-ರೈತರ ಪಾಲಿಗೆ ವಾಣಿಜ್ಯ ಬೆಳೆ ಮೆಣಸಿನಕಾಯಿಗೆ ಗಂಟು ಬಿದ್ದ ರೋಗ । ಇಳುವರಿ ಕುಂಠಿತ । ರೈತರಿಗೆ ನಷ್ಟದ ಹೊರೆ
ಬಿಂದುಮಾಧವ ಮಣ್ಣೂರ
ಕನ್ನಡಪ್ರಭ ವಾರ್ತೆ ಅಫಜಲಪುರರೈತರ ಪಾಲಿಗೆ ಪ್ರಮುಖ ವಾಣಿಜ್ಯ ಬೆಳೆ ಮೆಣಸಿನಕಾಯಿಗೆ ರೋಗಗಳು ಗಂಟು ಬಿದ್ದಿದ್ದು, ಇಳುವರಿ ಕುಂಠಿತ ಜೊತೆಗೆ ಬೆಲೆ ಕಡಿಮೆಯಾಗಿದ್ದು, ರೈತರಿಗೆ ನಷ್ಟದ ಹೊರೆಯಾಗಿದೆ.
ಬೆಳೆ ಉತ್ತಮವಾಗಿ ಬಂದಿದೆ ಎಂದು ನೆಮ್ಮದಿಯಿಂದ ಇದ್ದ ರೈತರಿಗೆ ಒಂದಿಲ್ಲೊಂದು ತೊಂದರೆ ಬಂದೇ ಬರುತ್ತದೆ. ಇದೀಗ ಮೆಣಸಿನಕಾಯಿ ಬೆಳೆಗೆ ಎಲೆ ಮುಟುರು ಹಾಗೂ ಬೂದಿರೋಗ ಬಾಧಿಸುತ್ತಿದೆ.
ಬೆಳೆ ವಿವರ: ಕಳೆದ ವರ್ಷ 500 ಎಕರೆ ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆಯಲಾಗಿತ್ತು. ಮಳೆ ಕೊರತೆ ಹಾಗೂ ಬೆಲೆ ಕುಸಿತದಿಂದ ರೈತರು ತತ್ತರಿಸಿ ಹೋಗಿ ಈ ವರ್ಷ ಅದಕ್ಕಿಂತ ಕಡಿಮೆ ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆಯುತ್ತಿದ್ದಾರೆ.
ಒಂದು ಗಿಡದಿಂದ ಮತ್ತೊಂದು ಗಿಡಕ್ಕೆ ರೋಗ ಆವರಿಸುತ್ತಿದೆ. ರೋಗ ಬಂದ ಗಿಡಗಳು ಸಂಪೂರ್ಣ ಒಣಗುತ್ತಿವೆ.
ಖರ್ಚು ವ್ಯರ್ಥ: ಮೆಣಸಿನಕಾಯಿ ಬೆಳೆಯಲು ರೈತರು ಎಕರೆಗೆ ಕನಿಷ್ಠ 1ಲಕ್ಷದಿಂದ ರಿಂದ 1.50ಲಕ್ಷ ರು. ಖರ್ಚು ಮಾಡಿದ್ದಾರೆ. ಈ ವರ್ಷ ದುಬಾರಿ ಕ್ರಿಮಿನಾಶಕ ಸಿಂಪರಣೆಯಿಂದ ಎಕರೆಗೆ ಸರಾಸರಿ 1ಲಕ್ಷ ರು. ಖರ್ಚಾಗಿದೆ. ಪ್ರತಿವರ್ಷ ಎಕರೆಗೆ ಸರಾಸರಿ 18 ರಿಂದ 25 ಕ್ವಿಂಟಲ್ ಇಳುವರಿ ಬರುತ್ತಿತ್ತು. ಆದರೆ, ಈ ವರ್ಷ ರೋಗಗಳು ಕಾಣಿಸಿಕೊಂಡಿರುವುದರಿಂದ 10 ರಿಂದ 12 ಕ್ವಿಂಟಲ್ ಇಳುವರಿ ಬರಬಹುದು ಎಂದು ಅಂದಾಜಿಸಿದ್ದು, ಪ್ರಸಕ್ತ ಮಾರುಕಟ್ಟೆಯಲ್ಲೂ ವಹಿವಾಟು ಪಾತಾಳಕ್ಕೆ ಕುಸಿದಿದೆ.
ಮಾರುಕಟ್ಟೆ ತೆರೆಯಲು ಆಗ್ರಹ: ತಾಲೂಕಿನಲ್ಲಿ ಸಾವಿರಾರು ರೈತರು ಮೆಣಸಿನಕಾಯಿಯನ್ನು ಹೆಚ್ಚಾಗಿ ಬೆಳೆಯುತ್ತಿದ್ದಾರೆ. ಅವರಿಗೆ ಸೂಕ್ತವಾದ ಮಾರುಕಟ್ಟೆ ಇಲ್ಲದೆ ಸೋಲಾಪುರ, ಹೈದ್ರಾಬಾದ್, ಕರ್ನೂಲ್ ಗುಂಟೂರ್ ದೂರದ ನಗರಗಳಿಗೆ ತೆಗೆದುಕೊಂಡು ಹೋಗಬೇಕಾಗುತ್ತದೆ. ಅಲ್ಲಿ ಒಳ್ಳೆ ಬೆಲೆ ಸಿಕ್ಕದೆ, ಚಿಂತೆ ಇಲ್ಲ. ಲಾರಿ ಬಾಡಿಗೆ ಹಮಾಲಿ, ಮೆಣಸಿನಕಾಯಿ ಬೆಳೆಯಲು ಮಾಡಿದ ಸಾಲ ಸೇರಿದರೆ ಸಾಲ ಕಟ್ಟಲಾಗದ ಸ್ಥಿತಿಯಲ್ಲಿ ರೈತರಿದ್ದಾರೆ. ಮೆಣಸಿನಕಾಯಿ ಮಾರುಕಟ್ಟೆ ಪ್ರಾರಂಭಿಸಿದರೆ ರೈತರಿಗೆ ಅನುಕೂಲವಾಗುತ್ತದೆ. ಅಧಿಕಾರಿಗಳು ಜನಪ್ರತಿನಿಧಿಗಳು ಸಚಿವರು ಇದರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ತಾಲೂಕಿನ ರೈತರು ಮನವಿ ಮಾಡಿದ್ದಾರೆ.
ಸಂಕಷ್ಟದಲ್ಲಿರುವ ರೈತರ ನೆರವಿಗೆ ಸರ್ಕಾರ ಬರಬೇಕೆಂದು ಅಣ್ಣಪ್ಪ ಬಿಜಾಪುರ, ಭೀಮಣ್ಣ ಹಡಲಗಿ ಮನವಿ ಮಾಡಿದ್ದಾರೆ.
-