ಕೊಪ್ಪಳ: ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸಂಕಷ್ಟ ಎದುರಾಗಿದೆ ಎನ್ನುವುದು ಶುದ್ಧ ಸುಳ್ಳು. ಈ ಕುರಿತು ಬೆಳಗಾವಿ ಅಧಿವೇಶನದಲ್ಲಿ ಶ್ವೇತಪತ್ರವನ್ನೇ ಹೊರಡಿಸಲಾಗುತ್ತದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ. ರೇವಣ್ಣ ಹೇಳಿದ್ದಾರೆ.
ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಬಡವರ ಕೈಗೆ ನೇರವಾಗಿ ಹಣ ತಲುಪುತ್ತಿದೆ. ಅವರು ಸಹ ವೆಚ್ಚ ಮಾಡುತ್ತಿರುವುದರಿಂದ ರಾಜ್ಯದ ಆದಾಯದಲ್ಲಿ ಹೆಚ್ಚಳವಾಗಿದೆ. ದೇಶದಲ್ಲಿಯೇ ಜಿಎಸ್ಟಿ ಪಾವತಿಯಲ್ಲಿ ರಾಜ್ಯ ನಂಬರ್ 2 ಇದೆ ಎಂದರು.
ಸರ್ಕಾರದ ಇಂಥ ಜನಪರ ಯೋಜನೆಗಳನ್ನು ಬಿಜೆಪಿ ಕೊಡುವುದಿಲ್ಲ, ಬದಲಾಗಿ ಕಿತ್ತುಕೊಳ್ಳುತ್ತದೆ. ಆದರೆ, ಕಾಂಗ್ರೆಸ್ ಸರ್ಕಾರ ಇಂಥ ಸಾಲು ಸಾಲು ಯೋಜನೆಗಳನ್ನು ಮೊದಲಿನಿಂದಲೂ ಕೊಡುತ್ತ ಬಂದಿದೆ. ಇಂದಿರಾ ಗಾಂಧಿ ಅವರ 20 ಅಂಶಗಳ ಕಾರ್ಯಕ್ರಮದಿಂದ ಹಿಡಿದು ದೇವರಾಜು ಅರಸು ಅವರು ಊಳುವವನೇ ಒಡೆಯ, ಬಂಗಾರಪ್ಪ ಅವರ ರೈತರ ಪಂಪ್ಸೆಟ್ಗೆ ಉಚಿತ ವಿದ್ಯುತ್ ಸೇರಿದಂತೆ ಹಲವಾರು ಯೋಜನೆಗಳನ್ನು ಈ ಹಿಂದೆಯೂ ಜಾರಿ ಮಾಡಲಾಗಿದೆ ಎಂದು ಹೇಳಿದರು.ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ರಾಂತಿಕಾರಿ ರೀತಿಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಬರಿ ಘೋಷಣೆ ಮಾಡಿದ್ದಲ್ಲ, ಜಾರಿಯೂ ಮಾಡಿದ್ದಾರೆ. ಇದನ್ನು ಕೆಲವೇ ಕೆಲವರು ಶ್ರೀಮಂತರು ವಿರೋಧ ಮಾಡುತ್ತಿದ್ದಾರೆಯೇ ಹೊರತು, ಬಡವರು ಸ್ವಾಗತಿಸುತ್ತಿದ್ದಾರೆ ಎಂದರು.
ರಾಹುಲ್ ಗಾಂಧಿ ಅಸ್ತು:
ಹಾಸನ ಸಮಾವೇಶದ ಕುರಿತು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಯಾರೋ ಪತ್ರ ಬರೆದಿದ್ದಾರೆ ಎಂದಾಕ್ಷಣ ಅದಕ್ಕೆ ಒತ್ತು ನೀಡುವುದಾಗಲಿ, ಪ್ರತಿಕ್ರಿಯಿಸುವುದಾಗಲಿ ಮಾಡುವುದಿಲ್ಲ. ಅಹಿಂದ ಸಮಾವೇಶ ನಡೆಯುತ್ತದೆ. ಈಗ ಅದನ್ನು ಕಾಂಗ್ರೆಸ್ ಅಡಿಯಲ್ಲಿಯೇ ಮಾಡಲು ಸಹ ಸಮ್ಮತಿ ನೀಡಲಾಗಿದೆ. ಕಾಂಗ್ರೆಸ್ ಎಂದರೆ ಅಹಿಂದ ಪಕ್ಷ, ಅಹಿಂದ ಮತ್ತು ಕಾಂಗ್ರೆಸ್ ಬೇರೆ ಬೇರೆ ಅಲ್ಲವೇ ಅಲ್ಲ ಎಂದರು.