ಅನಾಹುತ ಸಂಭವಿಸಿದಲ್ಲಿ ಅರಣ್ಯಾಧಿಕಾರಿಗಳ ವಿರುದ್ಧ ಎಫ್‌ಐಆರ್: ಸುನಿಲ್ ಕುಮಾರ್

KannadaprabhaNewsNetwork |  
Published : Aug 09, 2026, 02:45 AM IST
ಸುನಿಲ್ ಕುಮಾರ್ | Kannada Prabha

ಸಾರಾಂಶ

ರಸ್ತೆ ಬದಿಯ ಅಪಾಯಕಾರಿ ಮರಗಳ ತೆರವು ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸಿ, ಮುಂದೆ ಮರ ಬಿದ್ದು ಅನಾಹುತ ಸಂಭವಿಸಿದರೆ ಸಂಬಂಧಪಟ್ಟ ಅರಣ್ಯಾಧಿಕಾರಿಗಳ ವಿರುದ್ಧವೇ ಎಫ್‌ಐಆರ್ ದಾಖಲಿಸಲಾಗುವುದು ಎಂದು ಶಾಸಕ ವಿ. ಸುನಿಲ್ ಕುಮಾರ್ ಎಚ್ಚರಿಕೆ ನೀಡಿದರು.

ಕಾರ್ಕಳ: ರಸ್ತೆ ಬದಿಯ ಅಪಾಯಕಾರಿ ಮರಗಳ ತೆರವು ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸಿ, ಮುಂದೆ ಮರ ಬಿದ್ದು ಅನಾಹುತ ಸಂಭವಿಸಿದರೆ ಸಂಬಂಧಪಟ್ಟ ಅರಣ್ಯಾಧಿಕಾರಿಗಳ ವಿರುದ್ಧವೇ ಎಫ್‌ಐಆರ್ ದಾಖಲಿಸಲಾಗುವುದು ಎಂದು ಶಾಸಕ ವಿ. ಸುನಿಲ್ ಕುಮಾರ್ ಎಚ್ಚರಿಕೆ ನೀಡಿದರು.ಕಾರ್ಕಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಮಳೆಹಾನಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಇತ್ತೀಚೆಗೆ ಹೆಬ್ರಿಯಲ್ಲಿ ರಸ್ತೆ ಬದಿಯ ಮರ ಕಾರಿನ ಮೇಲೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉಲ್ಲೇಖಿಸಿದ ಶಾಸಕರು, ಮರ ತೆರವುಗೊಳಿಸಲು ಎಷ್ಟು ಅರ್ಜಿಗಳು ಬಂದಿವೆ, ಅವುಗಳಲ್ಲಿ ಎಷ್ಟು ಅರ್ಜಿಗಳ ವಿಲೇವಾರಿ ಮಾಡಲಾಗಿದೆ ಎಂದು ಅರಣ್ಯಾಧಿಕಾರಿಗಳನ್ನು ಪ್ರಶ್ನಿಸಿದರು.

ಮರ ತೆರವು ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ಉತ್ತರಿಸಿದಾಗ, ‘ತೆರವು ಕಾರ್ಯ ನಡೆಯುತ್ತಿದ್ದರೂ ಮರ ಬಿದ್ದು ಸಾವು ಸಂಭವಿಸಿದ್ದು ಹೇಗೆ? ಮುಂದೆ ಇಂತಹ ನಿರ್ಲಕ್ಷ್ಯದಿಂದ ಅನಾಹುತ ಸಂಭವಿಸಿದರೆ ನಿಮ್ಮ ಮೇಲೆಯೇ ಎಫ್‌ಐಆರ್ ದಾಖಲಿಸಲಾಗುವುದು’ ಎಂದು ಎಚ್ಚರಿಸಿದರು.

