ಶಾಲೆಗಳಲ್ಲಿ ಸ್ಕೌಟ್ಸ್, ಗೈಡ್ಸ್ ಕಡಿಮೆಯಾಗುತ್ತಿದೆ: ಮುರಳೀಧರ ಹಾಲಪ್ಪ

KannadaprabhaNewsNetwork |  
Published : Jan 19, 2024, 01:46 AM IST
ರಸ್ತೆ ಸುರಕ್ಷತಾ ಸಪ್ತಾಹ | Kannada Prabha

ಸಾರಾಂಶ

ತುಮಕೂರಿನಲ್ಲಿ ರಸ್ತೆ ಸುರಕ್ಷತಾ ಸಪ್ತಾಹ’ ಮತ್ತು ದ್ವಿತೀಯ ಸೋಪಾನ ಟೆಸ್ಟಿಂಗ್ ಕ್ಯಾಂಪ್‌ಗೆ ಮುರಳೀಧರ ಹಾಲಪ್ಪ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ತುಮಕೂರು

ಶಾಲೆಗಳಲ್ಲಿ ಸ್ಕೌಟ್ಸ್, ಗೈಡ್ಸ್ ಮತ್ತು ಕಬ್ಸ್ ಕಡಿಮೆಯಾಗುತ್ತಿದ್ದು, ಈ ಬಗ್ಗೆ ಶಾಲೆಗಳಲ್ಲಿ ಅರಿವು ಮೂಡಿಸುವಂತಹ ಕೆಲಸ ಆಗಬೇಕು, ಇದರಿಂದ ಜೀವನದಲ್ಲಿ ಶಿಸ್ತು ಮತ್ತು ನಿರ್ದಿಷ್ಟ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರಳೀಧರ ಹಾಲಪ್ಪ ತಿಳಿಸಿದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ತುಮಕೂರು ಹಾಗೂ ಜಿಲ್ಲಾ ನಗರ ಪೊಲೀಸ್ ಮತ್ತು ತಾಲೂಕು ಶಾಲಾ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಟೌನ್‌ಹಾಲ್ ವೃತ್ತದಿಂದ ಏರ್ಪಡಿಸಲಾಗಿದ್ದ ‘ರಸ್ತೆ ಸುರಕ್ಷತಾ ಸಪ್ತಾಹ’ ಮತ್ತು ದ್ವಿತೀಯ ಸೋಪಾನ ಟೆಸ್ಟಿಂಗ್ ಕ್ಯಾಂಪ್‌ಗೆ ಚಾಲನೆ ನೀಡಿ ಮಾತನಾಡಿದರು.

ರಸ್ತೆ ಸುರಕ್ಷತೆ ಬಗ್ಗೆ, ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಹೇಳಿದರು.

ಶಾಲಾ ಸಮಯದಲ್ಲಿ ನಾವೂ ಕೂಡ ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿದ್ದು ಶಿಸ್ತು ಕಲಿತಿದ್ದೇವೆ. ತಾವೂ ಸಹ ಜವಾಬ್ದಾರಿಯಿಂದ ಶಿಸ್ತು ಕಲಿಯಬೇಕಾಗಿದೆ. ಹಿಂದೆ ಮಧುಗಿರಿಯಲ್ಲಿ ತಹಸೀಲ್ದಾರ್ ಆಗಿದ್ದಂತಹ ಕಾಳಿಂಗ ಅವರು ಈಗಲೂ ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ರಾಜ್ಯ ಮತ್ತು ಏಷ್ಯಾ ಮಟ್ಟದಲ್ಲಿ ಅತ್ಯುತ್ತಮವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೊಂಡಜ್ಜಿ ಬಸಪ್ಪನವರ ಕುಂಟುಂಬವನ್ನು ನಾವು ಈಗಲೂ ಸದಾ ಸ್ಮರಿಸುತ್ತೇವೆ. ಮಾಜಿ ಸಚಿವರಾದ ಪಿ.ಜಿ.ಆರ್‌. ಸಿಂಧ್ಯ ಮತ್ತಿತರೆ ಅನೇಕರು ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ಈಗಲೂ ಉತ್ತಮವಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.

ಸ್ಕೌಟ್ಸ್ ಮತ್ತು ಗೈಡ್ಸ್ ಸೇರ್ಪಡೆಯಿಂದ ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನದ ಜತೆಗೆ ಕಲಿಕೆಯಲ್ಲೂ ಪ್ರಗತಿ ಸಾಧಿಸಲು ಸಾಧ್ಯ. ಹಾಗಾಗಿ ಎಲ್ಲಾ ಶಾಲಾ ಮಕ್ಕಳು ಸ್ಕೌಟ್ಸ್ ಮತ್ತು ಗೈಡ್ಸ್‌ ಸೇರ್ಪಡೆಗೊಳ್ಳಲು ಮುಂದಾಗಬೇಕು ಎಂದು ತಿಳಿಸಿದರು.

ತುಮಕೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಸೂರ್ಯಕಲಾ ಮಾತನಾಡಿ, ಜೀವ ಅತ್ಯಮೂಲ್ಯ ಆದುದರಿಂದ ಪ್ರತಿಯೊಬ್ಬರೂ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವ ಅಗತ್ಯವಿದೆ ಎಂದರು.

