯಾಗಿದ್ದರಿಂದ ರೈತರು ಮುಂಗಾರು ಹಂಗಾಮಿನಲ್ಲಿ ವಾಣಿಜ್ಯ ಬೆಳೆಗಳಾದ ಹೆಸರು, ಗೋವಿನ ಜೋಳ, ಬಿಟಿ ಹತ್ತಿ, ಸೂರ್ಯಕಾಂತಿ ಸೇರಿದಂತೆ ಮುಂತಾದ ಬೆಳೆಗಳನ್ನು ಬಿತ್ತನೆ ಮಾಡಿದ್ದರು.

ಆದರೆ ಸಕಾಲಕ್ಕೆ ಮಳೆಯಾಗದೆ ಸದ್ಯ ಎಲ್ಲ ಬೆಳೆಗಳು ಜಮೀನಿನಲ್ಲಿ ತೇವಾಂಶ ಕೊರತೆಯಿಂದ ಒಣಗುತ್ತಿವೆ. ಇಂಥ ಸಂದರ್ಭದಲ್ಲಿ ಜಿಲ್ಲಾಡಳಿತ ಜಿಲ್ಲೆಯ 7 ತಾಲೂಕಿನಲ್ಲಿ ನರಗುಂದ ಹೊರತುಪಡಿಸಿ ಉಳಿದ 6 ತಾಲೂಕನ್ನು ಬರಗಾಲ ಹೆಚ್ಚು ಆವರಿಸಿದೆ ಎಂದು ಸರ್ಕಾರಕ್ಕೆ ಮಾಹಿತಿ ನೀಡಿರುವುದು ಸರಿಯಲ್ಲ ಎಂದರು.

ತಾಲೂಕು ರೈತ ಸಂಘ ಹಾಗೂ ಹಸಿರುಸೇನೆ ಅಧ್ಯಕ್ಷ ಉಮೇಶ ಮರ್ಚಪ್ಪನವರ ಮಾತನಾಡಿ, ತಾಲೂಕಿನಲ್ಲಿ ಆಗಿರುವ ಮಳೆಯನ್ನು ಸರಿಯಾಗಿ ಮಾಪನ ಮಾಡಿ ತಾಲೂಕಿನಲ್ಲಿ ಬರಗಾಲವಿದೆ ಎಂದು ಸರ್ಕಾರಕ್ಕೆ ಮಾಹಿತಿ ನೀಡಬೇಕು. ಒಂದು ವೇಳೆ ಅಧಿಕಾರಿಗಳು ಬರಪೀಡಿತ ತಾಲೂಕು ಎಂದು ಮಾಹಿತಿಯನ್ನು ಸರ್ಕಾರಕ್ಕೆ ನೀಡದಿದ್ದರೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅಹೋರಾತ್ರಿ ಧರಣಿ ಮಾಡುತ್ತೇವೆ ಎಂದು ಎಚ್ಚರಿಸಿದರು.

ತಾಲೂಕು ರೈಲ್ವೆ ಹೋರಾಟ ಸಮಿತಿ ಅಧ್ಯಕ್ಷ ಚನ್ನು ನಂದ ಮಾತನಾಡಿ, ತಾಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ಎಲ್ಲ ಬೆಳೆಗಳು ಮಳೆ ಕೊರತೆಯಿಂದ ಅಪಾರ ಪ್ರಮಾಣದಲ್ಲಿ ಹಾನಿಯಾಗಿವೆ. ಆದ್ದರಿಂದ ಅಧಿಕಾರಿಗಳು ಬೇಗ ಬೆಳೆಹಾನಿ ಸಮೀಕ್ಷೆ ಮಾಡಿ ಸರ್ಕಾರಕ್ಕೆ ಮಾಹಿತಿ ರವಾನಿಸಿ ಬೆಳೆಹಾನಿ ಮಾಡಿಕೊಂಡ ರೈತರಿಗೆ ಪ್ರತಿ 1 ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು. ಜಾನುವಾರುಗಳಿಗಾಗಿ ಗೋಶಾಲೆ ಪ್ರಾರಂಭಿಸಬೇಕು. 2025- 26ನೇ ಸಾಲಿನ ಮುಂಗಾರು ಹಂಗಾಮಿನ ಗೋವಿನಜೋಳ ಬೆಳೆಹಾನಿ ಮಾಡಿಕೊಂಡ ರೈತರಿಗೆ ಬೆಳೆವಿಮೆ ಪರಿಹಾರವನ್ನು ತಕ್ಷಣವೇ ಸರ್ಕಾರ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.

ತಹಸೀಲ್ದಾರ್ ಶ್ರೀಶೈಲ ತಳವಾರ ರೈತರ ಮನವಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಿ.ಎಸ್. ಪಾಟೀಲ, ಡಾ. ಸಿ.ಕೆ. ರಾಚನಗೌಡ್ರ, ವೀರಣ್ಣ ಸೊಪ್ಪಿನ, ವಿಠಲ ಜಾಧವ, ನಾಗೇಶ ಅಪೋಜಿ, ಅಣ್ಣಪ್ಪ ಮಾನೆ, ಶಿವಪ್ಪ ಸಾತಣ್ಣವರ, ನಂದಿ ಸೇರಿದಂತೆ ಮುಂತಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಲ್‌ಎಲ್‌ಸಿ–ಎಚ್‌ಎಲ್‌ಸಿ ಕಾಲುವೆಗಳಿಗೆ ಜಂಟಿ ನೀರು ಹರಿಸಲು ಆಗ್ರಹ
ಪೊಲೀಸ್‌ ಸರ್ಪಗಾವಲಿನಲ್ಲಿ ಬಸವರಾಜ ರೆಡ್ಡಿ ಅಂತ್ಯಸಂಸ್ಕಾರ