ಹೃದಯವಂತಿಕೆಯಿಂದಲೂ ಕಾರ್ಯನಿರ್ವಹಿಸಬೇಕು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಉಡುಪಿ ಜಿಲ್ಲಾ ಪ್ರಾಕೃತಿಕ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಸಚಿವ ಯು.ಟಿ. ಖಾದರ್ ಮಾತನಾಡಿ, ಅಧಿಕಾರಿಗಳು ಬುದ್ಧಿವಂತಿಕೆಯಿಂದ ಮಾತ್ರವಲ್ಲ, ಹೃದಯವಂತಿಕೆಯಿಂದಲೂ ಕಾರ್ಯನಿರ್ವಹಿಸಬೇಕು ಎಂದರು. ಅಧಿಕಾರಿಗಳು ಸರ್ಕಾರದ ಮುಖವಾಣಿಯಂತೆ ಕಾರ್ಯನಿರ್ವಹಿಸುತ್ತಿದ್ದು, ಜನಪ್ರತಿನಿಧಿಗಳು ಮತ್ತು ಜನರ ನಡುವಿನ ಕೊಂಡಿಯಾಗಿದ್ದಾರೆ. ಪ್ರಾಕೃತಿಕ ವಿಕೋಪದಿಂದ ಬಡವರ ಮನೆಗಳಿಗೆ ಹಾನಿಯಾದಾಗ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಇಲಾಖಾ ಪ್ರಕ್ರಿಯೆಯ ಜೊತೆಗೆ ಸಾಂತ್ವನವನ್ನೂ ನೀಡಬೇಕು. ದಿನದ 24 ಗಂಟೆಯೂ ಜನರ ಕರೆಗಳಿಗೆ ಸ್ಪಂದಿಸುವಂತೆ ಸೂಚಿಸಿದರು.ಕಾರ್ಕಳದಲ್ಲಿ ಈ ಬಾರಿ 59 ಮನೆಗಳು ಭಾಗಶಃ ಹಾನಿಗೊಳಗಾಗಿದ್ದು, ಎಲ್ಲ ಮನೆಗಳಿಗೂ ಪರಿಹಾರ ಒದಗಿಸಲಾಗಿದೆ ಎಂದು ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್ ಸಭೆಗೆ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಬಡವರ ಮನೆಗಳೇ ಹೆಚ್ಚಾಗಿ ಹಾನಿಗೊಳಗಾಗುವುದರಿಂದ ಅಗತ್ಯವಿದ್ದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪರಿಹಾರ ಒದಗಿಸುವಂತೆ ಸೂಚಿಸಿದರು.

ವಿಮೆಯ ಸದುಪಯೋಗ ಪಡೆಯಲು ಸೂಚನೆ: ಕೃಷಿ ಇಲಾಖೆಯ ಮಾಹಿತಿ ಪ್ರಕಾರ ಕಾರ್ಕಳದಲ್ಲಿ 4,002 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದ್ದು, ಈವರೆಗೆ ದೊಡ್ಡ ಪ್ರಮಾಣದ ಹಾನಿಯಾಗಿಲ್ಲ. ತೋಟಗಾರಿಕಾ ಬೆಳೆಗಳ 18 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ 6.2 ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ವರದಿ ಸಲ್ಲಿಸಲಾಗಿದೆ. ಈ ಸಾಲಿನಲ್ಲಿ 4,188 ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು. ಹೆಚ್ಚಿನ ರೈತರು ವಿಮೆಯ ಸದುಪಯೋಗ ಪಡೆದುಕೊಳ್ಳುವಂತೆ ಸಚಿವರು ಸೂಚಿಸಿದರು.

ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಸುಮಾರು 700 ಬೀದಿ ನಾಯಿಗಳಿದ್ದು, ಅವುಗಳ ಸಂತಾನ ನಿಯಂತ್ರಣಕ್ಕೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚಿಸಿದರು. ಎನ್‌ಜಿಒಗಳ ಮೂಲಕ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸುವಂತೆ ಅಥವಾ ಪೌರಕಾರ್ಮಿಕರಿಗೆ ತರಬೇತಿ ನೀಡಿ ಪ್ರತ್ಯೇಕ ಸಂಭಾವನೆ ನೀಡುವಂತೆ ಸಲಹೆ ನೀಡಿದರು.

ಕಾರ್ಕಳ ತಾಲೂಕಿನಲ್ಲಿ 342 ತರಗತಿ ಕೊಠಡಿಗಳು ಹಾಗೂ 50 ಆವರಣ ಗೋಡೆಗಳು ಅಪಾಯಕಾರಿಯಾಗಿವೆ ಎಂಬ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚಿಸಿದರು. 232 ಅಂಗನವಾಡಿ ಕೇಂದ್ರಗಳ ಪೈಕಿ ಅಪಾಯಕಾರಿಯಾಗಿದ್ದ ಎರಡು ಕೇಂದ್ರಗಳನ್ನು ಈಗಾಗಲೇ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.ಈ ಬಾರಿ 955 ವಿದ್ಯುತ್ ಕಂಬಗಳು ಹಾನಿಗೊಳಗಾಗಿವೆ ಎಂದು ಮೆಸ್ಕಾಂ ಅಧಿಕಾರಿ ಮಾಹಿತಿ ನೀಡಿದಾಗ, ಕಂಬಗಳ ಗುಣಮಟ್ಟದ ಬಗ್ಗೆ ಸಚಿವರು ಹಾಸ್ಯಮಿಶ್ರಿತವಾಗಿ ಪ್ರಶ್ನಿಸಿ, ದುರಸ್ತಿ ಕಾರ್ಯದ ಬಗ್ಗೆ ಮಾಹಿತಿ ಪಡೆದರು.ಕಾರ್ಕಳ–ಹೆಬ್ರಿ ತಾಲೂಕಿಗೆ ಒಂದೇ ಅಗ್ನಿಶಾಮಕ ಠಾಣೆ ಹಾಗೂ ಒಂದೇ ವಾಹನ ಇರುವುದರಿಂದ ತುರ್ತು ಸಂದರ್ಭಗಳಲ್ಲಿ ಸಮಸ್ಯೆಯಾಗುತ್ತಿದೆ ಎಂದು ಅಗ್ನಿಶಾಮಕ ಠಾಣಾಧಿಕಾರಿ ತಿಳಿಸಿದರು. ಹೆಬ್ರಿಯಲ್ಲಿ ಠಾಣೆ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದ್ದರೂ ಅರಣ್ಯ ಇಲಾಖೆಯ ತೊಡಕಿನಿಂದ ಕಾಮಗಾರಿ ನಡೆದಿಲ್ಲ ಎಂದು ತಿಳಿಸಿದಾಗ, ಈ ವಿಷಯವನ್ನು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ಸಮರ್ಪಕವಾಗಿ ತರುವಂತೆ ಸಚಿವರು ಸೂಚಿಸಿದರು.

