ಕನ್ನಡಪ್ರಭ ವಾರ್ತೆ ಆಲಮಟ್ಟಿ
ಇಲ್ಲಿಯ ರಾಮಲಿಂಗೇಶ್ವರ ದೇವಸ್ಥಾನದಿಂದ ಮುಖ್ಯ ಎಂಜಿನಿಯರ್ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಅಲ್ಲಿ ಮುಖ್ಯ ಎಂಜಿನಿಯರ್ ಅವರಿಗೆ ಎರಡೂ ಸಂಘಟನೆಗಳು ಮನವಿ ಅರ್ಪಿಸಿದವು.
ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹಾಗೂ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ನಿಂಗರಾಜ ಆಲೂರ ಮಾತನಾಡಿ, ಆಲಮಟ್ಟಿ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸಿ ಜಿಲ್ಲೆಯ ಎಲ್ಲಾ ಕೆರೆಗಳನ್ನು ಭರ್ತಿ ಮಾಡಬೇಕು. ಈ ಮೊದಲು ಹರಿಸಿದ ನೀರಿನಿಂದ ಕೆರೆಗಳ ಸಾಮರ್ಥ್ಯದ ಶೇ.30ರಷ್ಟು ಮಾತ್ರ ಕೆರೆಗಳು ಭರ್ತಿಯಾಗಿವೆ. ಫೆಬ್ರುವರಿಯಲ್ಲಿಯೇ ಬಿಸಿಲಿನ ಪ್ರಖರತೆ ಹೆಚ್ಚಿದೆ. ಅಂತರ್ಜಲ ಮಟ್ಟ ಕುಸಿಯುತ್ತಿದೆ. ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗಿದೆ. ಯಾವುದೇ ನೆಪ ಹೇಳದೆ ಕಾಲುವೆಗೆ ನೀರು ಹರಿಸಬೇಕು. ಒಂದು ವೇಳೆ ಹರಿಸದಿದ್ದರೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಸಿದರು.ಪ್ರತಿಭಟನೆ ವೇಳೆ ಕೆಬಿಜೆಎನ್ಎಲ್ ಅಧಿಕಾರಿ ಹಾಗೂ ರೈತರ ಮಧ್ಯೆ ವಾಗ್ವಾದ ನಡೆಯಿತು. ಪ್ರತಿಭಟನೆ ಮುಂದುವರಿದಾಗ ಮುಖ್ಯ ಎಂಜಿನಿಯರ್ ಎಚ್.ಎನ್. ಶ್ರೀನಿವಾಸ ಪ್ರಾದೇಶಿಕ ಆಯುಕ್ತರೊಂದಿಗೆ ಮಾತನಾಡಿ, ಫೆ.12 ರಂದು ನೀರು ಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ನೀರು ಹರಿಸದಿದ್ದರೆ ಫೆ.13 ರಿಂದಲೇ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ರೈತ ಮುಖಂಡರು ಎಚ್ಚರಿಕೆ ನೀಡಿದರು.