ರಾಮನಗರ: ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಅಗತ್ಯವಿರುವ ಸವಲತ್ತುಗಳನ್ನು ಸರ್ಕಾರ ಪೂರೈಸುತ್ತಿದೆ. ಅವುಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಫಲಿತಾಂಶ ಪಡೆಯಲು ಚಿತ್ತ ಹರಿಸಬೇಕು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಬಸವರಾಜೇಗೌಡ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ವಿದ್ಯಾರ್ಥಿಗಳು ಓದುವ ವಯಸ್ಸಿನಲ್ಲಿ ಕಾಲಹರಣ ಮಾಡಬಾರದು. ಅಮೂಲ್ಯವಾದ ಸಮಯವನ್ನು ಜ್ಞಾನಾರ್ಜನೆಗಾಗಿ ಮೀಸಲಿಟ್ಟು ಶ್ರದ್ಧಾಸಕ್ತಿಯಿಂದ ಕಲಿತುಕೊಳ್ಳಬೇಕು. ಆ ಮೂಲಕ ದೇಶದ ಆಸ್ತಿಯಾಗಬೇಕು, ಪೋಷಕರು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪಡುವ ಶ್ರಮವನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು, ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಉಳಿದಿರುವ ದಿನಗಳಲ್ಲಿ ಹೆಚ್ಚಿನ ಶ್ರಮ ಹಾಕಬೇಕು. ಮನಸ್ಸಿನ ದೃಡತ್ವವನ್ನು ಬೆಳೆಸಿಕೊಳ್ಳಬೇಕು ಎಂದರು.
ಪರೀಕ್ಷೆಗೆ ಭಯಪಡಬಾರದು, ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕು. ಅದಕ್ಕೆ ವಿಷಯವನ್ನು ಮನನ, ಪುನರ್ ಮನನ ಮಾಡಿಕೊಳ್ಳಬೇಕು. ಅರ್ಥವಾಗದ್ದನ್ನು ಶಿಕ್ಷಕರಿಂದ ಕೇಳಿ ಕಲಿಯಬೇಕು, ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಉತ್ತಮವಾಗಿ ಬರೆಯುವ ಮೂಲಕ ಬದುಕಿನ ಮುಂದಿನ ಘಟ್ಟವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು, ಚೆನ್ನಾಗಿ ಓದಿ ಮುಂದೆ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶಿವಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಆತ್ಮವಿಶ್ವಾಸವನ್ನು ಮೈಗೂಡಿಸಿಕೊಳ್ಳಬೇಕು, ಈ ಬಾರಿ ಜಿಲ್ಲೆಗೆ ಉತ್ತಮ ಫಲಿತಾಂಶ ಲಭಿಸಬೇಕು, ಅದು ತಂದೆ ತಾಯಿ ಹಾಗೂ ಶಿಕ್ಷಕರಿಗೆ ತೃಪ್ತಿ ತರಬೇಕು. ವಿದ್ಯಾರ್ಥಿಗಳಿಗೆ ಸರ್ಕಾರ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡುತ್ತಿದೆ. ಒಳ್ಳೆಯ ಫಲಿತಾಂಶದ ಮೂಲಕ ಸರ್ಕಾರಕ್ಕೆ ಸಾರ್ಥಕತೆ ತಂದುಕೊಡಬೇಕು ಎಂದು ಹೇಳಿದರು.
12ಕೆಆರ್ ಎಂಎನ್ 3.ಜೆಪಿಜಿ
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವ್ಯಾಪ್ತಿಯ ವಸತಿ ಶಾಲೆ ಹಾಗೂ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ ಓದುತ್ತಿರುವ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಶೈಕ್ಷಣಿಕ ಕಾರ್ಯಾಗಾರವನ್ನು ಗಣ್ಯರು ಉದ್ಘಾಟಿಸಿದರು.