)
ಚಿಕ್ಕಮಗಳೂರು: ಮೊಬೈಲ್ ಫೋನ್ ವಿಚಾರವಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿ ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ನಗರದ ಆದಿಶಕ್ತಿ ನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ. ಆದಿಶಕ್ತಿ ನಗರದ ಈಶ್ವರ್ ಸಾಮಿಲ್ನಲ್ಲಿ ಕೂಲಿ ಕೆಲಸ ಮಾಡಿಕೊಂಡು ಅಲ್ಲಿನ ಕೊಠಡಿಯಲ್ಲಿ ವಾಸಿಸುತ್ತಿದ್ದ ವ್ಯಕ್ತಿಯೊಬ್ಬರ ಮೊಬೈಲ್ನ್ನು ಪಕ್ಕದ ಕೊಠಡಿಯಲ್ಲಿ ವಾಸಿಸುತ್ತಿದ್ದ ಬಿಶಾಲ್ ಗುಪ್ತ ಎಂಬಾತ ತೆಗೆದುಕೊಂಡು ಹೋಗಿದ್ದ ಎನ್ನಲಾಗಿದೆ. ಮೊಬೈಲ್ ವಾಪಸ್ ಕೇಳಲು ಹೋದಾಗ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಆರೋಪಿ ಬಿಶಾಲ್ ಗುಪ್ತ ಚಾಕುವಿನಿಂದ ದೂರುದಾರನ ಎಡ ಕೆನ್ನೆ, ಕುತ್ತಿಗೆ ಹಾಗೂ ಬೆನ್ನಿನ ಭಾಗಕ್ಕೆ ಚುಚ್ಚಿ ಗಾಯಗೊಳಿಸಿದ್ದಾನೆ. ರಕ್ತಸ್ರಾವದಿಂದ ಬಳಲುತ್ತಿದ್ದ ಗಾಯಾಳುವನ್ನು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.