ಕಾರ್ಕಳ: ರಸ್ತೆ ಬದಿಯ ಅಪಾಯಕಾರಿ ಮರಗಳ ತೆರವು ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸಿ, ಮುಂದೆ ಮರ ಬಿದ್ದು ಅನಾಹುತ ಸಂಭವಿಸಿದರೆ ಸಂಬಂಧಪಟ್ಟ ಅರಣ್ಯಾಧಿಕಾರಿಗಳ ವಿರುದ್ಧವೇ ಎಫ್ಐಆರ್ ದಾಖಲಿಸಲಾಗುವುದು ಎಂದು ಶಾಸಕ ವಿ. ಸುನಿಲ್ ಕುಮಾರ್ ಎಚ್ಚರಿಕೆ ನೀಡಿದರು.ಕಾರ್ಕಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಮಳೆಹಾನಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಮರ ತೆರವು ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ಉತ್ತರಿಸಿದಾಗ, ‘ತೆರವು ಕಾರ್ಯ ನಡೆಯುತ್ತಿದ್ದರೂ ಮರ ಬಿದ್ದು ಸಾವು ಸಂಭವಿಸಿದ್ದು ಹೇಗೆ? ಮುಂದೆ ಇಂತಹ ನಿರ್ಲಕ್ಷ್ಯದಿಂದ ಅನಾಹುತ ಸಂಭವಿಸಿದರೆ ನಿಮ್ಮ ಮೇಲೆಯೇ ಎಫ್ಐಆರ್ ದಾಖಲಿಸಲಾಗುವುದು’ ಎಂದು ಎಚ್ಚರಿಸಿದರು.
ಹೃದಯವಂತಿಕೆಯಿಂದಲೂ ಕಾರ್ಯನಿರ್ವಹಿಸಬೇಕು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಉಡುಪಿ ಜಿಲ್ಲಾ ಪ್ರಾಕೃತಿಕ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಸಚಿವ ಯು.ಟಿ. ಖಾದರ್ ಮಾತನಾಡಿ, ಅಧಿಕಾರಿಗಳು ಬುದ್ಧಿವಂತಿಕೆಯಿಂದ ಮಾತ್ರವಲ್ಲ, ಹೃದಯವಂತಿಕೆಯಿಂದಲೂ ಕಾರ್ಯನಿರ್ವಹಿಸಬೇಕು ಎಂದರು. ಅಧಿಕಾರಿಗಳು ಸರ್ಕಾರದ ಮುಖವಾಣಿಯಂತೆ ಕಾರ್ಯನಿರ್ವಹಿಸುತ್ತಿದ್ದು, ಜನಪ್ರತಿನಿಧಿಗಳು ಮತ್ತು ಜನರ ನಡುವಿನ ಕೊಂಡಿಯಾಗಿದ್ದಾರೆ. ಪ್ರಾಕೃತಿಕ ವಿಕೋಪದಿಂದ ಬಡವರ ಮನೆಗಳಿಗೆ ಹಾನಿಯಾದಾಗ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಇಲಾಖಾ ಪ್ರಕ್ರಿಯೆಯ ಜೊತೆಗೆ ಸಾಂತ್ವನವನ್ನೂ ನೀಡಬೇಕು. ದಿನದ 24 ಗಂಟೆಯೂ ಜನರ ಕರೆಗಳಿಗೆ ಸ್ಪಂದಿಸುವಂತೆ ಸೂಚಿಸಿದರು.ಕಾರ್ಕಳದಲ್ಲಿ ಈ ಬಾರಿ 59 ಮನೆಗಳು ಭಾಗಶಃ ಹಾನಿಗೊಳಗಾಗಿದ್ದು, ಎಲ್ಲ ಮನೆಗಳಿಗೂ ಪರಿಹಾರ ಒದಗಿಸಲಾಗಿದೆ ಎಂದು ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್ ಸಭೆಗೆ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಬಡವರ ಮನೆಗಳೇ ಹೆಚ್ಚಾಗಿ ಹಾನಿಗೊಳಗಾಗುವುದರಿಂದ ಅಗತ್ಯವಿದ್ದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪರಿಹಾರ ಒದಗಿಸುವಂತೆ ಸೂಚಿಸಿದರು.ವಿಮೆಯ ಸದುಪಯೋಗ ಪಡೆಯಲು ಸೂಚನೆ: ಕೃಷಿ ಇಲಾಖೆಯ ಮಾಹಿತಿ ಪ್ರಕಾರ ಕಾರ್ಕಳದಲ್ಲಿ 4,002 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದ್ದು, ಈವರೆಗೆ ದೊಡ್ಡ ಪ್ರಮಾಣದ ಹಾನಿಯಾಗಿಲ್ಲ. ತೋಟಗಾರಿಕಾ ಬೆಳೆಗಳ 18 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ 6.2 ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ವರದಿ ಸಲ್ಲಿಸಲಾಗಿದೆ. ಈ ಸಾಲಿನಲ್ಲಿ 4,188 ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು. ಹೆಚ್ಚಿನ ರೈತರು ವಿಮೆಯ ಸದುಪಯೋಗ ಪಡೆದುಕೊಳ್ಳುವಂತೆ ಸಚಿವರು ಸೂಚಿಸಿದರು.
