ಅವೈಜ್ಞಾನಿಕ ರಸ್ತೆ ನಿರ್ಮಿಸಿದರೆ ಅಧಿಕಾರಿ ಮೇಲೆ ಎಫ್ ಐ ಆರ್

KannadaprabhaNewsNetwork |  
Published : Nov 11, 2024, 11:47 PM IST
ಚಿತ್ರದುರ್ಗ ನಾಲ್ಕನೇ ಪುಟದ ಲೀಡ್  | Kannada Prabha

ಸಾರಾಂಶ

FIR against the official if unscientific road is built

-ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷಿತ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

------

ಕನ್ನಡಪ್ರಭವಾರ್ತೆ, ಚಿತ್ರದುರ್ಗ

ಅವೈಜ್ಞಾನಿಕ ರಸ್ತೆ ನಿರ್ಮಾಣ ಹಾಗೂ ಬೇಜವಾಬ್ದಾರಿ ನಿರ್ವಹಣೆಯಿಂದ ಅಪಘಾತಗಳು ಸಂಭವಿಸಿದರೆ, ರಸ್ತೆ ನಿರ್ವಹಣೆಯ ಹೊಣೆ ಹೊತ್ತ ಅಧಿಕಾರಿ ಹಾಗೂ ಗುತ್ತಿಗೆದಾರರನ್ನು ಆರೋಪಿಗಳನ್ನಾಗಿಸಿ ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.

ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ರಸ್ತೆ ಸುರಕ್ಷಿತ ಸಮಿತಿ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಸಮಿತಿ ನೀಡಿದ ಸೂಚನೆಗಳನ್ನು ಅಧಿಕಾರಿಗಳು ತಪ್ಪದೇ ಪಾಲಿಸಬೇಕು. ಜಿಲ್ಲೆಯಲ್ಲಿ ಉಂಟಾಗುತ್ತಿರುವ ಅಪಘಾತಗಳ ಪ್ರಮಾಣ ಇಳಿಕೆಯಾಗಬೇಕು. ರಸ್ತೆ ಸುರಕ್ಷತಾ ನಿಧಿಯಿಂದ ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲಾಗಿರುವ ಅಪಘಾತ ವಲಯಗಳಲ್ಲಿ ಸೂಚನಾ ಫಲಕ, ಮಾರ್ಕಿಂಗ್, ಬ್ಲಿಂಕರ್ಸ್ ಅಳವಡಿಕೆ ಸೇರಿದಂತೆ ಅಗತ್ಯ ರಸ್ತೆ ಸುರಕ್ಷತಾ ಕ್ರಮ ಕೈಗೊಳ್ಳಬೇಕು. ಈ ಹಿಂದೆ ಜರುಗಿದ ಸಭೆಯ ಅನುಪಾಲನಾ ವರದಿ ಸಲ್ಲಿಸದ ಅಧಿಕಾರಿಗಳಿಗೆ ಸಮಿತಿ ವತಿಯಿಂದ ಕಾರಣ ಕೇಳಿ ನೋಟಿಸ್‌ ನೀಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನಿರ್ದೇಶಿಸಿದರು.

ಎಲ್ಲೆಂದರಲ್ಲಿ ಬೀದಿಬದಿ ವ್ಯಾಪಾರ ಮಾಡುವುದರಿಂದ ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ. ನಗರಸಭೆ ಬೀದಿ ವ್ಯಾಪಾರಿಗಳಿಗೆ ವ್ಯವಸ್ಥೆ ಕಲ್ಪಿಸಬೇಕು. ರಾಷ್ಟ್ರೀಯ ಹೆದ್ದಾರಿ ರಸ್ತೆಗಳಲ್ಲಿ ಬೀದಿ ದೀಪಗಳನ್ನು ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

ನಗರಸಭೆಯಿಂದ ಆಟೋ ನಿಲ್ದಾಣಗಳಿಗಾಗಿ 27 ಹಾಗೂ ಬೀದಿ ಬದಿ ವ್ಯಾಪಾರಿಗಳಿಗಾಗಿ 12 ಸ್ಥಳಗಳನ್ನು ಗುರುತಿಸಲಾಗಿದೆ. ಸಾರ್ವಜನಿಕರ ಬೇಡಿಕೆ ಆಧ ರಿಸಿ ಡಿವೈಡರ್ ತೆರವು ಗೊಳಿಸಲಾಗುತ್ತಿದೆ ಎಂದು ನಗರಸಭೆ ಅಧಿಕಾರಿಗಳು ಸಭೆಯಲ್ಲಿ ತಿಳಿಸದರು.

