22 ಅನುದಾನಿತ ಪ್ರೌಢ ಶಾಲೆಗಳು ಮುಚ್ಚುವ ಭೀತಿ!

KannadaprabhaNewsNetwork |  
Published : May 04, 2026, 01:30 AM IST
ಗೋಣಿಕೊಪ್ಪ ಕೆವಿಕೆ ಕೇಂದ್ರದಲ್ಲಿ ರೈತರು ಮತ್ತು ಬೆಳೆಗಾರರಿಗೆ ಮಣ್ಣಿನ ಪೋಷಕಾಂಶದ ಬಗ್ಗೆ ಕಾರ್ಯಗಾರವನ್ನು ನಡೆಸಲಾಯಿತು. | Kannada Prabha

ಸಾರಾಂಶ

ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ನಿರಂತರವಾಗಿ ಇಳಿಕೆಯಾಗುತ್ತಲೇ ಇದೆ. ವಿದ್ಯಾರ್ಥಿಗಳ ಸಂಖ್ಯೆ ಕೊರತೆಯಿಂದ ಸರ್ಕಾರಿ ಶಾಲೆಗಳಿಗೆ ಬೀಗ ಬೀಳುತ್ತಿರುವುದು ಒಂದೆಡೆಯಾದರೆ, ಮಕ್ಕಳ ಸಂಖ್ಯೆ ಕಡಿಮೆ ಇರುವ 22 ಅನುದಾನಿತ ಪ್ರೌಢ ಶಾಲೆಗಳು ಮುಚ್ಚುವ ಭೀತಿಯಲ್ಲಿವೆ.

ಗಣೇಶ್ ತಮ್ಮಡಿಹಳ್ಳಿ

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ನಿರಂತರವಾಗಿ ಇಳಿಕೆಯಾಗುತ್ತಲೇ ಇದೆ. ವಿದ್ಯಾರ್ಥಿಗಳ ಸಂಖ್ಯೆ ಕೊರತೆಯಿಂದ ಸರ್ಕಾರಿ ಶಾಲೆಗಳಿಗೆ ಬೀಗ ಬೀಳುತ್ತಿರುವುದು ಒಂದೆಡೆಯಾದರೆ, ಮಕ್ಕಳ ಸಂಖ್ಯೆ ಕಡಿಮೆ ಇರುವ 22 ಅನುದಾನಿತ ಪ್ರೌಢ ಶಾಲೆಗಳು ಮುಚ್ಚುವ ಭೀತಿಯಲ್ಲಿವೆ.

ಮಕ್ಕಳ ಸಂಖ್ಯೆ ಕಡಿಮೆ ಇರುವ ಶಾಲೆಗಳಿಗೆ ಈಗಾಗಲೇ ಶಿಕ್ಷಣ ಇಲಾಖೆ ನೋಟಿಸ್‌ ನೀಡಿದೆ. ಈ ಬಾರಿಯೂ ಈ ಶಾಲೆಗಳಲ್ಲಿ ಮಕ್ಕಳ ದಾಖಲಾತಿಯಲ್ಲಿ ಯಾವುದೇ ಸುಧಾರಣೆ ಆಗದಿದ್ದರೆ ಪ್ರಸಕ್ತ ಶೈಕ್ಷಣಿಕ ಅವಧಿಯಿಂದಲೇ ಈ 22 ಶಾಲೆಗಳ ಮಾನ್ಯತೆ ರದ್ದಾಗುವ ಸಾಧ್ಯತೆ ಇದೆ.

ಶಿಕ್ಷಣ ಇಲಾಖೆಯ ನಿಯಮದ ಪ್ರಕಾರ ಅನುದಾನಿತ ಪ್ರೌಢ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರತಿ ತರಗತಿಯಲ್ಲಿ ಕನಿಷ್ಠ 25 ಮಕ್ಕಳು ಕಡ್ಡಾಯವಾಗಿ ಇರಬೇಕು. ಆದರೆ ಜಿಲ್ಲೆಯ 22 ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಇದಕ್ಕಿಂತ ಕಡಿಮೆ ಇದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಶಾಲಾ ಶಿಕ್ಷಣ ಇಲಾಖೆ ಇಂತಹ ಶಾಲೆಗಳ ಮೇಲೆ ಚಾಟಿ ಬೀಸಿದ್ದು, ಈ ಬಾರಿಯೂ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ 25ಕ್ಕಿಂತ ಕಡಿಮೆ ಇರುವುದು ಕಂಡು ಬಂದರೆ ಶಾಲೆಯ ಮಾನ್ಯತೆ ರದ್ದು ಮಾಡುವ ಬಗ್ಗೆ ಮುನ್ನೆಚ್ಚರಿಕೆ ನೀಡಿದೆ.