ಕಾರ್ಕಳ ನಗರಕ್ಕೆ ನೀರು ಪೂರೈಸುವ ಮುಂಡ್ಲಿ ಡ್ಯಾಂ ಬ್ರಿಡ್ಜ್, ನಿಟ್ಟೆ ಪರಪ್ಪಾಡಿ ಬ್ರಿಡ್ಜ್ ಸೇರಿದಂತೆ ಐದು ಸೇತುವೆಗಳ ದುರಸ್ತಿಗೆ ಎರಡು ವರ್ಷಗಳಿಂದ ಮನವಿ ಸಲ್ಲಿಸಲಾಗುತ್ತಿದೆ ಎಂದು ಪಿಡಬ್ಲ್ಯುಡಿ ಅಧಿಕಾರಿಗಳು ತಿಳಿಸಿದರು. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಹಾಗೂ ಸಮಸ್ಯೆಗಳ ಕುರಿತು ಸಚಿವರು ಮಾಹಿತಿ ಪಡೆದರು. ಪಂಚಾಯಿತಿಗಳಲ್ಲಿ ಅಗತ್ಯ ಕಾಮಗಾರಿಗಳನ್ನು ಹೊರತುಪಡಿಸಿ ಅನಗತ್ಯ ವೆಚ್ಚ ಮಾಡದಂತೆ ಸೂಚಿಸಿದ ಅವರು, ಚುನಾವಣೆ ಬಳಿಕ ಹೊಸ ಪಂಚಾಯತ್ ಆಡಳಿತಕ್ಕೆ ಅಗತ್ಯ ಅನುದಾನ ಉಳಿಯುವಂತೆ ನೋಡಿಕೊಳ್ಳಬೇಕು ಎಂದರು.

ಪೊಲೀಸರ ಕಾರ್ಯವೈಖರಿಗೆ ಅಭಿನಂದನೆ: ಇದೇ ವೇಳೆ ಕಾಪು ತಾಲೂಕಿನ ಮುದರಂಗಡಿಯಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗಳನ್ನು ತ್ವರಿತವಾಗಿ ಪತ್ತೆಹಚ್ಚಿದ ಉಡುಪಿ ಜಿಲ್ಲಾ ಪೊಲೀಸರ ಕಾರ್ಯವೈಖರಿಯನ್ನು ಸಚಿವ ಖಾದರ್ ಅಭಿನಂದಿಸಿದರು.

ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾಡಿನಲ್ಲಿ ವಾಸಿಸುವ ಜನರಿಗೆ ಯಾವುದೇ ತೊಂದರೆಯಾಗದಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.ಸಭೆಯ ಅಧ್ಯಕ್ಷತೆಯನ್ನು ಶಾಸಕ ವಿ. ಸುನಿಲ್ ಕುಮಾರ್ ವಹಿಸಿದ್ದರು. ಕರ್ನಾಟಕ ರಾಜ್ಯ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಅಜಿತ್ ಹೆಗ್ಡೆ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಎಸ್ಪಿ ಹರಿರಾಮ್ ಶಂಕರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಿತವಾದದ್ದೇ ಪ್ರಿಯವಾದರೆ ದೇಹಕ್ಕೂ ಮನಸ್ಸಿಗೂ ಹಿತ: ರಾಘವೇಶ್ವರ ಶ್ರೀ
ಕೆಸರುಗದ್ದೆ ಕ್ರೀಡಾಕೂಟ: ಅಂಕುರ್ ಶಾಲೆ ವಿದ್ಯಾರ್ಥಿಗಳು ಉತ್ತಮ ಸಾಧನೆ