ಭದ್ರಾವತಿ: ಜಮೀನಿಗೆ ವಿದ್ಯುತ್ ಪರಿವರ್ತಕ (ಟ್ರಾನ್ಸ್ ಫಾರ್ಮಾರ್)ದಿಂದ ವಿದ್ಯುತ್ ಪೂರೈಸಿಕೊಳ್ಳುವ ವಿಚಾರದಲ್ಲಿ ಅಕ್ಕಪಕ್ಕದ ಜಮೀನಿನವರ ನಡುವೆ ಜಗಳ ನಡೆದು ವಿಕೋಪಕ್ಕೆ ತಿರುಗಿ ಹಲ್ಲೆ ನಡೆದಿರುವ ಪರಿಣಾಮ ಗ್ರಾಪಂ ಮಾಜಿ ಸದಸ್ಯನೋರ್ವ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.
ಘಟನೆ ವಿವರ:
ಮೃತ ಶಾಂತಕುಮಾರ್ ಹಾಗೂ ಲೇಪಾಕ್ಷಿ ಈ ಎರಡು ಕುಟುಂಬಸ್ಥರ ಜಮೀನು ಅಕ್ಕಪಕ್ಕದಲ್ಲಿವೆ. ಶಾಂತಕುಮಾರ್ ಅವರ ಜಮೀನಿನಲ್ಲಿ ವಿದ್ಯುತ್ ಪರಿವರ್ತಕವಿದ್ದು, ಈ ಪರಿವರ್ತಕದ ಮೂಲಕ ಲೇಪಾಕ್ಷಿ ಕುಟುಂಬದ ಜಮೀನಿಗೂ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಈ ಪರಿವರ್ತಕ ಹಾಳಾಗಿದ್ದು, ಈ ವಿಚಾರದಲ್ಲಿ ಸಂಜೆ ಜಮೀನಿನಲ್ಲಿಯೇ ಗಲಾಟೆಯಾಗಿದೆ. ಕೈ ಕೈ ಮಿಲಾವಣೆಯಾಗಿದೆ. ತದನಂತರ ಎಮ್ಮೆದೊಡ್ಡಿ ಗ್ರಾಮದ ಮೊರಾರ್ಜಿ ದೇಸಾಯಿ ಶಾಲೆ ಸಮೀಪ ಎರಡೂ ಗುಂಪುಗಳ ನಡುವೆ ಮಾರಾಮಾರಿಯಾಗಿದೆ. ಇದು ವಿಕೋಪಕ್ಕೆ ತಿರುಗಿ ಮಚ್ಚಿನಿಂದ ಶಾಂತಕುಮಾರ್ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಶಾಂತಕುಮಾರ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಅಸುನೀಗಿದ್ದಾರೆ.ತದನಂತರ ಮೃತ ಶಾಂತಕುಮಾರ್ ಅವರ ಕಡೆಯವರಿಂದ ಲೇಪಾಕ್ಷಿ ಮನೆಗೆ ಬೆಂಕಿ ಹಚ್ಚಲು ಯತ್ನಿಸಲಾಗಿದೆ. ಮನೆಗೆ ಹೊತ್ತಿದ್ದ ಬೆಂಕಿ ನಂದಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಎರಡು ಬೈಕ್ಗಳನ್ನು ಜಖಂಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ಘಟನೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮದಲ್ಲಿ ಬಿಗಿ ಪೊಲೀಸ್ ಪಹರೆ ಹಾಕಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿಯೇ ಬೀಡುಬಿಟ್ಟಿದ್ದಾರೆ.