ಸುಂದರ ಬದುಕು ಹಾಗೂ ಆರೋಗ್ಯಕರ ಸಮಾಜ ಕಟ್ಟುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್‌ನ ಶಿಸ್ತು ಮತ್ತು ಕೌಶಲ್ಯದ ಪಾತ್ರ ಮಹತ್ವದ್ದಾಗಿದೆ ಎಂದರು. ಮಕ್ಕಳು ನಾಲ್ಕು ಗೋಡೆಗಳ ನಡುವೆ ಓದು-ಬರಹ ಕಲಿಯುವುದರ ಜತೆಗೆ ನಿಸರ್ಗದ ಮಡಿಲಲ್ಲಿ ಒಂದಾಗಿ ಬೆರೆತು, ಸಮನ್ವಯದಿಂದ ಬಾಳಲು ಕಲಿಯುವಂತೆ ಪ್ರೇರಿಸುವ ಕಾರ್ಯಕ್ರಮ ಹೆಚ್ಚಾಗಿ ನಡೆಯಬೇಕಿದೆ ಎಂದು ಸಲಹೆ ನೀಡಿದರು.

ಮುಂದಿನ ಪೀಳಿಗೆಗೆ ಉತ್ತಮ ನಾಗರಿಕರನ್ನು ನಿರ್ಮಾಣ ಮಾಡುವ ಕೆಲಸ ಸ್ಕೌಟ್ಸ್ ಮತ್ತು ಗೈಡ್ಸ್ ನಿಂದಾಗಬೇಕು. ಮನುಷ್ಯನಿಗೆ ಸಂತೋಷ ಮತ್ತು ಆನಂದ ಸ್ಕೌಟ್ಸ್ ಮತ್ತು ಗೈಡ್ಸ್‌ನಿಂ ಸಿಗಲು ಸಾಧ್ಯ ಎಂದರು.

ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಉಪ್ಪಾರಹಳ್ಳಿ ಕುಮಾರ್ ಮಾತನಾಡಿ, ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ ಬಗ್ಗೆ ಸ್ಕೌಟ್ಸ್ ಮತ್ತು ಗೈಡ್ಸ್‌ನ ವಿದ್ಯಾರ್ಥಿಗಳು ಜಾಗೃತಿ ಮೂಡಿಸುತ್ತಿದ್ದು, ವಾಹನ ಚಾಲಕರು ತಮ್ಮ ವಾಹನಗಳನ್ನು ರಸ್ತೆ ನಿಯಮಗಳನ್ನು ಪಾಲಿಸುವ ಮೂಲಕ ಚಲಾಯಿಸಿ ಸುರಕ್ಷತೆ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್‌ನ ಸುಮಾರು ೨೫೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಗರದ ಟೌನ್ ಹಾಲ್ ವೃತ್ತದಿಂದ ಚರ್ಚ್ ಸರ್ಕಲ್ ಮೂಲಕ ಸೆಂಟ್ ಮೇರಿಸ್ ಶಾಲೆಯವರೆಗೆ ವಾಹನ ಚಾಲನೆ ಮಾಡುವಾಗ ಮೊಬೈಲ್ ಬಳಸದಿರಿ ಸಂಚಾರಿ ನಿಯಮ ಪಾಲಿಸಿ ಎಂಬ ನಾಮಫಲಕಗಳನ್ನು ಹಿಡಿದು ಜಾಗೃತಿ ಮೂಡಿಸಿ, ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಗೆ ದ್ವಿತೀಯ ಸೋಪಾನ ಟೆಸ್ಟಿಂಗ್ ಕ್ಯಾಂಪನ್ನು ಯಶಸ್ವಿಯಾಗಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ನಗರ ಪೊಲೀಸ್ ವೃತ್ತ ನಿರೀಕ್ಷಕರು, ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷ ಶ್ರೀನಿವಾಸ್ ಶೆಟ್ರು, ಚಂದ್ರಶೇಖರ್, ಜಿಲ್ಲಾ ಸ್ಥಾನಿಕ ಆಯುಕ್ತ ಈಶ್ವರಯ್ಯ, ತಾಲ್ಲೂಕು ದೈಹಿಕ ಶಿಕ್ಷಣ ಅಧಿಕಾರಿ ಪರಮೇಶ್ವರ್, ಜಿಲ್ಲಾ ಸಂಸ್ಥೆಯು ಸಂಘಟಕ ನವೀನ್ ಕುಮಾರ್, ಎಡಿಸಿಗಳಾದ ಚಂದ್ರಶೇಖರ್, ಬಿ.ಟಿ. ಸಿಂದಗಿಕರ್, ಪೊಲೀಸ್ ಇಲಾಖೆಯ ಅಧಿಕಾರಿಗಳು ತಾಲೂಕು ಸಂಸ್ಥೆಯ ಎಲ್ಲಾ ಪದಾಧಿಕಾರಿಗಳು ವಿವಿಧ ಶಾಲೆಗಳಿಂದ ಬಂದಿದ್ದ ಸ್ಕೌಟ್ ಗೈಡ್ ವಿದ್ಯಾರ್ಥಿಗಳು, ದಳ ನಾಯಕ ನಾಯಕಿಯರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಯೋಜನೆಗೆ ಭೂಮಿ ನೀಡಲು ರಾಜ್ಯ ಹಿಂದೇಟು
ಸಮಸ್ಯೆ ಬಗೆ ಹರಿಸದಿದ್ದರೇ ತೀವ್ರ ಹೋರಾಟ