ಧಾರವಾಡ: ತಂದೆಯ ಮರಣದಿಂದ ಧೃತಿಗೆಡದ ಬಾಲಕಿಯೊಬ್ಬಳು ನೋವಿನ ಮಧ್ಯೆಯೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ನವಲಗುಂದ ಪಟ್ಟಣದ ಶಬಾನಾ ಅವರ ಮನೆಗೆ ಬುಧವಾರ ಜಿಲ್ಲಾಧಿಕಾರಿ ದಿವ್ಯಪ್ರಭು ಭೇಟಿ ನೀಡಿ, ವಿದ್ಯಾರ್ಥಿನಿಗೆ ಧೈರ್ಯ ತುಂಬಿ ಅವಳ ಓದಿಗೆ ನೆರವು, ಸಹಕಾರ ನೀಡುವ ಭರವಸೆ ನೀಡಿದರು. ಈ ವೇಳೆ ಶಬಾನಾ ಹಾಗೂ ಅವಳ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ನವಲಗುಂದ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿರುವ ಶಬಾನಾಳ ತಂದೆ ಹಳ್ಳಿ ಹಳ್ಳಿಗಳಿಗೆ ತೆರಳಿ ರಗ್ಗು, ಹಾಸಿಗೆ ಹೊದಿಕೆ, ದಿಂಬು ಮಾರಾಟ ಮಾಡುತ್ತಿದ್ದರು. ತಂದೆಯ ದುಡಿಮೆಯೇ ಇವರ ಕುಟುಂಬಕ್ಕೆ ಆಸರೆಯಾಗಿತ್ತು. ತಾಯಿ ಜನ್ನತಬಿ ಮಾನಸಿಕ ರೋಗಿ. ಅಲ್ಲದೇ ಶಬಾನಾಗೆ ಮೂವರು ಸಹೋದರಿಯರಿದ್ದು, ಬಾಡಿಗೆ ಮನೆಯಲ್ಲಿದ್ದಾರೆ. ಇವರಿಗೆ ಸ್ವಂತ ಮನೆಯೂ ಇಲ್ಲ. ಇಂತಹ ಪರಿಸ್ಥಿತಿಯಲ್ಲಿ ಶಬಾನಾ ತಂದೆ ಮೃತರಾಗಿದ್ದು, ಇಡೀ ಕುಟುಂಬ ಅತಂತ್ರವಾಗಿತ್ತು. ಈ ಎಲ್ಲ ಮಾಹಿತಿಯನ್ನು ಪಡೆದುಕೊಂಡ ಜಿಲ್ಲಾಧಿಕಾರಿ ದಿವ್ಯ ಪ್ರಭು, ಮಾತೃಹೃದಯಿಯಾಗಿ ಶಬಾನಾ ಕುಟುಂಬಕ್ಕೆ ಸರ್ಕಾರದ ನೆರವು ಹಾಗೂ ಮಾನಸಿಕ ಬೆಂಬಲ, ಧೈರ್ಯ ತುಂಬಿದ್ದಾರೆ.
ಏನೇನು ಅನುಕೂಲ?ಇದಲ್ಲದೇ, ಶಾಸಕ ಎನ್.ಎಚ್. ಕೋನರಡ್ಡಿ ಅವರು ಮನೆ, ಆರ್ಥಿಕ ನೆರವಿನ ಭರವಸೆ ನೀಡಿದರು. ಆದ್ಯತೆ ಮೇಲೆ ಆಶ್ರಯ ಮನೆ ಮಂಜೂರಿ ಮಾಡಲಾಗುವುದು. ಫಲಾನುಭವಿ ಪಾಲಿನ ₹1 ಲಕ್ಷ ಹಣವನ್ನು ತಾವು ಇತರ ನೆರವಿನಿಂದ ಸ್ವತಃ ಭರಿಸಿ, ಮುಂದಿನ ಮೂರು ತಿಂಗಳಲ್ಲಿ ಮನೆ ಕಟ್ಟಿಸಿ ಕೊಡುವುದಾಗಿ ಭರವಸೆ ನೀಡಿದರು. ಅಲ್ಲಿ ವರೆಗೆ ಮನೆ ಬಾಡಿಗೆ ಮೊತ್ತವನ್ನು ಸ್ವಂತ ಹಣದಲ್ಲಿ ಕೋನರಡ್ಡಿ ನೀಡಿದರು. ಸದ್ಯಕ್ಕೆ ಆರ್ಥಿಕ ಸಹಾಯವಾಗಲು ಪಶುಪಾಲನೆ ಇಲಾಖೆಯಿಂದ ನಾಟಿ ಕೋಳಿ ಸಾಕಾಣಿಕೆ ಯೋಜನೆಯಡಿ ಶಬಾನಾ ತಾಯಿಯನ್ನು ಫಲಾನುಭವಿಯಾಗಿ ಆಯ್ಕೆ ಮಾಡಿ, ತಕ್ಷಣ 20 ನಾಟಿ ಕೋಳಿ ಮರಿಗಳನ್ನು ಮತ್ತು ಮುಂದಿನ ದಿನಗಳಲ್ಲಿ 80 ನಾಟಿ ಕೋಳಿ ಮರಿಗಳನ್ನು ನೀಡುವುದಾಗಿ ತಿಳಿಸಿದರು.
ಈ ಸಮಯದಲ್ಲಿ ಜಿಪಂ ಸಿಇಒ ಭುವನೇಶ ಪಾಟೀಲ, ನವಲಗುಂದ ತಹಸೀಲ್ದಾರ್ ಸುಧೀರ ಸಾವಕಾರ, ಅಣ್ಣಿಗೇರಿ ತಹಸೀಲ್ದಾರ್ ಎಂ.ಜಿ. ದಾಸಪ್ಪನವರ, ವಿವಿಧ ಇಲಾಖೆ ಅಧಿಕಾರಿಗಳಾದ ಎಸ್.ಆರ್. ಗಣಾಚಾರಿ, ಎಂ.ಬಿ. ಹೊಸಮನಿ, ಗಾಯತ್ರಿ ಪಾಟೀಲ, ಎಂ.ಪಿ. ದ್ಯಾಬೇರಿ, ಎಸ್.ಬಿ. ಮಲ್ಲಾಡದ, ಶರಣು ಪೂಜಾರ, ಶಿವಾನಂದ ತಡಸ, ಹನುಮಂತ ವಾಲಿಕಾರ ಮತ್ತಿತರರು ಇದ್ದರು.