ರಾಜ್ಯ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಆಕ್ಷೇಪ
ಕನ್ನಡಪ್ರಭ ವಾರ್ತೆ ತುಮಕೂರುರಾಜ್ಯ ಸರ್ಕಾರವು ರಾಜ್ಯದ ಖಾಸಗಿ ಅನುದಾನಿತ ಶಾಲಾಕಾಲೇಜುಗಳಲ್ಲಿ ೨೦೧೬ನೇ ಶೈಕ್ಷಣಿಕ ಸಾಲಿನಿಂದ ಖಾಲಿ ಇರುವ ಬೋಧಕ ಹುದ್ದೆಗಳನ್ನು ಖಾಲಿಯಾದ ದಿನದಿಂದಲೇ ತುಂಬುವಂತೆ ಕರ್ನಾಟಕ ಉಚ್ಛ ನ್ಯಾಯಾಲಯ ಆದೇಶ ನೀಡಿದರೂ ಸರ್ಕಾರ ಕೇವಲ 2020ನೇ ಸಾಲಿನವರೆಗೆ ಮಾತ್ರ ಬೋಧಕ ಹುದ್ದೆ ಭರ್ತಿ ಮಾಡಲು ಆದೇಶ ನೀಡಿ ನ್ಯಾಯಾಲಯದ ಆದೇಶವನ್ನು ಸಂಪೂರ್ಣ ಪಾಲನೆ ಮಾಡಿಲ್ಲ ಎಂದು ರಾಜ್ಯ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಆಕ್ಷೇಪ ವ್ಯಕ್ತಪಡಿಸಿದೆ.
ಒಕ್ಕೂಟದ ರಾಜ್ಯಾಧ್ಯಕ್ಷ ವೈ.ಎಚ್.ಹುಚ್ಚಯ್ಯನವರ ಅಧ್ಯಕ್ಷತೆಯಲ್ಲಿ ಶನಿವಾರ ನಗರದ ರವೀಂದ್ರ ಕಲಾಮಂದಿರದಲ್ಲಿ ನಡೆದ ಒಕ್ಕೂಟದ ಸಭೆಯಲ್ಲಿ ಈ ಸಂಬಂಧ ವಿವಿಧ ನಿರ್ಣಯಗಳನ್ನು ಕೈಗೊಳ್ಳಲಾಯಿತು.ಸಭೆಯಲ್ಲಿ ಮಾತನಾಡಿದ ಒಕ್ಕೂಟದ ರಾಜ್ಯಾಧ್ಯಕ್ಷ ವೈ.ಎಚ್.ಹುಚ್ಚಯ್ಯ, 2016ನೇ ಶೈಕ್ಷಣಿಕ ಸಾಲಿನಿಂದ ಶಿಕ್ಷಕರನ್ನು ನೇಮಿಸದಿರುವುದರಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯದೆ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡಿಮೆಯಾಗಿ ಅನೇಕ ಶಾಲೆಗಳು ಮುಚ್ಚಲ್ಪಟ್ಟಿವೆ. ಅಲ್ಲದೆ ಖಾಸಗಿ ಶಿಕ್ಷಣ ಸಂಸ್ಥೆಗಳು ಅಭಿವೃದ್ಧಿಪಡಿಸಿದ್ದ ಶಾಲಾ ಕಟ್ಟಡ, ವಾಚನಾಲಯ, ವಿಜ್ಞಾನ ಸಾಮಗ್ರಿಗಳು, ಪೀಠೋಪಕರಣ, ಆಟದ ಮೈದಾನ, ವಿದ್ಯಾರ್ಥಿನಿಲಯಗಳು ನಿರುಪಯೋಗವಾಗಿವೆ. ಇದರಿಂದ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಿಗೆ ಘೋರ ಅನ್ಯಾಯವಾಗಿದೆ.ಆದ್ದರಿಂದ ಸರ್ಕಾರ 2023 ನೇ ಸಾಲಿನವರೆಗೆ ಬೋಧಕ ವರ್ಗದ ಖಾಲಿ ಹುದ್ದೆಗಳಿಗೆ ನೇಮಕ ಮಾಡಿ ಉಚ್ಛ ನ್ಯಾಯಾಲಯದ ಆದೇಶಕ್ಕೆ ಗೌರವ ನೀಡಬೇಕು ಎಂದು ಒತ್ತಾಯಿಸಿದರು.ಸರ್ಕಾರ ಬಂಡವಾಳ ಶಾಹಿಗಳಿಗೆ ಅನುದಾನರಹಿತ ಆಂಗ್ಲ ಮಾಧ್ಯಮ ಶಾಲೆಗಳನ್ನು ತೆರೆಯಲು ಅನುಮತಿ ನೀಡಿ ಹಣ ಸುಲಿಗೆ ಮಾಡಲು ಅವಕಾಶ ನೀಡಿದೆ. ಇಂದು ಶಿಕ್ಷಣ ಕ್ಷೇತ್ರ ಸಾರ್ವತ್ರಿಕ ಶಿಕ್ಷಣವಾಗದೆ ಒಂದು ಉದ್ಯಮವಾಗಿದೆ. ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಶಿಕ್ಷಣ ಗಗನಕುಸುಮವಾಗಿದೆ.ಇದರಿಂದ ಪ್ರತಿಯೊಬ್ಬರೂ ಆಂಗ್ಲ ಮಾಧ್ಯಮ ವ್ಯಾಮೋಹಕ್ಕೆ ಬಲಿಯಾಗುತ್ತಿರುವುದರಿಂದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ೮ನೇ ತರಗತಿಗೆ ದಾಖಲಾತಿ ಪ್ರಮಾಣ ದಿನದಿನಕ್ಕೆ ಕಡಿಮೆಯಾಗುತ್ತಿದೆ. ಆದರೂ ಕನ್ನಡ ಮಾಧ್ಯಮ ಕಲಿಯ ಬಯಸುವ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದು ಸಂವಿಧಾನದ ಆಶಯ ಹಾಗೂ ಸರ್ಕಾರದ ಕರ್ತವ್ಯವಾಗಿದೆ ಎಂದು ಹೇಳಿದರು.ಅಲ್ಪಸಂಖ್ಯಾತ ವರ್ಗದ ಶಿಕ್ಷಣ ಸಂಸ್ಥೆಗಳ ಶಾಲೆಗಳಲ್ಲಿ ಕನಿಷ್ಠ 15 ದಾಖಲಾತಿಗೆ ವಿನಾಯಿತಿ ಇರುವಂತೆ ಕನ್ನಡ ಭಾಷಾ ಮಾಧ್ಯಮ ಶಾಲೆಗಳಿಗೂ ಕನಿಷ್ಠ 15-20 ದಾಖಲಾತಿ ವಿನಾಯಿತಿ ನೀಡಿ ಆದೇಶ ನೀಡಿ ಕನ್ನಡ ಶಾಲೆಗಳನ್ನು ಉಳಿಸಬೇಕು. ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸರ್ಕಾರ ಎರಡು ಜೊತೆ ಸಮವಸ್ತ್ರ, ಶೂಗಳನ್ನು ನೀಡುವಂತೆ ಖಾಸಗಿ ಅನುದಾನಿತ ಶಾಲೆ ಮಕ್ಕಳಿಗೂ ನೀಡಬೇಕು. ಶಾಲೆಗಳಲ್ಲಿ ಬೋಧನೆ ಮಾಡಲು ಕಾಯಂ ಶಿಕ್ಷಕರಿಲ್ಲದೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯದೆ, ದಾಖಲಾತಿ ಕಡಿಮೆಯಾಗುತ್ತಿದೆ. ಸರ್ಕಾರ ಶಿಕ್ಷಕರ ನೇಮಕಾತಿ ಮಾಡುವುದರಿಂದ ವಿದ್ಯಾರ್ಥಿಗಳ ದಾಖಲಾತಿ ಸುಧಾರಿಸಿ ಹೆಚ್ಚಳವಾಗುತ್ತದೆ. ಖಾಸಗಿ ಅನುದಾನಿತ ಶಾಲೆಗಳಲ್ಲಿ ಜವಾನರು ಇಲ್ಲದೆ ಶಾಲಾ ಕೊಠಡಿಗಳ ಸ್ವಚ್ಛತೆ, ಬೆಲ್ ಹೊಡೆಯುವ ಕಾರ್ಯವನ್ನು ವಿದ್ಯಾರ್ಥಿಗಳು ಅಥವಾ ಶಿಕ್ಷಕರು ಮಾಡುತ್ತಾರೆ ಎಂಬ ದೂರುಗಳು ಇವೆ. ಇದನ್ನು ನಿವಾರಿಸಲು ಸರ್ಕಾರ ಅನುದಾನಿತ ಶಾಲೆಗಳಿಗೆ ಜವಾನ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.
ಒಕ್ಕೂಟದ ಗೌರವಾಧ್ಯಕ್ಷ ಎಂ.ಬಸವಯ್ಯ, ಪ್ರಧಾನ ಕಾರ್ಯದರ್ಶಿ ದೇವರಾಜಯ್ಯ, ಉಪಾಧ್ಯಕ್ಷರಾದ ವಿಶ್ವಭಾರತಿ ಮೂರ್ತಿ, ಮರಿಚೆನ್ನಮ್ಮ, ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು. ಸಭೆಯಲ್ಲಿ ವಿವಿಧ ನಿರ್ಣಯ ಕೈಗೊಳ್ಳಲಾಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.