ಆಲಮಟ್ಟಿ ಜಲಾಶಯ ವ್ಯಾಪ್ತಿಯ ಎಲ್ಲ ಕೆರೆ ತುಂಬಿಸಿ

KannadaprabhaNewsNetwork |  
Published : Feb 08, 2024, 01:31 AM IST
7 ಫೋಟೋ 2ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರೈತ ಸಂಘ ಜಂಟಿಯಾಗಿ ಪ್ರತಿಭಟನೆ. | Kannada Prabha

ಸಾರಾಂಶ

ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯದ ವ್ಯಾಪ್ತಿಗೆ ಬರುವ ಜಿಲ್ಲೆಯ ಎಲ್ಲ ಕೆರೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಅಖಂಡ ಕರ್ನಾಟಕ ರೈತ ಸಂಘ ಜಂಟಿಯಾಗಿ ಬುಧವಾರ ಪ್ರತಿಭಟನೆ ನಡೆಸಿದವು

ಕನ್ನಡಪ್ರಭ ವಾರ್ತೆ ಆಲಮಟ್ಟಿ

ಆಲಮಟ್ಟಿ ಜಲಾಶಯದ ವ್ಯಾಪ್ತಿಗೆ ಬರುವ ಜಿಲ್ಲೆಯ ಎಲ್ಲ ಕೆರೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಅಖಂಡ ಕರ್ನಾಟಕ ರೈತ ಸಂಘ ಜಂಟಿಯಾಗಿ ಬುಧವಾರ ಪ್ರತಿಭಟನೆ ನಡೆಸಿದವು.

ಇಲ್ಲಿಯ ರಾಮಲಿಂಗೇಶ್ವರ ದೇವಸ್ಥಾನದಿಂದ ಮುಖ್ಯ ಎಂಜಿನಿಯರ್ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಅಲ್ಲಿ ಮುಖ್ಯ ಎಂಜಿನಿಯರ್ ಅವರಿಗೆ ಎರಡೂ ಸಂಘಟನೆಗಳು ಮನವಿ ಅರ್ಪಿಸಿದವು.

ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹಾಗೂ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ನಿಂಗರಾಜ ಆಲೂರ ಮಾತನಾಡಿ, ಆಲಮಟ್ಟಿ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸಿ ಜಿಲ್ಲೆಯ ಎಲ್ಲಾ ಕೆರೆಗಳನ್ನು ಭರ್ತಿ ಮಾಡಬೇಕು. ಈ ಮೊದಲು ಹರಿಸಿದ ನೀರಿನಿಂದ ಕೆರೆಗಳ ಸಾಮರ್ಥ್ಯದ ಶೇ.30ರಷ್ಟು ಮಾತ್ರ ಕೆರೆಗಳು ಭರ್ತಿಯಾಗಿವೆ. ಫೆಬ್ರುವರಿಯಲ್ಲಿಯೇ ಬಿಸಿಲಿನ ಪ್ರಖರತೆ ಹೆಚ್ಚಿದೆ. ಅಂತರ್ಜಲ ಮಟ್ಟ ಕುಸಿಯುತ್ತಿದೆ. ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗಿದೆ. ಯಾವುದೇ ನೆಪ ಹೇಳದೆ ಕಾಲುವೆಗೆ ನೀರು ಹರಿಸಬೇಕು. ಒಂದು ವೇಳೆ ಹರಿಸದಿದ್ದರೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆ ವೇಳೆ ಕೆಬಿಜೆಎನ್‌ಎಲ್ ಅಧಿಕಾರಿ ಹಾಗೂ ರೈತರ ಮಧ್ಯೆ ವಾಗ್ವಾದ ನಡೆಯಿತು. ಪ್ರತಿಭಟನೆ ಮುಂದುವರಿದಾಗ ಮುಖ್ಯ ಎಂಜಿನಿಯರ್ ಎಚ್.ಎನ್. ಶ್ರೀನಿವಾಸ ಪ್ರಾದೇಶಿಕ ಆಯುಕ್ತರೊಂದಿಗೆ ಮಾತನಾಡಿ, ಫೆ.12 ರಂದು ನೀರು ಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ನೀರು ಹರಿಸದಿದ್ದರೆ ಫೆ.13 ರಿಂದಲೇ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ರೈತ ಮುಖಂಡರು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಸದಾಶಿವ ಬರಟಗಿ, ರೈತ ಸಂಘದ ತಾಲೂಕು ಘಟಕದ ಅಧ್ಯಕ್ಷ ಸೀತಪ್ಪ ಗಣಿ, ರಾಚಪ್ಪ ಉಕ್ಕಲಿ, ವೆಂಕಟೇಶ ವಡ್ಡರ, ಹೊನಕೇರಪ್ಪ ತೆಲಗಿ, ಲಕ್ಷ್ಮಣಗೌಡ ಬಿರಾದಾರ, ಮಾಧುರಾಯಗೌಡ ಬಿರಾದಾರ, ಸಂತೋಷ ಪಾಟೀಲ, ಈರಣ್ಣ ದೇವರಗುಡಿ, ವಿಠ್ಠಲ ಬಿರಾದಾರ, ರಮೇಶ ಗೌಡರ, ಸಂತೋಷ ಪಾಟೀಲ, ಸುಭಾಷ ಚೋಪಡೆ, ರಾಜು ನದಾಫ್, ಲಕ್ಷ್ಮಣ, ರಾಮಣ್ಣ, ಪಾರ್ವತಿ ಲಮಾಣಿ, ಶಾಂತಾಬಾಯಿ ಮಡಿವಾಳರ, ತಾಯವ್ವ ಸೇರಿದಂತೆ ಹಲವರು ಇದ್ದರು.

PREV

Recommended Stories

ಬಿಆರ್‌ಎಲ್ ಆಧುನಿಕ ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಚಿರಕಾಲ ಉಳಿಯುವ ಆಪ್ತಭಾವದ ಕವಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್‌