ರಸ್ತೆ ಸುರಕ್ಷತಾ ಸಮಿತಿ ಸಭೆ
ಜಿಲ್ಲೆಯಲ್ಲಿ ಸರಕು ಸಾಗಣಿಕೆ ವಾಹನಗಳಲ್ಲಿ ಸರಕು ಮತ್ತು ಸಾಮಗ್ರಿಗಳ ಓವರ್ ಲೋಡ್ ಕಂಡುಬಂದಲ್ಲಿ ಕೂಡಲೇ ಪ್ರಕರಣ ದಾಖಲಿಸುವಂತೆ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ತಪಾಸಣೆಗಳನ್ನು ಕೈಗೊಳ್ಳುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ನಿರ್ದಿಷ್ಟ ಒಂದು ರಸ್ತೆಯಲ್ಲಿ ಮಾತ್ರ ತಪಾಸಣೆಗಳನ್ನು ಕೈಗೊಳ್ಳದೇ ಎಲ್ಲಾ ಪ್ರಮುಖ ರಸ್ತೆಗಳಲ್ಲಿ ನಿಯಮಿತವಾಗಿ ತಪಾಸಣೆಗಳನ್ನು ಕೈಗೊಂಡು ನಿಗದಿತ ಮಿತಿಗಿಂತ ಹೆಚ್ಚಿನ ಸರಕು ಸಾಮಗ್ರಿ ಸಾಗಿಸುವ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಬೇಕು. ಖಾಸಗಿ ಸಾರಿಗೆ ಬಸ್ಗಳ ಡಿಕ್ಕಿಯಲ್ಲಿ ಪ್ರಯಾಣಿಕರ ಲಗೇಜ್ ಹೊರತುಪಡಿಸಿ ಇತರ ಸಾಮಗ್ರಿಗಳನ್ನು ಸಾಗಿಸುವುದರ ಬಗ್ಗೆ ವ್ಯಾಪಕ ತಪಾಸಣೆಗಳನ್ನು ನಡೆಸುವಂತೆ ಮತ್ತು ದೂರದ ಸ್ಥಳಗಳಿಗೆ ಪ್ರಯಾಣಿಸುವ ಬಸ್ ಗಳಲ್ಲಿ ಇಬ್ಬರು ಚಾಲಕರು ಇರುವ ಬಗ್ಗೆ ತಪಾಸಣೆ ನಡೆಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಇತ್ತೀಚೆಗೆ ಕುಮಟಾದಲ್ಲಿ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿದ್ದು ಅಗತ್ಯವಿರುವೆಡೆಗಳಲ್ಲಿ ಬೀದಿದೀಪಗಳನ್ನು ಅಳವಡಿಸಬೇಕು, ರಸ್ತೆಗಳಿಗೆ ಲೈನ್ ಮಾರ್ಕ್ ಮತ್ತು ಕ್ಯಾಟ್ ಐ ಗಳನ್ನು ಅಳವಡಿಸಬೇಕು. ಹೆದ್ದಾರಿಯ ಪಕ್ಕದಲ್ಲಿ ಗುಡ್ಡಗಳಿಂದ ಜಲಪಾತದ ರೀತಿಯಲ್ಲಿ ನೀರು ಬೀಳುವ ಪ್ರದೇಶದಲ್ಲಿ ಸಾರ್ವಜನಿಕರು ರಸ್ತೆಯಲ್ಲಿಯೇ ವಾಹನಗಳನ್ನು ನಿಲ್ಲಿಸಿ ಪೋಟೋ ಮತ್ತು ವೀಡಿಯೋ ಚಿತ್ರೀಕರಣ ಮಾಡುತ್ತಿದ್ದು ಇದರಿಂದ ಅಪಘಾತಗಳಾಗುವ ಸಾಧ್ಯತೆಗಳಿರುವುದರಿಂದ ಇಂತಹ ಪ್ರದೇಶದಲ್ಲಿ ನೋ ಪಾರ್ಕಿಂಗ್ ಸೇರಿದಂತೆ ಇತರೇ ಅಗತ್ಯ ಎಚ್ಚರಿಕೆ ಫಲಕಗಳನ್ನು ಅಳವಡಿಸಿ ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಜಿಪಂ ಸಿಇಓ ಡಾ. ದಿಲೀಷ್ ಶಶಿ, ಎಸ್ಪಿ ದೀಪನ್ ಎಂ.ಎನ್., ಉಪ ವಿಭಾಗಧಿಕಾರಿ ಶ್ರವಣಕುಮಾರ್ ಮತ್ತಿತರರು ಇದ್ದರು.