ಕಾರ್ಕಳ ತಾಲೂಕಿನಲ್ಲಿ 342 ತರಗತಿ ಕೊಠಡಿಗಳು ಹಾಗೂ 50 ಆವರಣ ಗೋಡೆಗಳು ಅಪಾಯಕಾರಿಯಾಗಿವೆ ಎಂಬ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚಿಸಿದರು. 232 ಅಂಗನವಾಡಿ ಕೇಂದ್ರಗಳ ಪೈಕಿ ಅಪಾಯಕಾರಿಯಾಗಿದ್ದ ಎರಡು ಕೇಂದ್ರಗಳನ್ನು ಈಗಾಗಲೇ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.ಈ ಬಾರಿ 955 ವಿದ್ಯುತ್ ಕಂಬಗಳು ಹಾನಿಗೊಳಗಾಗಿವೆ ಎಂದು ಮೆಸ್ಕಾಂ ಅಧಿಕಾರಿ ಮಾಹಿತಿ ನೀಡಿದಾಗ, ಕಂಬಗಳ ಗುಣಮಟ್ಟದ ಬಗ್ಗೆ ಸಚಿವರು ಹಾಸ್ಯಮಿಶ್ರಿತವಾಗಿ ಪ್ರಶ್ನಿಸಿ, ದುರಸ್ತಿ ಕಾರ್ಯದ ಬಗ್ಗೆ ಮಾಹಿತಿ ಪಡೆದರು.ಕಾರ್ಕಳ–ಹೆಬ್ರಿ ತಾಲೂಕಿಗೆ ಒಂದೇ ಅಗ್ನಿಶಾಮಕ ಠಾಣೆ ಹಾಗೂ ಒಂದೇ ವಾಹನ ಇರುವುದರಿಂದ ತುರ್ತು ಸಂದರ್ಭಗಳಲ್ಲಿ ಸಮಸ್ಯೆಯಾಗುತ್ತಿದೆ ಎಂದು ಅಗ್ನಿಶಾಮಕ ಠಾಣಾಧಿಕಾರಿ ತಿಳಿಸಿದರು. ಹೆಬ್ರಿಯಲ್ಲಿ ಠಾಣೆ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದ್ದರೂ ಅರಣ್ಯ ಇಲಾಖೆಯ ತೊಡಕಿನಿಂದ ಕಾಮಗಾರಿ ನಡೆದಿಲ್ಲ ಎಂದು ತಿಳಿಸಿದಾಗ, ಈ ವಿಷಯವನ್ನು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ಸಮರ್ಪಕವಾಗಿ ತರುವಂತೆ ಸಚಿವರು ಸೂಚಿಸಿದರು.
ಪೊಲೀಸರ ಕಾರ್ಯವೈಖರಿಗೆ ಅಭಿನಂದನೆ: ಇದೇ ವೇಳೆ ಕಾಪು ತಾಲೂಕಿನ ಮುದರಂಗಡಿಯಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗಳನ್ನು ತ್ವರಿತವಾಗಿ ಪತ್ತೆಹಚ್ಚಿದ ಉಡುಪಿ ಜಿಲ್ಲಾ ಪೊಲೀಸರ ಕಾರ್ಯವೈಖರಿಯನ್ನು ಸಚಿವ ಖಾದರ್ ಅಭಿನಂದಿಸಿದರು.