ದಿನಕ್ಕೆ ಸರಾಸರಿ ಒಂದಕ್ಕಿಂತ ಹೆಚ್ಚು ಸಾವು ಅಪಘಾತಗಳಲ್ಲಿ ಸಂಭವಿಸುತ್ತಿದ್ದು, ರಸ್ತೆ ಸರಿಯಿಲ್ಲದ ಕಾರಣದಿಂದ ಶೇ.20 ರಷ್ಟು ಅಪಘಾತಗಳಲ್ಲಿ ವಾಹನ ಸವಾರರು ಸಾವನ್ನಪ್ಪುತ್ತಿದ್ದಾರೆ. ರಸ್ತೆ ನಿರ್ವಹಣೆ ಹೊಣೆಹೊತ್ತ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ತಮ್ಮ ಕರ್ತವ್ಯ ನಿರ್ವಹಿಸಿದರೆ ಈ ಸಾವುಗಳನ್ನು ತಡೆಗಟ್ಟಬಹುದು ಎಂದು ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದರು.

ನಗರದ ಬಿಡಿ ರಸ್ತೆಯ ಮೂಲಕ ಬೆಂಗಳೂರು, ಶಿವಮೊಗ್ಗ ಹಾಗೂ ಚಳ್ಳಕೆರೆ ಮಾರ್ಗಗಳಿಗೆ ಸಂಚರಿಸುವ ಕೆಎಸ್ಆರ್‌ಟಿಸಿ ಹಾಗೂ ಖಾಸಗಿ ಬಸ್‍ಗಳ ಸಂಚಾರ ಮಾರ್ಗ ಬದಲಾವಣೆಗೆ ಸಭೆಯಲ್ಲಿ ತೀರ್ಮಾನಿಸಲಾಯಿತು. 1200ಕ್ಕೂ ಹೆಚ್ಚು ಬಸ್‍ಗಳು ಈ ಮಾರ್ಗಗಳ ಮೂಲಕವೇ ಸಂಚಾರ ನಡೆಸುತ್ತವೆ. ಗಾಂಧಿ ಹಾಗೂ ಎಸ್ಬಿಐ ವೃತ್ತದಲ್ಲಿ ಹೆಚ್ಚಿನ ಸಂಚಾರಿ ದಟ್ಟಣೆ ಉಂಟಾಗುತ್ತಿದೆ. ಇದನ್ನು ತಪ್ಪಿಸಲು ಹಳೆ ರಾಷ್ಟ್ರೀಯ ಹೆದ್ದಾರಿ ಮಾರ್ಗ ಬಳಿಸಿ ಬಸ್‍ಗಳು ಕಾರ್ಯಾಚರಣೆ ನಡೆಸುವಂತೆ ಆದೇಶ ಹೊರಡಿಸಲಾಗುವುದು. ಗಾಂಧಿ ವೃತ್ತದಲ್ಲಿ ಪ್ರತಿಭಟನೆ ಹಾಗೂ ಜಾಥಾ ನಡೆಸಲು ಅನುಮತಿ ನೀಡದಿರಲು ತೀರ್ಮಾನಿಸಲಾಯಿತು.

ಮಕ್ಕಳ ಹಿತದೃಷ್ಟಿಯಿಂದ ಬೈಕ್ ಸವಾರಿಯ ವೇಳೆ 9 ತಿಂಗಳ ಮೇಲ್ಪಟ್ಟ ಹಾಗೂ 4 ವರ್ಷದ ಮಕ್ಕಳಿಗೆ ಶಿಶು ಕವಚ ಕಡ್ಡಾಯಗೊಳಿಸಿದೆ. 4 ಆಸನಗಳ ಮೇಲ್ಪಟ್ಟ ವಾಹನಗಳಲ್ಲಿ ವಿಎಲ್‍ಟಿ (ವೆಹಿಕಲ್ ಲೊಕೇಷನ್ ಟ್ರಾಕಿಂಗ್ ) ಮಹಿಳೆ ಹಾಗೂ ಮಕ್ಕಳ ಹಿತದೃಷ್ಟಿಯಿಂದ ಪ್ಯಾನಿಕ್ ಬಟನ್ ಅಳವಡಿಸುವುದು ಕಡ್ಡಾಯ ಮಾಡಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್.ಎಂ.ಕಾಳೆಸಿಂಗೆ ಸಭೆಯಲ್ಲಿ ಮಾಹಿತಿ ನೀಡಿದರು.

ಸಂಚಾರಿ ಪೊಲೀಸ್ ಇನ್ಸಪೆಕ್ಟರ್ ರಾಜು ಅವರು ನಗರ ಸಂಚಾರಿ ಸುಧಾರಣೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಭೆಯಲ್ಲಿ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಲೋಕೋಪಯೋಗಿ ಕಾರ್ಯಪಾಲಕ ಅಭಿಯಂತರ ಮೋನಪ್ಪ, ಡಿವೈಎಸ್ಪಿಗಳಾದ ದಿನಕರ್, ರಾಜಣ್ಣ, ಶಿವಕುಮಾರ್ ಸೇರಿದಂತೆ ಹೆದ್ದಾರಿ ಪ್ರಾಧಿಕಾರ ಹಾಗೂ ಇತರೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

--------------

ಪೋಟೋ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿದರು.

-----------

ಫೋಟೋ:

11 ಸಿಟಿಡಿ9

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