ಮಕ್ಕಳ ಸಂಖ್ಯೆ ಅತಿ ಕಡಿಮೆ ಇರುವ 22 ಅನುದಾನಿತ ಶಾಲೆಗಳ ಪೈಕಿ ಕೆಲ ಶಾಲೆಗಳಲ್ಲಿ 10ಕ್ಕೂ ಕಡಿಮೆ ಮಕ್ಕಳು ಇದ್ದಾರೆ. ಕೆಲ ಶಾಲೆಗಳಲ್ಲಿ 10ನೇ ತರಗತಿಯಲ್ಲಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದರೆ, 8ನೇ ತರಗತಿಯಲ್ಲಿ 20ಕ್ಕಿಂತ ಕಡಿಮೆ ಮಕ್ಕಳಿದ್ದಾರೆ.

ಶಿಕ್ಷಣ ಇಲಾಖೆ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ 2018-19ರಲ್ಲಿ 148 ಅನುದಾನಿತ ಪ್ರೌಢ ಶಾಲೆಗಳಿದ್ದವು, ಸದ್ಯ ಈ ಸಂಖ್ಯೆ 144ಕ್ಕೆ ಇಳಿದಿದೆ.

ಅನುದಾನಿತ ಶಾಲೆಗಳು ಶಿಕ್ಷಕರ ಕೊರತೆಯಿಂದ ಬಳಲುತ್ತಿರುವ ಶಾಲೆಗಳ ಪೈಕಿ ಭದ್ರಾವತಿಯಲ್ಲಿ 10, ಶಿಕಾರಿಪುರದಲ್ಲಿ 4, ಶಿವಮೊಗ್ಗದಲ್ಲಿ 5, ಸೊರಬ, ತೀರ್ಥಹಳ್ಳಿ, ಸಾಗರದಲ್ಲಿ ತಲಾ ಒಂದೊಂದು ಶಾಲೆಗಳಲ್ಲಿ ಮಕ್ಕಳ ಸಂಖ್ಯೆ 25ಕ್ಕಿಂತ ಕಡಿಮೆ ಇದೆ.

ಕನಿಷ್ಠ 25 ವಿದ್ಯಾರ್ಥಿಗಳ ಹಾಜರಾತಿ ಕಾಯ್ದುಕೊಳ್ಳಲು ವಿಫಲವಾಗಿರುವ ಶಾಲೆಗಳಿಗೆ ಒಂದು ಸಲ ಮನ್ನಾ ಮಾಡಲು ಅವಕಾಶವಿತ್ತು. ಈ ಕುರಿತು ಶಾಲೆಗಳಿಗೆ ಡಿಡಿಪಿಐ ಕಚೇರಿಯಿಂದ ನೋಟಿಸ್‌ ಸಹ ನೀಡಲಾಗಿತ್ತು. ಆದರೆ, ನಿರಂತರವಾಗಿ ಇದು ಮುಂದುವರಿದಿರುವುದರಿಂದ ಕಟ್ಟುನಿಟ್ಟಿನ ಕ್ರಮಕ್ಕೆ ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ.

----

ಶಿವಮೊಗ್ಗ ಜಿಲ್ಲೆಯಲ್ಲಿ ಕನಿಷ್ಠ 25 ವಿದ್ಯಾರ್ಥಿಗಳ ಸಂಖ್ಯೆ ಹೊಂದಿರದ 27 ಪ್ರೌಢ ಶಾಲೆಗಳಿಗೆ ಈಗಾಗಲೇ ನೋಟಿಸ್‌ ನೀಡಲಾಗಿದೆ. ದಾಖಲಾತಿ ಕಾಯ್ದುಕೊಳ್ಳಲು ವಿಫಲರಾದರೆ ನಿಯಮದಂತೆ ಕ್ರಮಕೈಗೊಳ್ಳುವ ಮುನ್ನೆಚ್ಚರಿಕೆಯನ್ನೂ ನೀಡಲಾಗಿದೆ. ಈ ಬಾರಿಯೂ ಆ ಶಾಲೆಗಳ ಪ್ರವೇಶಾತಿಯಲ್ಲಿ ಸುಧಾರಣೆ ಕಾಣದಿದ್ದರೆ ಅವುಗಳ ಮಾನ್ಯತೆಯನ್ನು ಈ ವರ್ಷವೇ ರದ್ದುಪಡಿಸಲಾಗುವುದು.

- ಮಂಜುನಾಥ್‌, ಡಿಡಿಪಿಐ, ಶಿವಮೊಗ್ಗ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳ ಜ್ಞಾನಾರ್ಜನೆಗೆ ಗುಣಾತ್ಮಕ, ಮೌಲ್ಯಯುತ ಚಿಂತನೆ ಅಗತ್ಯ: ಆರ್.ಎ.ನಾಗಣ್ಣ
ಮಕ್ಕಳಿಗೆ ಬುದ್ಧನ ಜೀವನ, ಸಾಧನೆ ತಿಳಿಸಿದರೆ ಸಮಾಜಕ್ಕೆ ಒಳಿತು